
ಬೆಂಗಳೂರು (ಜ.11): ಸಿಲಿಕಾನ್ ಸಿಟಿ ನಿವಾಸಿಗಳೇ ಎಚ್ಚರ! ನೀವು ಮನೆ ಹೊರಗಡೆ ಬೈಕ್ ನಿಲ್ಲಿಸಿ ನೆಮ್ಮದಿಯಿಂದ ನಿದ್ರೆಗೆ ಜಾರುವುದನ್ನೇ ಖದೀಮರು ಕಾದು ಕುಳಿತಿರುತ್ತಾರೆ. ನಗರದ ಚನ್ನಸಂದ್ರ ಮತ್ತು ಕಸ್ತೂರಿ ನಗರ ವ್ಯಾಪ್ತಿಯಲ್ಲಿ ಇಂತಹ ಕಳ್ಳತನ ಪ್ರಕರಣಗಳು ಸರಣಿಯಾಗಿ ನಡೆಯುತ್ತಿದ್ದು, ವಾಹನ ಸವಾರರ ನಿದ್ದೆಗೆಡಿಸಿದೆ.
ಜೂನ್ 9ರಂದು ಚನ್ನಸಂದ್ರ ಮತ್ತು ಕಸ್ತೂರಿ ನಗರದಲ್ಲಿ ಈ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಬೈಕ್ನಲ್ಲಿ ಬರುವ ಕಳ್ಳರು ಮೊದಲು ಮನೆ ಮುಂದೆ ಒಂದು ರೌಂಡ್ ಹಾಕಿ, ಯಾರಾದರೂ ಎಚ್ಚರವಾಗಿದ್ದಾರಾ ಅಥವಾ ಸಿಸಿಟಿವಿ ಇದೆಯೇ ಎಂದು ಗಮನಿದ್ದಾರೆ. ಯಾರೂ ಇಲ್ಲ ಎಂಬುದು ಖಾತ್ರಿಯಾಗುತ್ತಿದ್ದಂತೆಯೇ, ಕ್ಷಣಾರ್ಧದಲ್ಲಿ ಮನೆ ಮುಂದೆ ಪಾರ್ಕ್ ಮಾಡಿದ್ದ ಹೋಂಡಾ ಡಿಯೋ ಬೈಕ್ ಅನ್ನು ಕದ್ದೊಯ್ದಿದ್ದಾರೆ.
ಬೈಕ್ ಕಳ್ಳತನ ಮಾಡುವ ಕಳ್ಳರ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿವೆ. ಕಳ್ಳರು ಅತ್ಯಂತ ಚಾಣಾಕ್ಷತನದಿಂದ ಬೈಕ್ ಲಾಕ್ ಮುರಿದು ಪರಾರಿಯಾಗುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಆದರೆ, ಈ ವಿಡಿಯೋ ಸಾಕ್ಷಿ ಸಮೇತ ದೂರು ನೀಡಿದರೂ ಸಹ ಪೊಲೀಸರು ಸರಿಯಾಗಿ ಸ್ಪಂದಿಸುತ್ತಿಲ್ಲ, ಕದ್ದಿರೋ ಬೈಕ್ ಹುಡುಕಿ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ
ಕಳ್ಳತನದ ಬಗ್ಗೆ ದೂರು ನೀಡಿದರೂ ಪೊಲೀಸರು ವಾಹನ ಹುಡುಕಿಕೊಡುತ್ತಿಲ್ಲ ಎಂದು ನೊಂದ ಸಂತ್ರಸ್ತರು ಬೇಸರ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಮೋದ್ ಎಂಬುವವರು ಸಿಸಿಟಿವಿ ದೃಶ್ಯದೊಂದಿಗೆ ಟ್ವೀಟ್ ಮಾಡಿದ ನಂತರ ಬೆಂಗಳೂರು ನಗರ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಸದ್ಯ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಪ್ರಕರಣ ದಾಖಲಾಗಿದೆ.
ಖದೀಮರ ಪತ್ತೆಗೆ ಶೋಧ ಕಾರ್ಯ ಆರಂಭ
ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಕಳ್ಳರನ್ನು ಪತ್ತೆಹಚ್ಚಲು ವಿಶೇಷ ತಂಡ ರಚಿಸಲಾಗಿದೆ. ಶೀಘ್ರದಲ್ಲೇ ಖದೀಮರನ್ನು ಬಂಧಿಸುವುದಾಗಿ, ಕಳುವಾದ ಬೈಕ್ ಅನ್ನು ಪತ್ತೆಹಚ್ಚುವುದಾಗಿ ರಾಮಮೂರ್ತಿ ನಗರ ಪೊಲೀಸರು ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ