
ಬಾಗಲಕೋಟೆ (ಡಿ.22): ವಿಶೇಷ ಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ಕಾರದಪುಡಿ ಎರಚಿ ಅಮಾನುವೀಯವಾಗಿ ಹಲ್ಲೆ ನಡೆಸಿದ್ದ ಪೈಶಾಚಿಕ ಕೃತ್ಯವನ್ನು ಜನರು ಖಂಡಿಸಿದ ಬೆನ್ನಲ್ಲೇ ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಎನ್ಜಿಒದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಶಾಲೆಯಲ್ಲಿದ್ದ ಮಕ್ಕಳನ್ನು ಅವರ ಪಾಲಕರೊಂದಿಗೆ ಕಳುಹಿಸಲಾಗಿದೆ.
ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 54ರಲ್ಲಿರುವ ಸಿದ್ಧಗಿರಿ ಸಂಸ್ಥೆಯ ಅಡಿಯಲ್ಲಿ ಪರವಾನಗಿ ಪಡೆಯದೇ ದಿವ್ಯಜ್ಯೋತಿ ವಿಶೇಷ ಚೇತನ ಮಕ್ಕಳ ವಸತಿ ಶಾಲೆ ಆರಂಭಿಸಿದ್ದ ಮಹಾರಾಷ್ಟ್ರ ಮೂಲದ ಅಕ್ಷಯ ಇಂದುಲ್ಕರ್ ಹಾಗೂ ಮಾಲಿನಿ ಎಂಬ ದಂಪತಿ ಬಾಲಕನ ಮೇಲೆ ತೀವ್ರ ಹಲ್ಲೆ ನಡೆಸಿದ್ದರು. ಇವರು ಬಾಲಕನ ಬಾಯಿ, ಕಣ್ಣಿಗೆ ಖಾರಪುಡಿ ಹಾಕಿ ಪೈಪ್, ಬೆಲ್ಟ್ನಿಂದ ಹೊಡೆಯುವ ವಿಡಿಯೋ ಶನಿವಾರ ವೈರಲ್ ಆಗಿ, ಸಾರ್ವಜನಿಕ ವಲಯದಿಂದ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಬಾಲಕನ ತಂದೆ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಶನಿವಾರವೇ ಇಂದುಲ್ಕರ್ ದಂಪತಿ, ರವಿ ಮತ್ತು ವಿಶಾಲ್ ಎಂಬ 4 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದರು. ಭಾನುವಾರ ಬೆಳಗ್ಗೆ ಡಿಎಸ್ಪಿ ಗಜಾನನ ಸುತಾರ್ ನೇತೃತ್ವದಲ್ಲಿ ಸ್ಥಳ ಮಹಜರು ನಡೆಸಿದ್ದು, ಹಲ್ಲೆಗೆ ಬಳಕೆ ಮಾಡಿದ್ದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಇದಕ್ಕೂ ಮುನ್ನ ಶಾಲೆಗೆ ಜೆಎಂಎಫ್ಸಿ ನ್ಯಾಯಾಲಯದ ಪ್ರಧಾನ ದಿವಾಣಿ ನ್ಯಾಯಾಧೀಶರಾದ ಮುರುಗೇಂದ್ರ ತುಬಾಕಿ ಭೇಟಿ ನೀಡಿ, ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಎಂಎಲ್ಸಿ ಪಿ.ಎಚ್.ಪೂಜಾರ ಸಹ ಶಾಲೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದರು.
ಹಲ್ಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಶನಿವಾರ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶಾಲೆಯಲ್ಲಿರುವ ಎಲ್ಲ ಮಕ್ಕಳ ಪಾಲಕರಿಗೆ ಫೋನ್ ಮಾಡಿ, ಕರೆದುಕೊಂಡು ಹೋಗುವಂತೆ ತಿಳಿಸಿದ್ದರು. ಅದರಂತೆ ಭಾನುವಾರ ಬೆಳಗ್ಗೆಯಿಂದಲೇ ವಿಜಯಪುರ, ಕಲಬುರಗಿ, ಕೊಪ್ಪಳ, ಮಹಾರಾಷ್ಟ್ರದ ಸಾಂಗ್ಲಿ ಸೇರಿದಂತೆ ವಿವಿಧೆಡೆಯಿಂದ ಪಾಲಕರು ಶಾಲೆಗೆ ಆಗಮಿಸಿ, ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ್ ತಿಳಿಸಿದ್ದಾರೆ.
ವಿಶೇಷ ಚೇತನ ಮಕ್ಕಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುತ್ತೇವೆ. ಘಟನೆ ಬೆಳಕಿಗೆ ಬಂದ ತಕ್ಷಣ ಅಧಿಕಾರಿಗಳನ್ನು ಅಲ್ಲಿಗೆ ಕಳುಹಿಸಿದ್ದು, ಜಿಲ್ಲಾಧಿಕಾರಿ ಜತೆಗೆ ಮಾತನಾಡಿದ್ದೇನೆ. ಅನಧಿಕೃತವಾಗಿರುವ ವಸತಿ ಶಾಲೆ ಮುಚ್ಚಿಸಲು ಕ್ರಮ ಕೈಗೊಳ್ಳುತ್ತೇನೆ. ಪಾಲಕರ ಅನುಮತಿ ಮೇರೆಗೆ ಅಲ್ಲಿನ ಮಕ್ಕಳನ್ನು ಸರ್ಕಾರಿ ಅನುದಾನಿತ ಮಕ್ಕಳ ರಕ್ಷಣಾ ನಿಲಯಕ್ಕೆ ಸ್ಥಳಾಂತರಿಸುತ್ತೇವೆ.
- ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ