
ಗದಗ (ಜ.3): ಗದಗ ಜಿಲ್ಲೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಡಿ ಗ್ರೂಪ್ ನೌಕರರೊಬ್ಬರು ನೇಣು ಬಿಗಿದುಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯ ಬಳಿ ಅಸ್ಪಷ್ಟವಾಗಿ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಗದಗ-ಬೆಟಗೇರಿ ಅವಳಿ ನಗರದ ವ್ಯಾಪ್ತಿಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಡಿ ಗ್ರೂಪ್ ನೌಕರನಾಗಿ ಕೆಲಸ ಮಾಡುತ್ತಿದ್ದ ಮಹಾಲಿಂಗೇಶ್ವರ (35) ಎಂಬುವವರೇ ಆತ್ಮ೧ಹತ್ಯೆ ಮಾಡಿಕೊಂಡ ದುರ್ದೈವಿ. ಕರ್ತವ್ಯ ನಿರ್ವಹಿಸುತ್ತಿದ್ದ ಆಸ್ಪತ್ರೆಯ ಆವರಣದಲ್ಲೇ ಯುವಕ ಜೀವನ ಅಂತ್ಯಗೊಳಿಸಿಕೊಂಡಿದ್ದು, ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಮೃತ ಮಹಾಲಿಂಗೇಶ್ವರ ಬರೆದಿಟ್ಟಿದ್ದಾರೆ ಎನ್ನಲಾದ ಡೆತ್ ನೋಟ್ ಪೊಲೀಸರಿಗೆ ಲಭ್ಯವಾಗಿದ್ದು, ಅದರಲ್ಲಿ ಕೆಲವು ಅಂಶಗಳು ಪತ್ತೆಯಾಗಿವೆ. ಆಸ್ಪತ್ರೆಯ ಹಾಲಿ ಸಿಬ್ಬಂದಿಯಿಂದ ನನಗೆ ಯಾವುದೇ ತೊಂದರೆ ಇಲ್ಲ. ಆದರೆ, 2023ರಲ್ಲಿ ನನಗೆ ತೊಂದರೆಯಾಗಿತ್ತು ಎಂದು ಅಸ್ಪಷ್ಟವಾಗಿ ಬರೆಯಲಾಗಿದೆ. ಅಲ್ಲದೆ, ಮೂವರು ವ್ಯಕ್ತಿಗಳು ನನಗೆ ಹೊಡೆದಿದ್ದಾರೆ, ಇದರಿಂದ ನಾನು ನೊಂದಿದ್ದೇನೆ ಎಂದು ಬರೆದಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ತನಿಖೆಯ ನಂತರವಷ್ಟೇ ಸಿಗಬೇಕಿದೆ ಸ್ಪಷ್ಟನೆ
ನೌಕರ ಬರೆದಿರುವ ಡೆತ್ ನೋಟ್ ಬಹಳ ಅಸ್ಪಷ್ಟವಾಗಿದ್ದು, ಅಕ್ಷರಗಳನ್ನು ಓದಲು ಕಷ್ಟವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆ ಮೂವರು ವ್ಯಕ್ತಿಗಳು ಯಾರು? ಅವರು ಎಲ್ಲಿಯವರು? ಮತ್ತು 2023ರಲ್ಲಿ ನಡೆದ ಆ ಘಟನೆ ಏನು? ಎಂಬ ಬಗ್ಗೆ ಯಾವುದೇ ನಿಖರ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಪಾರದರ್ಶಕ ತನಿಖೆಗೆ ದಲಿತ ಮುಖಂಡರ ಆಗ್ರಹ
ಘಟನೆ ತಿಳಿಯುತ್ತಿದ್ದಂತೆ ದಲಿತ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೌಕರನ ಸಾವಿಗೆ ಕಾರಣವಾದ ಆ ಮೂವರು ವ್ಯಕ್ತಿಗಳು ಯಾರು ಎಂಬುದು ಪತ್ತೆಯಾಗಬೇಕು. ಡೆತ್ ನೋಟ್ ಅಸ್ಪಷ್ಟವಾಗಿದ್ದರೂ, ಪೊಲೀಸ್ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ. ನೊಂದ ನೌಕರನ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ