ಹೆಚ್‌ಡಿ ರೇವಣ್ಣಗೆ ಮತ್ತೊಂದು ಶಾಕ್, ಹೆಚ್ಚಿನ ವಿಚಾರಣೆಗೆ 4 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ!

By Suvarna NewsFirst Published May 5, 2024, 8:06 PM IST
Highlights

ಹೆಚ್‌ಡಿ ರೇವಣ್ಣಗೆ ಮತ್ತೆ ಹಿನ್ನಡೆಯಾಗಿದೆ. ಬಂಧನದ ಬಳಿಕ ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಎಸ್‌ಐಟಿ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರೇವಣ್ಣ ವಾದಕ್ಕೆ ನ್ಯಾಯಾಧೀಶರು ಮನ್ನಣೆ ನೀಡಿಲ್ಲ.
 

ಬೆಂಗಳೂರು(ಮೇ.02) ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಹೆಚ್‌ಡಿ ರೇವಣ್ಣ ಕುಟುಂಬಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಬಂಧನ ಬಳಿಕ ಇಂದು ನ್ಯಾಯಾಧೀಶರ ಮುಂದೆ ರೇವಣ್ಣ ಅವರನ್ನು ಹಾಜರುಪಡಿಸಲಾಗಿತ್ತು. ರೇವಣ್ಣ ಪರ ವಕೀಲ ವಾದಕ್ಕೆ ಯಾವುದೇ ಮನ್ನಣೆ ಸಿಗಲಿಲ್ಲ. ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಧೀಶರು ರೇವಣ್ಣ ಅವರನ್ನು 4 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ. ಈ ಮೂಲಕ ಹೆಚ್‌ಡಿ ರೇವಣ್ಣಗೆ ಮತ್ತೆ ಹಿನ್ನಡೆಯಾಗಿದೆ. ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ ಎಸ್‌ಐಟಿ ಮನವಿಯನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.   

ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಮೇ.04ರಂದು ಹೆಚ್‌ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದರು. ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ರೇವಣ್ಣಗೆ ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ಬಳಿಕ ಕೋರಮಂಗಲದಲ್ಲಿರುವ 17 ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರ ಮನೆಗೆ ರೇವಣ್ಣ ಅವರನ್ನು ಕರೆದುಕೊಂಡು ಹೋಗಲಾಗಿತ್ತು. ನ್ಯಾ.ರವೀಂದ್ರಕುಮಾರ್ ಬಿ.ಕಟ್ಟಿಮನಿ ಮುಂದೆ ಹಾಜರುಪಡಿಸಿ ವಿಚಾರಣೆಗೆ ನೀಡುವಂತೆ ಮನವಿ ಮಾಡಿದ್ದರು. ಪ್ರಾಥಮಿಕ ತನಿಖೆ ಹಾಗೂ ಸಾಕ್ಷ್ಯಾಧಾರಗಳ ಆಧರಿಸಿ ರೇವಣ್ಣಗೆ ಜಾಮೀನು ನಿರಾಕರಿಸಿ, ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. 

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯರಿಗಾಗಿ ಸಹಾಯವಾಣಿ ಆರಂಭಿಸಿದ ಎಸ್‌ಐಟಿ!

ಇತ್ತ ರೇವಣ್ಣ ಪರ ವಕೀಲರು ಎಸ್ಐಟಿ ಅಧಿಕಾರಿಗಳ ವಾದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಿಡ್ನಾಪ್ ಪ್ರಕರಣಗಳಲ್ಲಿ ಜಾಮೀನು ರಹಿತ ಸೆಕ್ಷನ್ ಹಾಕಲಾಗಿದೆ. ಸಂತ್ರಸ್ತೆ ಹೇಳಿಕೆ ಹೊರತುಪಡಿಸಿ ಸಾಕ್ಷ್ಯಗಳಿಲ್ಲ ಎಂದು  ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದಾರೆ. ಹೀಗಾಗಿ ಪೊಲೀಸ್ ಕಸ್ಟಡಿಗೆ ನೀಡದಂತೆ ರೇವಣ್ಣ ಪರ ವಾದ ಮಂಡಿಸಿದ್ದರು. ಈಗಾಗಲೇ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದ್ದರು. 

ಪೊಲೀಸರು ದುರುದ್ದೇಶ ಪೂರ್ವಕವಾಗಿ ಕೇಸ್ ದಾಖಲಿಸಿದ್ದಾರೆ. ರೇವಣ್ಣ ವಿರುದ್ಧ ಯಾವುದೇ ಸಾಕ್ಷಿಗಳು ಲಭ್ಯವಿಲ್ಲ. ಘಟನೆ ನಡೆದಿರೋದು ಯಾವಾಗ? ಪ್ರಕರಣ ದಾಖಲಲಾಗಿದ್ದು ಯಾವಾಗ? ಎಂದು ರೇವಣ ಪರ ವಕೀಲು ವಾದ ಮಂಡಿಸಿದ್ದರು. ವಾದ ವಿವಾದ ಆಲಿಸಿದ ನ್ಯಾಯಾಧೀಶರು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ. 

5 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಮನವಿ ಮಾಡಿದ್ದರು. ವಾದ ಆಲಿಸಿದ ಬಳಿಕ ನ್ಯಾಯಾಧೀಶರು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ. ಇದೀಗ ಮೇ 8ರ ವರೆಗೆ ರೇವಣ್ಣ ಅವರು ಎಸ್‌ಐಟಿ ಪೊಲೀಸ್ ಕಸ್ಟಡಿಯಲ್ಲಿ ವಿಚಾರಣೆ ಎದುರಿಸಲಿದ್ದಾರೆ.

ರಾಜಕೀಯ ಷಡ್ಯಂತ್ರ ಮಾಡಿ ಕಿಡ್ನಾಪ್ ಕೇಸ್ ಹಾಕಿಸಿ ಅರೆಸ್ಟ್ ಮಾಡಿದ್ದಾರೆ; ಮಾಜಿ ಸಚಿವ ಹೆಚ್.ಡಿ. ರೇವಣ್ಣ

click me!