Belagavi: ಮರಕ್ಕೆ ಮಹೀಂದ್ರ ಗೂಡ್ಸ್ ವಾಹನ ಡಿಕ್ಕಿ: ಆರು ಜನ ದುರ್ಮರಣ

By Govindaraj SFirst Published Jan 5, 2023, 8:40 AM IST
Highlights

ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿದೆ. ಈ ಪರಿಣಾಮ 6 ಜನ ಮೃತಪಟ್ಟಿದ್ದಾರೆ. 

ಬೆಳಗಾವಿ (ಜ.05): ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಬೊಲೆರೊ ವಾಹನ ಡಿಕ್ಕಿಯಾಗಿದೆ. ಈ ಪರಿಣಾಮ 6 ಜನ ಮೃತಪಟ್ಟಿದ್ದಾರೆ. 

ಹಣಮವ್ವ ಮ್ಯಾಗಾಡಿ (25), ದೀಪಾ ಹರಿಜನ (31), ಸವಿತಾ ಮುಂಡಾಸ (17) ಸುಪ್ರಿತಾ ಹರಿಜನ (11) ಯಲ್ಲಪ್ಪ ಬನ್ನೂರ (42), ಇಂದ್ರವ್ವ ಸಿದ್ದಮೇತ್ರಿ (24) ಮೃತ ದುರ್ದೈವಿಗಳಾಗಿದ್ದಾರೆ. ಇವರೆಲ್ಲರೂ ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಅಪಘಾತಕ್ಕೀಡಾದ ಪಿಕ್ ಅಪ್ ಬೊಲೆರೊ ವಾಹನದಲ್ಲಿ 23 ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕು ಆಸ್ಪತ್ರೆಗೆ ಮೃತದೇಹಗಳ ರವಾನೆ ಮಾಡಲಾಗಿದ್ದು, ಸದ್ಯ ಸ್ಥಳಕ್ಕೆ ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಲವ್‌ ಜಿಹಾದ್‌ ನಿಷೇಧ ಕಾಯ್ದೆ ವಿಚಾರ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ

6 ಜನರ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ: ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಮೊದಲು ಪಾದಯಾತ್ರೆ ಮೂಲಕ ಭಕ್ತರು ಹೊರಟಿದ್ದರು.  ಈ ವೇಳೆ ಮಾರ್ಗಮಧ್ಯೆ ಗೂಡ್ಸ್ ವಾಹನದಲ್ಲಿ 23 ಭಕ್ತರ ಚಾಲಕ ಕೂರಿಸಿಕೊಂಡಿದ್ದಾನೆ. ಕಟಕೋಳ ಬಳಿ ತಡರಾತ್ರಿ  ಭಕ್ತರು ಊಟ ಮಾಡಿದ್ದು, ಬಳಿಕ ಸವದತ್ತಿಯತ್ತ ತೆರಳುವ ವೇಳೆ ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ 6 ಜನರ ಸಾವನಪ್ಪಿ, 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಅವರನ್ನು ಗೋಕಾಕ್ ಸೇರಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಸದ್ಯದ ಮಟ್ಟಿಗೆ ಗಾಯಾಳುಗಳು ಚೇತರಿಸಿಕೊಳ್ಳುತ್ತಿರುವ ಮಾಹಿತಿ ದೊರಕಿದೆ.

ಎಲ್ಲರ ಆರೋಗ್ಯ ಸ್ಥಿರವಾಗಿದೆ: ಹುಲಕುಂದದಿಂದ ಸವದತ್ತಿ ಯಲ್ಲಮ್ಮ ದೇಗುಲಕ್ಕೆ ಯಾತ್ರಾರ್ಥಿಗಳು ಹೊರಟಿದ್ದರು. ಮಹೀಂದ್ರ ಪಿಕ್‌ಅಪ್ ವಾಹನದಲ್ಲಿ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದರು. ಚುಂಚನೂರು ಬಳಿ ವಿಠ್ಠಲ್ ರುಕ್ಮಿಣಿ ದೇಗುಲ ಬಳಿ ಅರಳಿ ಮರಕ್ಕೆ ಡಿಕ್ಕಿಯಾಗಿದೆ ಎಂದು ಬೆಳಗಾವಿ ಎಸ್‌ಪಿ ಡಾ.ಸಂಜೀವ್ ಪಾಟೀಲ್ ತಿಳಿಸಿದ್ದಾರೆ. ಅಪಘಾತದಲ್ಲಿ ಆರು ಯಾತ್ರಾರ್ಥಿಗಳು ಸ್ಥಳದಲ್ಲೇ ಸಾವನಪ್ಪಿದ್ದು, ಓರ್ವ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 16 ಜನರಿಗೆ ಗಾಯವಾಗಿದ್ದು, ಗೋಕಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಕಟಕೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಸಂಜೀವ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಸಮ್ಮಿಶ್ರ ಸರ್ಕಾರ ಉರುಳಿಸಿದವರ ತನಿಖೆಗೆ ಎಚ್‌.ಡಿ.ಕುಮಾರಸ್ವಾಮಿ ಆಗ್ರಹ

ಮೃತ ಕುಟುಂಬಕ್ಕೆ 5 ಲಕ್ಷ ರೂಪಾಯಿ ಘೋಷಣೆ: 6 ಜನ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಕೊಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪರಿಹಾರ ಘೋಷಣೆ ಮಾಡಲು ಸಿಎಂ ಒಪ್ಪಿ ಸೂಚನೆ ನೀಡಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಭರವಸೆ ನೀಡಿದೆ. ಮೃತರ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ಅಪಘಾತದಲ್ಲಿ 6 ಜನ ನಿಧನರಾಗಿದ್ದು, 16 ಜನರಿಗೆ ಗಾಯವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವಿದಾಗಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

click me!