
ಬೆಂಗಳೂರು(ಜು.28): ತನ್ನ ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದು ಬಳಿಕ ಅತ್ತೆಗೆ ಕರೆ ಮಾಡಿದ್ದ ಅಳಿಯ ಬಳಿಕ ತಾನೇ ಹೋಗಿ ಚಂದ್ರಾಲೇಔಟ್ ಠಾಣೆ ಪೊಲೀಸರಿಗೆ ಶರಣಾಗಿದ್ದಾನೆ.
ಮೂಡಲಪಾಳ್ಯ ಸಮೀಪದ ಶಿವಾನಂದ ನಗರದ ಗೀತಾ (33) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತಳ ಪತಿ ಶಂಕರ್ ಪೊಲೀಸರಿಗೆ ಶರಣಾಗಿದ್ದಾನೆ. ಕೌಟುಂಬಿಕ ವಿಚಾರವಾಗಿ ದಂಪತಿ ಮಧ್ಯೆ ಬುಧವಾರ ರಾತ್ರಿ ಜಗಳವಾಗಿದೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಪತ್ನಿಗೆ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಶಂಕರ್, ನಂತರ ಮಗಳನ್ನು ಕೊಲೆ ಮಾಡಿರುವುದಾಗಿ ಮೃತಳ ತಾಯಿಗೆ ಕರೆ ಮಾಡಿ ತಿಳಿಸಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಂಡ್ಯದ ಗಂಡು- ಬೆಂಗಳೂರು ಹುಡುಗಿ ಫೇಸ್ಬುಕ್ ಲವ್: ತನು-ಮನ-ಧನ ಅರ್ಪಿಸಿದ ಹುಡುಗಿ ಸತ್ತೇ ಹೋದ್ಲು.!
13 ವರ್ಷಗಳ ಹಿಂದೆ ತಮಿಳುನಾಡು ರಾಜ್ಯದ ಹೊಸೂರು ಮೂಲದ ಗೀತಾ ಹಾಗೂ ಟ್ರಾವೆಲ್ಸ್ ಏಜೆನ್ಸಿ ಮಾಲಿಕ ಶಂಕರ್ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮೂಡಲಪಾಳ್ಯದ ಸಮೀಪದ ಶಿವಾನಂದ ನಗರದಲ್ಲಿ ಶಂಕರ್ ಕುಟುಂಬ ನೆಲೆಸಿತ್ತು. ಕೆಲ ದಿನಗಳಿಂದ ಪರಪರುಷನ ಜತೆ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಗೊಂಡಿದ್ದ ಶಂಕರ್, ಇದೇ ವಿಚಾರವಾಗಿ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಅಂತೆಯೇ ಬುಧವಾರ ರಾತ್ರಿ ಸಹ ಸತಿ-ಪತಿ ನಡುವೆ ನಡೆದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ಹೊಸೂರಿನಲ್ಲಿ ಕಲ್ಯಾಣ ಮಂಟಪಗಳಲ್ಲಿ ಸ್ವಚ್ಛತಾ ಕೆಲಸಗಾರಳಾಗಿ ದುಡಿದು ಜೀವನ ಸಾಗಿಸುವ ಮೃತ ಗೀತಾ ತಾಯಿ ರತ್ನಮ್ಮ ಅವರು, ಬುಧವಾರ ಮಗಳ ಮನೆಗೆ ಬಂದು ಯೋಗಕ್ಷೇಮ ವಿಚಾರಿಸಿ ಊರಿಗೆ ಮರಳಿದ್ದರು. ರಾತ್ರಿ 11 ಗಂಟೆಯಲ್ಲಿ ಅತ್ತೆಗೆ ಕರೆ ಮಾಡಿದ ಶಂಕರ್, ನಿಮ್ಮ ಮಗಳು ಗೀತಾಳನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಈ ವಿಷಯ ತಿಳಿದು ಆತಂಕದಿಂದ ಮಗನೊಟ್ಟಿಗೆ ಮಗಳ ಮನೆಗೆ ಬಂದಾಗ ರಕ್ತದ ಮಡುವಿನಲ್ಲಿ ಗೀತಾ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ