
ಬೆಳಗಾವಿ (ಅ.19): ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತ ಕಿಂಗ್ಪಿನ್ ಸಂಜೀವ ಲಕ್ಷ್ಮಣ ಭಂಡಾರಿ ಸೇರಿ 20 ಮಂದಿಗೆ ಮಂಗಳವಾರ ಜಾಮೀನು ದೊರೆತಿದೆ. ಇವರಲ್ಲಿ ಸಂಜೀವ ಲಕ್ಷ್ಮಣ ಭಂಡಾರಿ ಜಾಮೀನು ಪಡೆದು ಜೈಲಿಂದ ಹೊರಬರುತ್ತಿದ್ದಂತೆ 2021ರ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿ ಮತ್ತೆ ವಶಕ್ಕೆ ಪಡೆದಿದ್ದಾರೆ.
ಮೂಡಲಗಿ ತಾಲೂಕಿನ ಅರಬಾವಿಯ ಸಂಜೀವ ಲಕ್ಷ್ಮಣ ಭಂಡಾರಿ ( 23) 2021ರಲ್ಲಿ ನಡೆದಿದ್ದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಅಕ್ರಮ ಪ್ರಕರಣದಲ್ಲೂ ಭಾಗಿಯಾದ ಆರೋಪ ಎದುರಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಕೆಪಿಟಿಸಿಎಲ್ ಪರೀಕ್ಷೆ ಅಕ್ರಮದ ಕೇಸ್ನಲ್ಲಿ ಜಾಮೀನು ಪಡೆದು ಹಿಂಡಲಗಾ ಜೈಲಿಂದ ಹೊರಬರುತ್ತಿದ್ದಂತೆ ಸಿಬಿಐ ಮತ್ತೆ ಈತನನ್ನು ಬಂಧಿಸಿ ಬೆಳಗಾವಿಯ 5ನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಈತನನ್ನು ಮತ್ತೆ ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿತು.
KPTCL Recruitment Scam: ಮತ್ತೆ ಮೂವರ ಬಂಧನ, ಒಬ್ಬೊಬ್ರುದು ಒಂದೊಂದು ಕೈಚಳಕ
ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ, ಮತ್ತಿಬ್ಬರ ಸೆರೆ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 22ಕ್ಕೇರಿದೆ. ಗೋಕಾಕ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ (26) ಮತ್ತು ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ಶಿವಪ್ಪ ದೊಡಮನಿ (27) ಬಂಧಿತ ಆರೋಪಿಗಳು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ.
ಯಲ್ಲಪ್ಪ ಮಹದೇವ ರಕ್ಷಿ ಎಲೆಕ್ಟ್ರಾನಿಕ್ ಡಿವೈಸ್ ವಿದ್ಯಾರ್ಥಿಗಳಿಗೆ ಕೊಟ್ಟಿದ್ದ ಮತ್ತು ಶಿರಹಟ್ಟಿಯಲ್ಲಿ ಪ್ರಶ್ನೆ ಪತ್ರಿಕೆಗೆ ಉತ್ತರ ಹೇಳಿದ್ದ. ಈತನಿಂದ ಒಂದು ಮೊಬೈಲ್ ಮತ್ತು ಒಂದು ಕಾರ್ ಜಪ್ತಿ ಮಾಡಲಾಗಿದೆ. ನಾಗಪ್ಪ ಶಿವಪ್ಪ ದೊಡಮನಿ ಎಲೆಕ್ಟ್ರಾನಿಕ್ ಡಿವೈಸ್ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದ. ಈತನಿಂದ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಒಂದು ಮೊಬೈಲ್ ಜಪ್ತಿ ಮಾಡಲಾಗಿದೆ.
20 ಆರೋಪಿಗಳಿಗೆ ಜಾಮೀನು: ಕೆಪಿಟಿಸಿಎಲ್ ಸಹಾಯಕ ಎಂಜಿಯರಿಂಗ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ 20 ಆರೋಪಿಗಳಿಗೆ ಗೋಕಾಕ ನಗರದ ಜೆಎಂಎಫ್ಸಿ ಎರಡನೇ ನ್ಯಾಯಾಲಯದ ನ್ಯಾ.ಜಿ.ರಾಜೀವ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಪರೀಕ್ಷಾರ್ಥಿಗಳು ಸೇರಿ ಅಕ್ರಮಕ್ಕೆ ಸಹಕರಿಸಿದ್ದ 20 ಆರೋಪಿತರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು. 20 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗೋಕಾಕದ ಜಿಎಸ್ಎಸ್ ಪರೀಕ್ಷಾ ಕೇಂದ್ರದಲ್ಲಿ ಆಗಸ್ಟ್ 7 ರಂದು ಪರೀಕ್ಷಾ ಅಕ್ರಮ ಬೆಳಕಿಗೆ ಬಂದಿತ್ತು.
ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಅಕ್ರಮ: ಮತ್ತೊಬ್ಬ ಸೆರೆ, ಬಂಧಿತರು 14ಕ್ಕೇರಿಕೆ
ಆಗಸ್ಟ್ 10ರಂದು ಪ್ರಕರಣ ಸಂಬಂಧ ಸಿದ್ದಪ್ಪ ಮದಿಹಳ್ಳಿಯನ್ನು ಬಂಧಿಸಿದ್ದರು. ಸ್ಮಾರ್ಚ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆ ಹೊರಗೆ ರವಾನಿಸಿದ್ದ. ಸಿದ್ದಪ್ಪ ಕ್ರಮ ಎಸಗುವ ದೃಶ್ಯ ಪರೀಕ್ಷಾ ಕೇಂದ್ರದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಬೆಳಗಾವಿ ಜಿಲ್ಲಾ ಪೊಲೀಸರು ಪ್ರಕರಣವನ್ನು ಬೇಧಿಸಿದ್ದರು. ಆ.23 ರಂದು 9 ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಬಳಿಕ ಹಂತ ಹಂತವಾಗಿ 20 ಆರೋಪಿಗಳನ್ನು ಬಂಧಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ