Bengaluru: ವಿಚಾರಣೆಗೆ ಕರೆತಂದಿದ್ದ ಆರೋಪಿ ಅನುಮಾನಾಸ್ಪದ ಸಾವು: ಲಾಕಪ್‌ಡೆತ್‌ ಆರೋಪ

By Govindaraj SFirst Published Jan 6, 2023, 8:05 AM IST
Highlights

ಹಳೆಯ ದರೋಡೆ ಸಂಚು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣಕ್ಕೆ ನ್ಯಾಯಾಲಯದ ವಾರೆಂಟ್‌ ಹಿನ್ನೆಲೆಯಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ಕಾಟನ್‌ಪೇಟೆ ಠಾಣೆಯಲ್ಲಿ ಗುರುವಾರ ನಸುಕಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. 

ಬೆಂಗಳೂರು (ಜ.06): ಹಳೆಯ ದರೋಡೆ ಸಂಚು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣಕ್ಕೆ ನ್ಯಾಯಾಲಯದ ವಾರೆಂಟ್‌ ಹಿನ್ನೆಲೆಯಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ಕಾಟನ್‌ಪೇಟೆ ಠಾಣೆಯಲ್ಲಿ ಗುರುವಾರ ನಸುಕಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಆದರೆ ಈ ಬಗ್ಗೆ ಮೃತನ ಕುಟುಂಬದವರು ಪೊಲೀಸರ ಹಲ್ಲೆಯಿಂದ ಮೃತ ಪಟ್ಟಿದ್ದಾನೆ ಎಂದು ಆರೋಪ ಮಾಡಿದ್ದಾರೆ. ಭಕ್ಷಿ ಗಾರ್ಡನ್‌ ನಿವಾಸಿ ವಿನೋದ್‌ (23) ಮೃತ ದುರ್ದೈವಿ. ಆರು ವರ್ಷಗಳ ಹಿಂದಿನ ಪ್ರಕರಣದಲ್ಲಿ ಬುಧವಾರ ಬಂಧಿಸಿದ ಕಾಟನ್‌ ಪೇಟೆ ಠಾಣೆ ಪೊಲೀಸರು, ಆತನನ್ನು ಠಾಣೆಯ ಸೆಲ್‌ನಲ್ಲಿಟ್ಟಿದ್ದಾಗ ಘಟನೆ ಸಂಭ ವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಸಿಐಡಿಗೆ ಪ್ರಕರಣ ವರ್ಗಾವಣೆ: 2017ರಲ್ಲಿ ದರೋಡೆ ಸಂಚು ಪ್ರಕರಣದಲ್ಲಿ ವಿನೋದ್‌ನನ್ನು ಕಾಟನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನು ಪಡೆದು ಹೊರಬಂದ ಆತ, ಸಣ್ಣಪುಟ್ಟ ಕೆಲಸ ಮಾಡಿ ಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಪ್ರಕರಣದ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ವಿನೋದ್‌ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಗೊಳಿಸಿತ್ತು. 

ವಿಧಾನಸೌಧದಲ್ಲಿ ಅಧಿಕಾರಿ ಬಳಿ ಸಿಕ್ತು 10 ಲಕ್ಷ ಕ್ಯಾಶ್‌: ಪಿಡಬ್ಲ್ಯುಡಿ ಎಂಜಿನಿಯರ್‌ ಬಂಧನ

ಈ ವಾರೆಂಟ್‌ ಹಿನ್ನೆಲೆಯಲ್ಲಿ ಬುಧವಾರ ಆರೋಪಿಯನ್ನು ಬಂಧಿಸಿದ ಕಾಟನ್‌ಪೇಟೆ ಪೊಲೀಸರು, ಗುರುವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲು ಆತನನ್ನು ಠಾಣೆಯ ಸೆಲ್‌ನಲ್ಲಿಟ್ಟಿದ್ದರು. ಆದರೆ ಮುಂಜಾನೆ ವಿನೋದ್‌ ಪ್ರಜ್ಞಾಹೀನನಾಗಿರುವುದನ್ನು ಗಮನಿಸಿದ ಪೊಲೀಸರು, ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಗ ಅಲ್ಲಿ ತಪಾಸಣೆ ನಡೆಸಿದ ವೈದ್ಯರು ಆರೋಪಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ್‌ ನಿಂಬರಗಿ ತಿಳಿಸಿದ್ದಾರೆ.

ಪೊಲೀಸರ ಹಲ್ಲೆಯಿಂದ ಸಾವು: ಪೊಲೀಸರ ಹಲ್ಲೆಯಿಂದಲೇ ಲಾಕಪ್‌ನಲ್ಲಿಯೇ ವಿನೋದ್‌ ಸಾವನ್ನಪ್ಪಿದ್ದಾನೆ. ಇದೊಂದು ಸಹಜ ಸಾವಲ್ಲ. ತಪ್ಪಿತಸ್ಥ ಪೊಲೀಸರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಮೃತ ವಿನೋದ್‌ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕುಕ್ಕರ್‌ ಬಾಂಬ್‌ ಸ್ಫೋಟ ತನಿಖೆ ತೀವ್ರ: ರಾಜ್ಯದ ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ

ಕಾನೂನು ಪ್ರಕಾರ ಕಸ್ಟೋಡಿಯಲ್‌ ಡೆತ್‌ ಆಗುತ್ತದೆ. ಹಾಗಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸೂಚನೆಯಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ವೈದ್ಯಕೀಯ ವರದಿ ಬಳಿಕ ಮೃತನ ಸಾವಿಗೆ ನಿಖರ ಗೊತ್ತಾಗಲಿದೆ.
- ಲಕ್ಷ್ಮಣ್‌ ನಿಂಬರಗಿ, ಪಶ್ಚಿಮ ವಿಭಾಗದ ಡಿಸಿಪಿ

click me!