ಕುಕ್ಕರ್‌ ಬಾಂಬ್‌ ಸ್ಫೋಟ ತನಿಖೆ ತೀವ್ರ: ರಾಜ್ಯದ ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ

Published : Jan 06, 2023, 06:42 AM IST
ಕುಕ್ಕರ್‌ ಬಾಂಬ್‌ ಸ್ಫೋಟ ತನಿಖೆ ತೀವ್ರ: ರಾಜ್ಯದ ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ

ಸಾರಾಂಶ

ಶಿವಮೊಗ್ಗದ ಮಂಜುನಾಥ ಬಡಾವಣೆಯ ನಿವಾಸವೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಸುಮಾರು 2 ಗಂಟೆ ಕಾಲ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬನ ವಿಚಾರಣೆ ನಡೆಸಿ ತೆರಳಿದೆ. ದಕ್ಷಿಣ ಕನ್ನಡದ ಕೊಣಾಜೆ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿ ರಿಹಾನ್‌ ಶೇಖ್‌ ಹಾಗೂ ಹೊನ್ನಾಳಿಯ ಎಂಜಿನಿಯರಿಂಗ್‌ ವಿದ್ಯಾರ್ಥಿ ಬಂಧಿತರು. 

ಮಂಗಳೂರು/ಶಿವಮೊಗ್ಗ/ದಾವಣಗೆರೆ (ಜ.06): ಮಂಗಳೂರಿನಲ್ಲಿ ನ.19ರಂದು ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಉಡುಪಿ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಸೇರಿ ರಾಜ್ಯದ 6 ಕಡೆ ದಾಳಿ ನಡೆಸಿರುವ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ತಂಡ, ಕುಖ್ಯಾತ ಉಗ್ರಗಾಮಿ ಸಂಘಟನೆ ಐಸಿಸ್‌ ಜತೆ ನಂಟು ಹೊಂದಿದ್ದ ಆರೋಪದ ಮೇರೆಗೆ ಇಬ್ಬರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳನ್ನು ಬಂಧಿಸಿದೆ. ಅವರಿಂದ ಲ್ಯಾಪ್‌ಟಾಪ್‌, ಮೊಬೈಲ್‌ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಇದೇ ವೇಳೆ, ಶಿವಮೊಗ್ಗದ ಮಂಜುನಾಥ ಬಡಾವಣೆಯ ನಿವಾಸವೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಸುಮಾರು 2 ಗಂಟೆ ಕಾಲ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬನ ವಿಚಾರಣೆ ನಡೆಸಿ ತೆರಳಿದೆ. ದಕ್ಷಿಣ ಕನ್ನಡದ ಕೊಣಾಜೆ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿ ರಿಹಾನ್‌ ಶೇಖ್‌ ಹಾಗೂ ಹೊನ್ನಾಳಿಯ ಎಂಜಿನಿಯರಿಂಗ್‌ ವಿದ್ಯಾರ್ಥಿ ಬಂಧಿತರು. 

ಬೆಂಗಳೂರು-ಮೈಸೂರು ಹೈವೇ ಫೆಬ್ರವರಿ ಅಂತ್ಯಕ್ಕೆ ಉದ್ಘಾಟನೆ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕ ಸ್ಫೋಟ ನಡೆಸಿದ ಆರೋಪದಡಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್‌ ಮುನೀರ್‌ ಹಾಗೂ ಮಂಗಳೂರಿನ ಕುಕ್ಕರ್‌ ಬಾಂಬ್‌ ಸ್ಫೋಟದ ಆರೋಪಿ ಮೊಹಮ್ಮದ್‌ ಶಾರೀಕ್‌ ಜತೆ ಬಂಧಿತ ವಿದ್ಯಾರ್ಥಿಗಳು ನಿರಂತರ ಸಂಪರ್ಕದಲ್ಲಿದ್ದರು. ಅಲ್ಲದೆ, ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಐಸಿಎಸ್‌ ಜೊತೆಗೂ ಇವರು ಸಂಪರ್ಕ ಹೊಂದಿರುವ ಸಾಧ್ಯತೆಯಿದ್ದು, ಭಯೋತ್ಪಾದನೆಗೆ ಸಂಬಂಧಿಸಿದ ಹಲವು ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕೆಯಿದೆ ಎಂದು ಮೂಲಗಳು ತಿಳಿಸಿವೆ.

ಕೊಣಾಜೆ ಕಾಲೇಜಿನ ಮೇಲೆ ದಾಳಿ: ಗುರುವಾರ ಬೆಳಗ್ಗೆ ಮಂಗಳೂರು ಹೊರವಲಯದ ಕೊಣಾಜೆ ನಡುಪದವು ಎಂಜಿನಿಯರಿಂಗ್‌ ಕಾಲೇಜಿನ ಮೇಲೆ ದಾಳಿ ನಡೆಸಿದ ಏಳು ಮಂದಿ ಅಧಿಕಾರಿಗಳ ತಂಡ, ಉಡುಪಿ ಮೂಲದ ರಿಹಾನ್‌ ಶೇಖ್‌ ಎಂಬಾತನನ್ನು ಬಂಧಿಸಿದೆ. ಈತನನ್ನು ಉಡುಪಿಯ ಪೆರಂಪಳ್ಳಿ ನಿವಾಸಕ್ಕೆ ಕರೆ ತಂದು, ವಿಚಾರಣೆ ಬಳಿಕ ಬೆಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಈತ ಈ ಕಾಲೇಜಿನಲ್ಲಿ ಮೆಕ್ಯಾನಿಕಲ್‌ ವಿಭಾಗದಲ್ಲಿ ಅಂತಿಮ ವರ್ಷದ ಎಂಟೆಕ್‌ ಓದುತ್ತಿದ್ದಾನೆ. ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕ ಸ್ಫೋಟ ನಡೆಸುತ್ತಿದ್ದ ಆರೋಪದಡಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್‌ ಮುನೀರ್‌ ಜೊತೆ ಈತ ನಿರಂತರ ಸಂಪರ್ಕ ಹೊಂದಿದ್ದು, ವಿವಿಧ ಚಟುವಟಿಕೆಗಳಲ್ಲಿ ಜತೆಯಾಗಿ ಭಾಗಿಯಾಗಿದ್ದ. ಅಲ್ಲದೆ, ಮಂಗಳೂರಿನ ಕುಕ್ಕರ್‌ ಬಾಂಬ್‌ ಸ್ಫೋಟದ ಆರೋಪಿ ಮೊಹಮ್ಮದ್‌ ಶಾರೀಕ್‌ ಜೊತೆಯೂ ಈತ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಮುನೀರ್‌ ಹಾಗೂ ಶಾರೀಕ್‌ ಇಬ್ಬರೂ ಐಸಿಸ್‌ ಉಗ್ರ ಸಂಘಟನೆ ಜತೆಗೆ ಸಂಪರ್ಕ ಹೊಂದಿರುವುದು ಈಗಾಗಲೇ ತನಿಖೆ ವೇಳೆ ತಿಳಿದು ಬಂದಿದೆ.

ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರವಾಗಿ ಕುಕ್ಕರ್‌ ಬಾಂಬ್‌ ಸ್ಫೋಟ?

ಈ ಮಧ್ಯೆ, ಬುಧವಾರ ತಡರಾತ್ರಿ ಹೊನ್ನಾಳಿ ಪಟ್ಟಣ ಪೊಲೀಸ್‌ ಠಾಣೆ ಎದುರಿನ ಜನವಸತಿ ಪ್ರದೇಶದ ಮನೆಯೊಂದರ ಮೇಲೆ ದಾಳಿ ನಡೆಸಿದ ಎನ್‌ಐಎ ತಂಡ, ಸುಮಾರು 22 ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದೆ. ಆತನ ಮನೆಯನ್ನೆಲ್ಲಾ ಪರಿಶೀಲಿಸಿದ್ದು, ಆತನಿಗೆ ಸೇರಿದ ಲ್ಯಾಪ್‌ಟಾಪ್‌, ಮೊಬೈಲ್‌ ಇತರ ವಸ್ತುಗಳನ್ನು ಕೊಂಡೊಯ್ದಿದೆ. ಇದೇ ವೇಳೆ, ಶಿವಮೊಗ್ಗದ ಮಂಜುನಾಥ್‌ ಬಡಾವಣೆಯ ನಿವಾಸವೊಂದರ ಮೇಲೂ ದಾಳಿ ನಡೆಸಿದ್ದು, ಸುಮಾರು 2 ಗಂಟೆ ಕಾಲ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬನ ವಿಚಾರಣೆ ನಡೆಸಿ, ಆತನ ಆಧಾರ್‌ ಕಾರ್ಡ್‌ ಸೇರಿದಂತೆ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಿ, ಮರಳಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Mangaluru prisoner: ಗುದದ್ವಾರದಲ್ಲಿ ಮೊಬೈಲ್‌ ಇರಿಸಿ ಜೈಲಿಗೆ ಬಂದ ಕೈದಿ!
ಆತನಿಂದ 14 ತಿಂಗಳ ನರಕ ಯಾತನೆ: ಸುದೀಪ್​, ಶಿವಣ್ಣ ನಾಯಕಿಯ ಬದುಕಿನ ಕರಾಳ ಸ್ಟೋರಿ