ಆಸಿಡ್ ದಾಳಿ ಪ್ರಕರಣ: ಎಸ್ಕೇಪ್ ಆಗ ಹೊರಟ ಆರೋಪಿ ನಾಗೇಶ್ ಕಾಲಿಗೆ ಗುಂಡೇಟು!

Published : May 14, 2022, 08:44 AM ISTUpdated : May 14, 2022, 10:56 AM IST
ಆಸಿಡ್ ದಾಳಿ ಪ್ರಕರಣ: ಎಸ್ಕೇಪ್ ಆಗ ಹೊರಟ ಆರೋಪಿ ನಾಗೇಶ್ ಕಾಲಿಗೆ ಗುಂಡೇಟು!

ಸಾರಾಂಶ

* ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ, ಆರೋಪಿ ನಾಗೇಶ್ ಕಾಲಿಗೆ ಗುಂಡು  * ಕೆಂಗೇರಿಯ ಮೇಲ್ಸೆತುವೆ ಬಳಿ ಘಟನೆ  * ಮೂತ್ರ ವಿಸರ್ಜನೆಗೆ ನಿಲ್ಲಿಸಿ ಅಂತಾ ನೈಸ್ ರೋಡಲ್ಲಿ ಕೇಳಿಕೊಂಡಿದ್ದ ಆರೋಪಿ 

ಬೆಂಗಳೂರು(ಮೇ.14): ಬೆಂಗಳೂರಿನ ಯುವತಿ ಮೇಲೆ ನಡೆದಿದ್ದ ಆಸಿಡ್ ದಾಳಿ ಪ್ರಕರಣದ ಆರೋಪಿ ನಾಗೇಶ್ ಬಾಬು ಅಲಿಯಾಸ್ ನಾಗೇಶ್ ಕಾಲಿಗೆ ಗುಂಡೇಟು ತಗುಲಿದೆ. ಕೆಂಗೇರಿಯ ಮೇಲ್ಸೆತುವೆ ಬಳಿ ಈ ಘಟನೆ ನಡೆದಿದೆ. 

ಹೌದು ತಮಿಳುನಾಡಿನ ತಿರುಣ್ಣಾಮಲೈನಿಂದ ಕರೆದುಕೊಂಡು ಬರುವ ವೇಳೆ ಮೂತ್ರ ವಿಸರ್ಜನೆಗೆ ನಿಲ್ಲಿಸಿ ಎಂದು ಆರೋಪಿ ನೈಸ್ ರೋಡಲ್ಲಿ ಕೇಳಿಕೊಂಡಿದ್ದ. ಆದರೆ ಇದಕ್ಕೆ ಅವಕಾಶ ಕೊಡದ ಪೊಲೀಸರು ಬೆಂಗಳೂರು ಸಿಟಿಯ ಕೆಂಗೇರಿ ಮೇಲ್ಸೇತುವೆ ಬಳಿ ನಿಲ್ಲಿಸಿದ್ದರು. ಈ ವೇಳಡ ನಾಗೇಶ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಕಾನ್ಸ್ಟೇಬಲ್ ಮಹಾದೇವಯ್ಯ ನಾಗೇಶ್‌ನನ್ನು ಹಿಡಿಯಲು ಹೋಗಿದ್ದಾನೆ. ಆದರೆ ಅಷ್ಟರಲ್ಲೇ ಆರೋಪಿ ಮಹಾದೇವಯ್ಯ ಮೇಲೆಡ ಕಲ್ಲಿನಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. 

ಈ ವೇಳೆ  ಇನ್ಸ್ಪೆಕ್ಟರ್ ಪ್ರಶಾಂತ್ ಆರೋಪಿಯನ್ನ ಹಿಡಿಯಲು ಗಾಳಿಯಲ್ಲಿ ಒಂದು ಬಾರಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದರು. ಆದರೆ ನಾಗೇಶ್ ಮಾತ್ರ ಇನ್ಸ್ಪೆಕ್ಟರ್ ಎಚ್ಚರಿಕೆಗೆ ಬಗ್ಗದೆ ತಪ್ಪಿಸಿಕೊಳ್ಳಲು ಮುಂದಾಗಿದ್ದಾನೆ. ಅಗ ಪೊಲೀಸರು ಆರೋಪಿ ನಾಗೇಶ್ ಬಲಗಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಸದ್ಯ ಗುಂಡೇಟು ತಿಂದ ಆರೋಪಿಗೆ ಪ್ರಾಥಮಿಕ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ  ಬಿಜಿಎಸ್ ಆಸ್ಪತ್ರೆಗೆ ಆರೋಪಿಯನ್ನು ದಾಖಲು ಮಾಡಲಾಗಿದೆ. 

"

ಎರಡು ವಾರದ ಬಳಿಕ ಅರೆಸ್ಟ್‌ ಆಗಿದ್ದ ನಾಗೇಶ್

ಅನ್ನಪೂರ್ಣೇಶ್ವರಿನಗರದ ‘ಡಿ’ ಗ್ರೂಪ್‌ ಲೇಔಟ್‌ ನಿವಾಸಿ ನಾಗೇಶ್‌(34) ಬಂಧಿತ. ಈತ ನೆರೆಯ ತಮಿಳುನಾಡಿನ ತಿರುವಣ್ಣಾಮಲೈನ ಶಿವನ ದೇವಾಲಯವಿರುವ ರಮಣ ಆಶ್ರಮದಲ್ಲಿ ಸ್ವಾಮೀಜಿ ಸೋಗಿನಲ್ಲಿ ಧ್ಯಾನ ಮಾಡುವಾಗಲೇ ಪೊಲೀಸರ ಬಲೆಗೆ ಬಿದ್ದಿದ್ದ. ಪೊಲೀಸರು ಆರೋಪಿಯನ್ನು ಶುಕ್ರವಾರ ರಾತ್ರಿ ಬೆಂಗಳೂರಿಗೆ ಕರೆತರುತ್ತಿದ್ದರು.

ಆ್ಯಸಿಡ್‌ ದಾಳಿ ಬಳಿಕ ತಲೆಮರೆಸಿಕೊಂಡಿದ್ದ ನಾಗೇಶ್‌ ಬಂಧನಕ್ಕೆ ಪೊಲೀಸರ 10 ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಚುರುಕುಗೊಳಿಸಲಾಗಿತ್ತು. ಆರೋಪಿಯ ಬಗ್ಗೆ ಸಣ್ಣ ಸುಳಿವು ಸಿಗದ ಪರಿಣಾಮ ಕನ್ನಡ, ತೆಲುಗು, ತಮಿಳು, ಇಂಗ್ಲಿಷ್‌ ಭಾಷೆಯಲ್ಲಿ ಆರೋಪಿಯ ಭಾವಚಿತ್ರ ಸಹಿತ ಕರಪತ್ರ ಮುದ್ರಿಸಿ ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಕೇರಳ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳ ಸಾರ್ವಜನಿಕ ಸ್ಥಳಗಳು, ದೇವಸ್ಥಾನಗಳು, ಆಶ್ರಯಮಗಳು, ಮಠಗಳು ಸೇರಿದಂತೆ ಸಾರ್ವಜನಿಕರು ಹೆಚ್ಚು ಸೇರುವ ಸ್ಥಳಗಳಲ್ಲಿ ಹಂಚಲಾಗಿತ್ತು.

ಭಕ್ತರ ಸೋಗಿನಲ್ಲಿ ಆರೋಪಿಗೆ ಬಲೆ:

ಪೊಲೀಸರ ಒಂದು ತಂಡ ಗುರುವಾರ ತಮಿಳುನಾಡಿನ ತಿರುವಣ್ಣಾಮಲೈಯಲ್ಲಿ ಶಿವನ ದೇವಾಲಯವಿರುವ ರಮಣ ಆಶ್ರಮದಲ್ಲಿಯೂ ಕರಪತ್ರ ಹಂಚಿತ್ತು. ಈ ಕರಪತ್ರದಲ್ಲಿ ಮುದ್ರಿತವಾಗಿದ್ದ ಭಾವಚಿತ್ರ ಗಮನಿಸಿದ್ದ ಸ್ಥಳೀಯರು ಕೆಲ ದಿನಗಳಿಂದ ಆಶ್ರಮದಲ್ಲಿ ಕಾವಿಧಾರಿಯಾಗಿ ಇರುವ ನಾಗೇಶ್‌ನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಮಾಹಿತಿ ಆಧರಿಸಿ ಪೊಲೀಸರು ಶುಕ್ರವಾರ ಸಂಜೆ ಭಕ್ತರ ಸೋಗಿನಲ್ಲಿ ಆಶ್ರಮಕ್ಕೆ ತೆರಳಿ ಕಾವಿಧಾರಿಯಾಗಿದ್ದ ನಾಗೇಶ್‌ನ ಚಲನವಲನದ ಮೇಲೆ ನಿಗಾವಹಿಸಿದ್ದರು. ಬಳಿಕ ಆಶ್ರಮದ ಮೇಲ್ವಿಚಾರಕರನ್ನು ಸಂಪರ್ಕಿಸಿ ನಾಗೇಶ್‌ನ ಬಗ್ಗೆ ವಿಚಾರಿಸಿದ್ದಾರೆ. ಬಳಿಕ ಆರೋಪಿಯನ್ನು ವಶಕ್ಕೆ ಪಡೆದು ಕಾವಿಬಟ್ಟೆಕಳಚಿಸಿ ವಿಚಾರಣೆ ಮಾಡಿದಾಗ ನಾಗೇಶನ್‌ ನಿಜ ಸ್ವರೂಪ ಬೆಳಕಿಗೆ ಬಂದಿದೆ.

ಏ.28ರಂದು ಆ್ಯಸಿಡ್‌ ದಾಳಿ:

ಹೆಗ್ಗನಹಳ್ಳಿ ನಿವಾಸಿಯಾಗಿರುವ ಆರೋಪಿ ನಾಗೇಶ್‌ ತನ್ನನ್ನು ಪ್ರೀತಿಸುವಂತೆ 25 ವರ್ಷದ ಯುವತಿ ಹಿಂದೆ ಬಂದಿದ್ದ. ಪ್ರೀತಿ ನಿರಾಕರಿಸಿದ್ದ ಯುವತಿ ತನ್ನಪಾಡಿಗೆ ತಾನು ಇದ್ದಳು. ಎಂಕಾಂ ಪದವಿಧರೆಯಾದ ಯುವತಿ ಖಾಸಗಿ ಫೈನಾನ್ಸ್‌ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದಳು. ಏ.28ರಂದು ಬೆಳಗ್ಗೆ ಸುಂಕದಕಟ್ಟೆಯಲ್ಲಿರುವ ಕಂಪನಿಯ ಕಚೇರಿ ಬಳಿ ಬಂದಿದ್ದಳು. ಈ ವೇಳೆ ಆ್ಯಸಿಡ್‌ ತುಂಬಿದ ಬಾಟಲಿಯೊಂದಿಗೆ ಪ್ರತ್ಯಕ್ಷನಾದ ಕಿಡಿಗೇಡಿ ನಾಗೇಶ್‌, ಏಕಾಏಕಿ ಯುವತಿ ಮೇಲೆ ಆ್ಯಸಿಡ್‌ ದಾಳಿ ನಡೆಸಿ ಪರಾರಿಯಾಗಿದ್ದ. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ನಾಗೇಶ್‌ ಆ್ಯಸಿಡ್‌ ದಾಳಿ ಬಳಿಕ ಕೆಲ ವಕೀಲರನ್ನು ಸಂಪರ್ಕಿಸಿ ತನ್ನ ಪರ ವಕಾಲತ್ತು ವಹಿಸುವಂತೆ ದುಂಬಾಲು ಬಿದ್ದಿದ್ದ. ಆದರೆ, ಇದು ಗಂಭೀರ ಪ್ರಕರಣವಾಗಿದ್ದರಿಂದ ವಕೀಲರು ವಕಾಲತ್ತು ವಹಿಸಲು ಹಿಂದೇಟು ಹಾಕಿದ್ದರು. ಈ ವೇಳೆ ಆರೋಪಿ ಮೆಜೆಸ್ಟಿಕ್‌ನಲ್ಲಿ ದ್ವಿಚಕ್ರ ವಾಹನ ಬಿಟ್ಟು ಮೊಬೈಲ್‌ ಸ್ವಿಚ್‌್ಡ ಆಫ್‌ ಮಾಡಿಕೊಂಡು ಪರಾರಿಯಾಗಿದ್ದ. ಮತ್ತೊಂದು ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆಗೆ ಇಳಿದಿದ್ದರು. 15 ದಿನ ಕಳೆದರೂ ಆರೋಪಿಯ ಸುಳಿವು ಪತ್ತೆಯಾಗಿರಲಿಲ್ಲ. 16ನೇ ದಿನ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ದೈವಭಕ್ತ ಕಿಡಿಗೇಡಿ!

ಆರೋಪಿ ನಾಗೇಶ್‌ ಅಪ್ಪಟ ದೈವ ಭಕ್ತನಾಗಿದ್ದ. ಬೆಂಗಳೂರಿನಲ್ಲಿ ಇರುವಾಗಲೂ ಮಠ, ದೇವಸ್ಥಾನ, ಧಾರ್ಮಿಕ ಸ್ಥಳಗಳಿಗೆ ಹೋಗುತ್ತಿದ್ದ. ಮನೆಯಲ್ಲೂ ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ಮುಜುಗರದ ಸ್ವಭಾವ ಹೊಂದಿದ್ದ. ಆ್ಯಸಿಡ್‌ ದಾಳಿ ಬಳಿಕ ಆರೋಪಿ ಸ್ವಾಮೀಜಿ ವೇಷತೊಟ್ಟು ತಲೆಮರೆಸಿಕೊಂಡಿದ್ದ. ಆರೋಪಿಯು ತಿರುವಣ್ಣಾಮಲೈನ ಶಿವನ ದೇವಾಲಯವಿರುವ ರಮಣ ಆಶ್ರಮದಲ್ಲಿ ಖಾವಿಧಾರಿಯಾಗಿ ಧಾನ್ಯ, ಜಪ-ತಪ ಮಾಡಿಕೊಂಡಿದ್ದ. ಆಶ್ರಮದಲ್ಲಿ ಉಚಿತ ಊಟ, ವಸತಿ ಸೌಲಭ್ಯ ಇದ್ದಿದ್ದರಿಂದ ಆರೋಪಿಯು ಕಾವಿಧಾರಿಯಾಗಿ ತನ್ನ ಗುರುತು ಮರೆಮಾಚಿಕೊಂಡು ಕಾಲ ಕಳೆಯುತ್ತಿದ್ದ. ಅಲ್ಲಿಗೆ ಬರುವ ಭಕ್ತರಿಗೆ ತಾನು ಸ್ವಾಮೀಜಿ ಎಂದು ನಂಬಿಸಿದ್ದ.

ಸಂತ್ರಸ್ತೆ ಚೇತರಿಕೆ

ಆ್ಯಸಿಡ್‌ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಸಂತ್ರಸ್ತೆಗೆ ನಗರದ ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹಲವು ಶಸ್ತ್ರ ಚಿಕಿತ್ಸೆ ಬಳಿಕ ಕೊಂಚ ಚೇತರಿಸಿಕೊಂಡಿರುವ ಸಂತ್ರಸ್ತೆಯನ್ನು ಐಸಿಯ ಘಟಕದಿಂದ ಸುಟ್ಟು ಗಾಯಾಗಳ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಇದೀಗ ಯುವತಿ ಕೊಂಚ ಮಾತನಾಡಲು ಆರಂಭಿಸಿದ್ದಾಳೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆ್ಯಸಿಡ್‌ ಹಾಕಿದಾಗ ನಾಗೇಶ್‌ಗೂ ಗಾಯವಾಗಿತ್ತು

ಆರೋಪಿ ನಾಗೇಶ್‌ ಯುವತಿ ಮೇಲೆ ಆ್ಯಸಿಡ್‌ ದಾಳಿ ಮಾಡುವಾಗ ಆತನ ಬಲಗೈ ಮೇಲೂ ಆ್ಯಸಿಡ್‌ ಬಿದ್ದು ಗಾಯವಾಗಿತ್ತು. ಆರೋಪಿಯು ರಮಣ ಆಶ್ರಮದಲ್ಲಿ ಸ್ವಾಮೀಜಿ ಸೋಗಿನಲ್ಲಿ ಧ್ಯಾನ, ಜಪ-ತಪ ಮಾಡುವಾಗ ಹೆಗಲ ಮೇಲೆ ಖಾವಿ ಬಟ್ಟೆಹಾಕಿಕೊಳ್ಳುತ್ತಿದ್ದ. ಈ ವೇಳೆ ಆತನ ಕೈ ಮೇಲಿನ ಗಾಯ ಕಾಣುತಿತ್ತು. ಇದನ್ನು ಗಮನಿಸಿದ್ದ ಸ್ಥಳೀಯ ಭಕ್ತರು, ಕರಪತ್ರದಲ್ಲಿದ್ದ ಭಾವಚಿತ್ರವನ್ನು ನೋಡಿ ಅನುಮಾನಗೊಂಡಿದ್ದರು. ಕರಪತ್ರದಲ್ಲಿದ್ದ ಪೊಲೀಸರ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿ ಆರೋಪಿಯ ಬಗ್ಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಸ್ರೇಲ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ: ಹಳೇ ಆರೋಪಿ ರಾಜಗಿರಿ ಕೈವಾಡ?
ರಾಯಚೂರು: ಎರಡು ಬುಲೆರೋಗಳ ನಡುವೆ ಭೀಕರ ಡಿಕ್ಕಿ; ಅಪ್ಪ-ಮಗ ಸೇರಿ ಐವರು ಬಲಿ, ಹಲವರು ಗಾಯ, ಮೂರು ಕುರಿಗಳು ಸಾವು!