ವಿಜಯಪುರ: PWD ಇಂಜಿನಿಯರ್ ನೇಮಕಾತಿ ಅಕ್ರಮದಲ್ಲಿ ಶಿಕ್ಷಕನ ಕೈವಾಡ, ಅಮಾನತು

By Manjunath NayakFirst Published Sep 23, 2022, 3:42 PM IST
Highlights

PWD Engineer Recruitment Scam: ಪಿಎಸ್‌ಐ, ಶಿಕ್ಷಕರ ನೇಮಕಾತಿ ಅಕ್ರಮ ಬೆನ್ನಲ್ಲೇ ವಿಜಯಪುರ ಜಿಲ್ಲೆಗೆ ಪಿಡಬ್ಲ್ಯೂಡಿ ಇಂಜನಿಯರ್ ಗಳ ನೇಮಕಾತಿ ಕಳಂಕವೂ ತಟ್ಟಿದೆ

ವರದಿ: ಷಡಕ್ಷರಿ ಕಂಪೂನವರ್, ಏಷ್ಯಾನೆಟ್ ಸುವರ್ಣ ನ್ಯೂಸ್ 

ವಿಜಯಪುರ (ಸೆಪ್ಟೆಂಬರ್ 23): ಪಿಎಸ್‌ಐ, ಶಿಕ್ಷಕರ ನೇಮಕಾತಿ ಅಕ್ರಮ ಬೆನ್ನಲ್ಲೇ ಜಿಲ್ಲೆಗೆ ಪಿಡಬ್ಲ್ಯೂಡಿ ಇಂಜನಿಯರ್ ಗಳ ನೇಮಕಾತಿ ಕಳಂಕವೂ ತಟ್ಟಿದೆ. ಲೋಕೋಪಯೋಗಿ ಇಲಾಖೆಯ ಅಭಿಯಂತರರ ನೇಮಕಾತಿ ಪರೀಕ್ಷೆಯ ಅಕ್ರಮ ನೇಮಕಾತಿಯಲ್ಲಿ  ಜಿಲ್ಲೆಯ  ಶಿಕ್ಷಕರೊಬ್ಬರ ಕೈವಾಡವಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆ ಶಿಕ್ಷಕನನ್ನು ಅಮಾನತು ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಚಾಲಾಕಿ ಶಿಕ್ಷಕ ಮಾತ್ರ ಪೊಲೀಸರ ಹಾಗೂ ಸಿಓಡಿಯವರ ಕಣ್ತಪ್ಪಿಸಿಕೊಂಡು ಓಡಾಡುತ್ತಿದ್ದಾನೆ. 

ಸಿಂದಗಿ ಮೂಲದ ಶಿಕ್ಷಕನಿಂದ ಅಕ್ರಮ: ಜಿಲ್ಲೆಯ ಸಿಂದಗಿ ತಾಲೂಕಿನ ಗುತ್ತರಗಿಯ ಸರ್ಕಾರಿ ಮಾದರಿ ಪ್ರಾಥಮಿ ಶಾಲೆ ಪದವೀಧರ ಶಿಕ್ಷಕ ಗೊಲ್ಲಾಳಪ್ಪ ಅವರನ್ನು, ಪ್ರಶ್ನೆ  ಪತ್ರಿಕೆಯನ್ನು ಮೊಬೈಲನಲ್ಲಿ ಪೋಟೋ ಹಿಡಿದುಕೊಂಡು, ಕೀ ಉತ್ತರ ಸಿದ್ಧ ಮಾಡಲು ನೆರವಾಗಿರುವದರಿಂದ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವದರಿಂದ ಅನ್ನಪೂರ್ನೆಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ. 

ಕಲ್ಬುರ್ಗಿಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣವಾಗಿದ್ದ ಶಿಕ್ಷಕ: ಗುತ್ತರಗಿ ಸರಕಾರಿ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಇವರು,  ಕೆ.ಪಿ.ಎಸ್.ಸಿ ಆಯೋಗದ ಪಿಡಬ್ಲೂಡಿ ಇಲಾಖೆಯ ಅಸಿಸ್ಟಂಟ್ ಇಂಜನೀಯರಿಂಗ್ ಹುದ್ದೆಯ ಪರೀಕ್ಷೆಯಲ್ಲಿ, ಪರೀಕ್ಷಾ ಕೇಂದ್ರವಾದ ಕಲಬುರ್ಗಿಯ ಬಾಲಾಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಶ್ನೆ ಪತ್ರಿಕೆಯ ಸೋರಿಕೆಗೆ ಕಾರಣವಾಗಿದ್ದರು. 

ಹೀಗಾಗಿ ಇವರ ಮೇಲೆ ಮೋಸ, ವಂಚನೆಯ ಹಾಗೂ ಇದಕ್ಕೆ ಸಂಬಂಧಿಸಿದ ಪ್ರಕರಣಗಳು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಶಿಕ್ಷಕನ ಬಂಧನಕ್ಕೂ ಪೊಲೀಸರು ಬಲೆ ಬಿಸಿದ್ದರು, ಆದರೆ ಶಿಕ್ಷಕ ಮಾತ್ರ ಚಳ್ಳೆ ಹಣ್ಣು ತಿನ್ನಿಸಿ ಓಡಾಡ್ತಿದ್ದಾನೆ.

ನೇಮಕ ಹಗರಣ ಬಗ್ಗೆ ಜಟಾಪಟಿ, ಕೋಲಾಹಲ: ಸದನದಲ್ಲಿ ಎಸ್‌ಐ ಕದನ

ಶಿಕ್ಷಕನ ಹಿಂದೆ ಪ್ರಭಾವಿ ಕೈಗಳು..!?: ಈ ಶಿಕ್ಷಕನ ಮೇಲೆ ಕೇವಲ ಲೋಕೋಪಯೋಗಿ ಇಲಾಖೆ ಅಲ್ಲದೇ, ವಿವಿಧ ಇಲಾಖೆಗಳಿಗೆ ನೇರವಾಗಿ ಅಥವಾ ಕೆಪಿಎಸ್ ಸಿ ಮೂಲಕ  ನಡೆಯುವ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅಕ್ರಮವಾಗಿ ನೇಮಕ ಮಾಡಿದ ಆರೋಪವೂ ಇದೆ, ಅಲ್ಲದೆ 10ಕ್ಕೂ ಹೆಚ್ಚು ಪಿಎಸೈ ಗಳನ್ನು ಅಕ್ರಮವಾಗಿ ನೇಮಕ ಮಾಡಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ. 

ಇಷ್ಟಿದ್ದರೂ ಕೂಡಾ ಆತ ಪೊಲೀಸರ ಕಣ್ತಪ್ಪಿಸಿ ಓಡಾಡಿಕೊಂಡಿರುವುದರಿಂದ ಆತನ ಹಿಂದೆ ಪ್ರಭಾವಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆ ಮೂರ್ನಾಲ್ಕು ಬಾರಿ ಅರೆಸ್ಟ್ ಮಾಡಲು ಬಂದಾಗಲೊಮ್ಮೆ ಪೊಲೀಸರ ಕಣ್ಣು ತಪ್ಪಿಸಿ ಓಡಾಡಿಕೊಂಡಿದ್ದ.

ಬ್ಲೂಟುತ್ ಬಳಸಿ ಪರೀಕ್ಷಾ ಅಕ್ರಮ:  2021ರ ಡಿಸೆಂಬರ 14 ರಂದು ನಡೆದಿದ್ದ ಲೋಕೋಪಯೋಗಿ ಇಲಾಖೆ ಕಿರಿಯ ಇಂಜಿನಿಯರ್ (ಜೆಇ) ಮತ್ತು ಸಹಾಯಕ ಇಂಜಿನಿಯರ್ (ಎಇ) ನೇಮಕಾತಿ ಪರೀಕ್ಷೆಯಲ್ಲೂ ಅಕ್ರಮ ನಡೆಸಿದ ಆರೋಪ ಈತನ ಮೇಲಿದೆ. ಈ ಪರೀಕ್ಷೆಗೆ ಬ್ಲೂಟೂತ್ ಬಳಸಿ ಅಕ್ರಮವೆಸಗಿರುವುದು ಬೆಳಕಿಗೆ ಬಂದಿದೆ. ಪಿಎಸ್‌ಐ, ಎಫ್‌ಡಿಎ ಪರೀಕ್ಷೆಯಲ್ಲಿಯೂ ಡೀಲ್ ಕುದುರಿಸಿ ಅಕ್ರಮ ನಡೆಸಿದ್ದರ ತನಿಖೆ ಚುರುಕುಗೊಂಡಿರುವ ಹೊತ್ತಿನಲ್ಲೇ ಬೆಳಕಿಗೆ ಬಂದ ಮತ್ತೊಂದು ಹಗರಣ ಇದಾಗಿದೆ.

ಇನ್ನಷ್ಟೂ ಸ್ಪೋಟಕ ವಿಚಾರ ಬಯಲಿಗೆ: ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಪರೀಕ್ಷೆ ಅಕ್ರಮದ ತನಿಖೆಯ ಸಿಐಡಿ ತಂಡಕ್ಕೆ ಪಿಡಬ್ಲ್ಯೂಡಿ ಇಲಾಖೆಯ ಜೆಇ, ಎಇ ಪರೀಕ್ಷೆ ಅಕ್ರಮದ ಬಗ್ಗೆಯೂ ಸ್ಪೋಟಕ ಅಂಶಗಳು ಗೊತ್ತಾಗಿವೆ. ಈಗ ತಲೆ ತಪ್ಪಿಸಿಕೊಂಡಿರುವ ಗೋಲ್ಲಾಳಪ್ಪ ಅವರನ್ನು ವಶಕ್ಕೆ ಪಡೆದರೆ ಇನ್ನಷ್ಟು ಆರೋಪಿಗಳು ಹಾಗೂ ಪ್ರಭಾವಿಗಳ ಹೆಸರು ಬೆಳಕಿಗೆ ಬರುವ ಸಾಧ್ಯತೆಗಳಿವೆ. 

ಪಿಎಸ್‌ಐ ನೇಮಕ ಹಗರಣದ ಕಿಂಗ್‌ಪಿನ್‌ ಆಗಿರುವ ನೀರಾವರಿ ಇಲಾಖೆ ಎಇ ಮಂಜುನಾಥ ಮೇಳಕುಂದಿ ಮತ್ತು ಇನ್ನೊಬ್ಬ ಮಾಸ್ಟರ್ ಮೈಂಡ್ ಆರ್‌.ಡಿ.ಪಾಟೀಲ್ ಜೊತೆಗೆ ಸೇರಿಕೊಂಡು ಇಂಜಿನಿಯರ್ಸ್‌ ನೇಮಕ ಪರೀಕ್ಷೆಯಲ್ಲೂ ಕೈಚಳಕ ತೋರಿಸಿ ಕಳ್ಳಾಟ ನಡೆಸಿದ್ದಾರೆ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ: ಶಿಕ್ಷಕನಾಗಿ ಅಕ್ರಮವೆಸಗಿರುವುದಕ್ಕೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೇ ಸಾಕ್ಷಿ ಎಂದಿವೆ ಸಿಐಡಿ ಮೂಲಗಳು. ಪಿಎಸ್‌ಐ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಬಂಧಿಸಿದ ನಂತರ ಕಲಬುರಗಿ ನೀರಾವರಿ ಇಲಾಖೆ ಅಧಿಕಾರಿಗಳು, ಮೇಲಾಧಿಕಾರಿಗಳಿಗೆ ನೀಡಿರುವ ವರದಿಯಲ್ಲೂ ಲೋಕೋಪಯೋಗಿ ಇಲಾಖೆ ಎಇ ಮತ್ತು ಜೆಇ ನೇಮಕ ಪರೀಕ್ಷೆಯಲ್ಲೂ ಅಕ್ರಮ ನಡೆಸಿದ ಆರೋಪ ಮಂಜುನಾಥ ಮೇಳಕುಂದಿ ಜೊತೆಗೆ ಸಂಪರ್ಕವಿದೆ ಎನ್ನುವ ಅಂಶವನ್ನು  ಉಲ್ಲೇಖ ಮಾಡಲಾಗಿದೆ ಎನ್ನುವುದು ಗೊತ್ತಾಗಿದೆ.

ಶಿಕ್ಷಕರ ನೇಮಕಾತಿ ಅಕ್ರಮ: ಬಿಜೆಪಿ ಮಾಡಿದ ಆರೋಪ ನಮ್ಮ ವ್ಯಾಪ್ತಿಯಲ್ಲಿ ನಡೆದಿಲ್ಲ ಎಂದ ಮಾಜಿ ಶಿಕ್ಷಣ ಸಚಿವ

ಹೊರ ಬೀಳಲಿವೆ ಇನ್ನಷ್ಟು ಅಕ್ರಮ: ಲೋಕೋಪಯೋಗಿ ಇಲಾಖೆಯ ಜ್ಯೂನಿಯರ್ ಇಂಜಿನಿಯರ್ ಹಾಗೂ ಅಸ್ಟಿಸೆಂಟ್ ಇಂಜಿನಿಯರ್ ಹುದ್ದೆಗಳೂ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವುದನ್ನು ವಿಚಾರಣೆ ವೇಳೆ ಸಿಐಡಿ ಪೊಲೀಸರು ಕಂಡುಕೊಂಡಿದ್ದರು.‌ ಅಕ್ರಮ ಬಗ್ಗೆ ಈ ಹಿಂದೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು. ಪ್ರಮುಖ ಆರೋಪಿಯನ್ನು ಕರೆತಂದು ವಿಚಾರಣೆಗೊಳಪಡಿಸಿದ್ದಾರೆ. ಈ ಆರೋಪಿಯನ್ನು ಬಂಧಿಸಿದರೆ ಇನ್ನಷ್ಟು  ಅಕ್ರಮಗಳು ಹೊರಗೆ ಬರಲಿವೆ.

click me!