
ರಾಯಚೂರು (ಜ.25): ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಬೀದಿನಾಯಿಗಳ ಅಟ್ಟಹಾಸ ಮಿತಿಮೀರಿದೆ. ಭಾನುವಾರ ಒಂದೇ ದಿನ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 10 ಜನರ ಮೇಲೆ ನಾಯಿಗಳು ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿವೆ. ಪಟ್ಟಣದ ಪಿಂಜಾರ್ ಓಣಿ ಹಾಗೂ ಸೋಮನಾಥ ನಗರದಲ್ಲಿ ಈ ಘಟನೆ ನಡೆದಿದ್ದು, ಏಕಾಏಕಿ ದಾಳಿ ಮಾಡಿದ ನಾಯಿಯಿಂದಾಗಿ ಜನರು ದಿಕ್ಕಾಪಾಲಾಗಿ ಓಡುವಂತಾಯಿತು.
ರಸ್ತೆಯಲ್ಲಿ ನಡೆದು ಹೋಗುತ್ತಿದ್ದವರು ಹಾಗೂ ಬೈಕ್ ಮೇಲೆ ಸಂಚರಿಸುತ್ತಿದ್ದವರನ್ನು ಗುರಿಯಾಗಿಸಿಕೊಂಡ ನಾಯಿಗಳು ಅಟ್ಟಾಡಿಸಿಕೊಂಡು ಹೋಗಿ ಕಚ್ಚಿವೆ. ಕೆಲವರ ಕಾಲು ಹಿಡಿದು ಎಳೆದಿದ್ದರೆ, ಇನ್ನು ಕೆಲವರ ಮೈ ಮೇಲೆ ಎರಗಿ ಮೈಮೇಲೆಲ್ಲ ಕಚ್ಚಿ ಗಾಯಗೊಳಿಸಿವೆ. ಹುಚ್ಚು ನಾಯಿಗಳೆಂದು ಸ್ಥಳೀಯರು ಶಂಕಿಸಿದ್ದಾರೆ.
ನಾಯಿ ಕಡಿತಕ್ಕೊಳಗಾದ ಹತ್ತು ಜನರನ್ನು ತಕ್ಷಣವೇ ಮಸ್ಕಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ರೇಬಿಸ್ ರೋಗ ನಿರೋಧಕ ಲಸಿಕೆ (Anti-Rabies Vaccine) ನೀಡಿ ಚಿಕಿತ್ಸೆ ಮುಂದುವರಿಸಲಾಗಿದೆ. ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ ಮಸ್ಕಿ ಪುರಸಭೆ ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಸಾರ್ವಜನಿಕರು, ಶಾಲಾ ಮಕ್ಕಳ ಮೇಲೆ ದಾಳಿ ಮಾಡುತ್ತಿರುವ ಬೀದಿ ನಾಯಿಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ವಿಕೋಪಕ್ಕೆ ಹೋಗಲಿದೆ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ