
ಮದ್ದೂರು (ಜು.06): ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಜರುಗಿದೆ. ಅನಿಕೇತನ ವಿದ್ಯಾಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದ ಎಚ್.ಎಲ್.ಮಿಲನಾ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಇದೇ ಗ್ರಾಮದ ಲಕ್ಷ್ಮಿಪ್ರಸಾದ್, ಎಚ್.ಎಸ್.ರಶ್ಮಿ ದಂಪತಿ ಪುತ್ರಿ ಎಚ್.ಎಲ್.ಮಿಲನಾ ಸೇರಿದಂತೆ ಇನ್ನಿಬ್ಬರು ಮಕ್ಕಳಾದ ಮೋಹಿತಾ 7ನೇ ತರಗತಿ, ಪುತ್ರ ಮೋಹಿತ್ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮಿಲನಾ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗೆ ಆಯ್ಕೆ ಆಗಿದ್ದರೂ ಸಹ ಶಾಲೆ ಆಡಳಿತ ಮಂಡಳಿ, ಮುಖ್ಯಶಿಕ್ಷಕಿ ಶೈಲಜಾ ಸೇರಿದಂತೆ ಮೂವರು ಶಿಕ್ಷಕರು ಶಾಲಾ ಶುಲ್ಕ ಪಾವತಿ ಮಾಡುವಂತೆ ವಿದ್ಯಾರ್ಥಿನಿಗೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದರು.
ಪ್ರತಿನಿತ್ಯ ಪ್ರಾರ್ಥನಾ ಸಮಯದಲ್ಲಿ ಭಾಗವಹಿಸಲು ಅವಕಾಶ ಕೊಡದೆ ಬಹಿಷ್ಕಾರ ಹಾಕಿದ್ದರು ಎನ್ನಲಾಗಿದೆ. ಶನಿವಾರ ಸಹ ಪ್ರಾರ್ಥನೆಗೆ ಅವಕಾಶ ಕೊಡದ ಕಾರಣ ಮಿಲನಾ ಮಧ್ಯಾಹ್ನ ಶಾಲೆ ಬಿಟ್ಟ ನಂತರ ಮನೆಗೆ ಧಾವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರು ನೀಡಿದ್ದಾರೆ. ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತ ಬಾಲಕಿಗೆ ಸೂಕ್ತ ನ್ಯಾಯ ದೊರಕಿಸಿಕೊಡುವಂತೆ ದಲಿತ ಸಂಘಟನೆ ಮುಖಂಡರು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ