
ಮಂಡ್ಯ (ಫೆ.10): ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಕ್ಕಮನಕೊಪ್ಪಲು ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬನ್ನೂರಿನಲ್ಲಿ ವ್ಯಾಪಾರಿಯಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಹುಟ್ಟೂರಿನ ಮನೆ ಜಗುಲಿಯ ಮೇಲೆಯೇ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಅಕ್ಕಮನಕೊಪ್ಪಲು ಗ್ರಾಮದ ಮಂಜು (44) ಎಂಬುವವರೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ದುರ್ದೈವಿ. ಮೃತ ವ್ಯಕ್ತಿಯ ಮುಖದ ಮೇಲೆ ಗಂಭೀರ ಗಾಯಗಳಾಗಿದ್ದು, ಕತ್ತು ಬಿಗಿದಿರುವ ಗುರುತುಗಳು ಪತ್ತೆಯಾಗಿವೆ. ಮೃತದೇಹ ಬಿದ್ದಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಅವರ ಬಟ್ಟೆಗಳು ಚಿಲ್ಲಾಪಿಲ್ಲಿಯಾಗಿ ಬಿದ್ದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ದುಷ್ಕರ್ಮಿಗಳು ಎಲ್ಲೋ ಕೊಲೆ ಮಾಡಿ, ಶವವನ್ನು ತಂದು ಮನೆಯ ಜಗುಲಿಗೆ ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಬನ್ನೂರಿನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದ ಮಂಜು, ಪತ್ನಿ ಮತ್ತು ಮಕ್ಕಳೊಂದಿಗೆ ಅಲ್ಲಿಯೇ ವಾಸವಿದ್ದರು. ಸೋಮವಾರದಂದು ಹುಲ್ಲೇಗಾಲ ಗ್ರಾಮದಲ್ಲಿ ನಡೆದ ಸಂಬಂಧಿಕರ ಗೃಹಪ್ರವೇಶ ಸಮಾರಂಭಕ್ಕೆ ತೆರಳಿದ್ದರು. ಸಮಾರಂಭ ಮುಗಿದ ನಂತರ ಅವರು ವಾಪಸ್ ಮನೆಗೆ ಬಾರದಿದ್ದಾಗ ಆತಂಕಗೊಂಡ ಪತ್ನಿ ಹುಡುಕಾಟ ನಡೆಸಿದ್ದರು. ಆದರೆ, ಬೆಳಿಗ್ಗೆ ಹುಟ್ಟೂರಿನ ಮನೆಯ ಜಗುಲಿಯ ಮೇಲೆ ಮಂಜು ಶವವಾಗಿ ಪತ್ತೆಯಾಗಿದ್ದಾರೆ.
ಮಂಜು ಅವರ ಮೈಮೇಲಿದ್ದ ಶರ್ಟ್ ಮತ್ತು ಪ್ಯಾಂಟ್ ದೂರದಲ್ಲಿ ಬಿದ್ದಿರುವುದು ಈ ಘಟನೆಯ ಕ್ರೌರ್ಯವನ್ನು ತೋರಿಸುತ್ತಿದೆ. ಕೊಲೆ ಮಾಡುವ ಮುನ್ನ ಹಂತಕರೊಂದಿಗೆ ಮಂಜು ಅವರು ಸಂಘರ್ಷ ನಡೆಸಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ಕುಟುಂಬಸ್ಥರು ಇದು ನೂರಕ್ಕೆ ನೂರರಷ್ಟು ಕೊಲೆ ಎಂದು ಆರೋಪಿಸಿದ್ದು, ಮಂಜು ಅವರ ಸಹೋದರ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಸಾವಿನ ರಹಸ್ಯ ಪತ್ತೆಗೆ ಪೊಲೀಸರ ಕಾರ್ಯಾಚರಣೆ
ಸ್ಥಳಕ್ಕೆ ಮಳವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ 'ಅನುಮಾನಾಸ್ಪದ ಸಾವು' ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ. ಹಳೇ ದ್ವೇಷವೇ ಅಥವಾ ಬೇರೆ ಯಾವುದಾದರೂ ಕಾರಣಕ್ಕೆ ಈ ಹತ್ಯೆ ನಡೆದಿದೆಯೇ ಎಂಬ ಬಗ್ಗೆ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ