
ತುಮಕೂರು (ಜ.6): ತಾಯಿಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ನೀರಿನ ಸಂಪ್ಗೆ ಹಾರಿ ದಾರುಣವಾಗಿ ಜೀವಬಿಟ್ಟ ಘಟನೆ ತುಮಕೂರು ಜಿಲ್ಲಾ ಕೇಂದ್ರದ ಸಮೀಪವಿರುವ ಸಿಂಗನಹಳ್ಳಿ ಕಾಲೋನಿಯಲ್ಲಿ ನಡೆದಿದೆ. ವಿಜಯಲಕ್ಷ್ಮಿ (26) ಮತ್ತು ಆಕೆಯ ಐದು ವರ್ಷದ ಅವಳಿಜವಳಿ ಮಕ್ಕಳಾದ ಚೇತನ್ ಹಾಗೂ ಚೈತನ್ಯ ಮೃತಪಟ್ಟ ದುರ್ದೈವಿಗಳು.
ಮೃತ ವಿಜಯಲಕ್ಷ್ಮಿ ಅವರ ಪತಿ ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಇಂದು ಮಧ್ಯಾಹ್ನ ಸುಮಾರು 2:30ರ ಹೊತ್ತಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ವಿಜಯಲಕ್ಷ್ಮಿ, ಇಬ್ಬರು ಮಕ್ಕಳನ್ನೂ ಕರೆದುಕೊಂಡು ನೀರಿನ ಸಂಪ್ಗೆ ಬಿದ್ದಿದ್ದಾರೆ. ಸಂಜೆ 6 ಗಂಟೆಯ ಸುಮಾರಿಗೆ ಕುಟುಂಬದವರು ಮತ್ತು ಅಕ್ಕಪಕ್ಕದವರು ಗಮನಿಸಿದಾಗ ಈ ಘೋರ ದುರಂತ ಬೆಳಕಿಗೆ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಕ್ಯಾತಸಂದ್ರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಂಪ್ನಲ್ಲಿದ್ದ ಮೂವರ ಮೃತದೇಹಗಳನ್ನು ಹೊರತೆಗೆದು, ಪ್ರಾಥಮಿಕ ಮಹಜರು ನಡೆಸಲಾಗಿದೆ. ತಾಯಿ ಮತ್ತು ಇಬ್ಬರು ಮಕ್ಕಳ ಅಕಾಲಿಕ ಮರಣವು ಕುಟುಂಬಸ್ಥರು, ಸ್ಥಳೀಯರಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ.
ಮಾನಸಿಕ ಖಿನ್ನತೆಯೇ ಕಾರಣ?
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವಿಜಯಲಕ್ಷ್ಮಿ ಅವರು ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ಮನನೊಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಮಕ್ಕಳೊಂದಿಗೆ ಆತ್ಮ೧ಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.
ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಈ ಘಟನೆಗೆ ಸಂಬಂಧಿಸಿದಂತೆ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಿಜಯಲಕ್ಷ್ಮಿ ಅವರ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣವೇನು? ಕೌಟುಂಬಿಕ ಕಲಹವಿತ್ತೇ ಅಥವಾ ಬೇರೆ ಯಾವುದಾದರೂ ಒತ್ತಡವಿತ್ತೇ ಎಂಬ ನಿಟ್ಟಿನಲ್ಲಿ ಪೊಲೀಸರು ಮೃತರ ಪತಿ ಮತ್ತು ಸಂಬಂಧಿಕರನ್ನು ವಿಚಾರಣೆ ನಡೆಸುತ್ತಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ