
ಮೈಸೂರು (ಅ.31): ನನ್ನ ಮೇಲಿನ ಭಯದಿಂದಾಗಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಒಟ್ಟಾಗಿ ತೊಡೆ ತಟ್ಟುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಮೈಸೂರಿನಲ್ಲಿ ಸುದ್ದಿಗಾರರೊಡನೆ ಮಾತನಾಡಿದ ಸಿದ್ದರಾಮಯ್ಯ ಅವರು, ಎರಡೂ ಪಕ್ಷಗಳು ನನ್ನನ್ನೇ ಗುರಿಯಾಗಿಸಿಕೊಂಡು ತೊಡೆ ತಟ್ಟುತ್ತಿದ್ದಾರೆ. ನನ್ನ ಮೇಲಿನ ಭಯದಿಂದ ಹಾಗೇ ಹೇಳಿಕೆ ನೀಡುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಲ್ಲರೂ ಒಂದಾಗಿ ನನ್ನ ವಿರುದ್ಧ ತೊಡೆ ತಟ್ಟಿದ್ದಾರೆ. ರಾಜ್ಯದ ಜನತೆ ನನ್ನ ಪರವಾಗಿದ್ದಾರೆ ಎಂಬ ಭಯದಿಂದ ಅವರೆಲ್ಲರಿಗೂ ನನ್ನ ಕಂಡರೆ ಭಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಶತಾಯಗತಾಯ ಯತ್ನಿಸುತ್ತಿದ್ದಾರೆ. ಯಾರೂ ನನ್ನನ್ನು
ಗುರಿ ಮಾಡಿಕೊಳ್ಳಲು ಸಾಧ್ಯವಿಲ್ಲ. ರಾಜ್ಯದ ಕಾಂಗ್ರೆಸ್ ಆಡಳಿತ ಸಹಿಸಿಕೊಳ್ಳದೆ ಸುಮ್ಮನೆ ಆರೋಪ ಮಾಡಲಾಗುತ್ತಿದೆ. ಬಿಜೆಪಿಯವರಿಗೆ ಸುಳ್ಳು ಹೇಳೋದು ಬಿಟ್ಟರೆ ಬೇರೇನು ಗೊತ್ತಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನಿಗೆ ಏನೂ ಗೊತ್ತಿಲ್ಲ. ಬಿಜೆಪಿಯವರಷ್ಟು ಕೆಟ್ಟ ರಾಜಕೀಯ ಮಾಡುವವರು ದೇಶದಲ್ಲಿಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿಗೆ ಬರಿ ಆರೋಪ ಮಾಡುವುದೇ ಕೆಲಸ. ಯಡಿಯೂರಪ್ಪ ಮತ್ತು ಕೇಂದ್ರ ಸಚಿವರ ವಿರುದ್ಧ ಹಲವು ಪ್ರಕರಣಗಳಿವೆ. ಹೀಗಿರುವಾಗ ಸಚಿವ ಜಾಜರ್್ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಸಿಎಂ ಹೇಳಿದ್ದಾರೆ.
ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚುವ ಕೆಲಸವನ್ನು ನ.6ರವರೆಗೆ ವಿಸ್ತರಿಸಲಾಗಿದೆ. ಗಡುವು ವಿಸ್ತರಿಸುವಂತೆ ಮೇಯರ್ ಮತ್ತು ಆಯುಕ್ತರು ಕೋರಿದ್ದ ಹಿನ್ನೆಲೆಯಲ್ಲಿ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ಹೇಳಿದರು.