5, 8, 9ನೇ ತರಗತಿ ಬೋರ್ಡ್‌ ಪರೀಕ್ಷೆ ಇರುತ್ತಾ? ರದ್ದಾಗುತ್ತಾ?

By Kannadaprabha NewsFirst Published Mar 19, 2024, 11:58 AM IST
Highlights

ಸೋಮವಾರ ಮೇಲ್ಮನವಿ ಕುರಿತು ರಾಜ್ಯ ಸರ್ಕಾರ ಹಾಗೂ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಒಕ್ಕೂಟಗಳ ಪರ ವಕೀಲರ ವಾದ- ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ತೀರ್ಪು ಕಾಯ್ದಿರಿತು.

ಬೆಂಗಳೂರು(ಮಾ.19):  ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಮುಕ್ತಾಯಗೊಳಿಸಿರುವ ವಿಭಾಗೀಯ ಪೀಠ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.

ಸೋಮವಾರ ಮೇಲ್ಮನವಿ ಕುರಿತು ರಾಜ್ಯ ಸರ್ಕಾರ ಹಾಗೂ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಒಕ್ಕೂಟಗಳ ಪರ ವಕೀಲರ ವಾದ- ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ತೀರ್ಪು ಕಾಯ್ದಿರಿತು.

5, 8 ಮತ್ತು 9ನೇ ತರಗತಿಗೆ ಬೋರ್ಡ್​ ಪರೀಕ್ಷೆಗೆ ಸುಪ್ರೀಂ ತಡೆ, ಪರೀಕ್ಷೆ ಮುಂದೂಡಿದ ಶಿಕ್ಷಣ ಇಲಾಖೆ

ಈ ಮೊದಲು ಬೋರ್ಡ್‌ ಪರೀಕ್ಷೆಯನ್ನು ಪ್ರಶ್ನಿಸಲಾದ ತಕರಾರು ಅರ್ಜಿ ಪುರಸ್ಕರಿಸಿದ್ದ ಏಕಸದಸ್ಯ ನ್ಯಾಯಪೀಠ ಸರ್ಕಾರದ ಎರಡು ಪ್ರತ್ಯೇಕ ಸುತ್ತೋಲೆ ರದ್ದುಪಡಿಸಿ 2024ರ ಮಾ.6ರಂದು ಆದೇಶಿತ್ತು. ಆ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರವು ಮಾ.7ರಂದು ಮೇಲ್ಮನವಿ ಸಲ್ಲಿಸಿತ್ತು. ಅಂದೇ ಈ ಮೇಲ್ಮನವಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ಇದರಿಂದ ಮೂಲ ಅರ್ಜಿದಾರರಾದ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ರುಪ್ಸಾ) ಹಾಗೂ ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ (ಅವರ್‌ ಸ್ಕೂಲ್ಸ್‌) ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದವು.

ಅದರ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ವಿಭಾಗೀಯ ನ್ಯಾಯಪೀಠದ ಆದೇಶಕ್ಕೆ ತಡೆ ನೀಡಿತ್ತು. ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಹೈಕೋರ್ಟ್‌ಗೆ ಪೀಠಕ್ಕೆ ಸೂಚಿಸಿತ್ತು. ಅದರಂತೆ ಮಾ.14ರಿಂದ ಸುದೀರ್ಘವಾಗಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ, ಸೋಮವಾರ ತೀರ್ಪು ಕಾಯ್ದಿರಿಸಿದೆ

5,8,9 ನೇ ತರಗತಿ ಬೋರ್ಡ್ ಎಕ್ಸಾಂಗೆ ಬ್ರೇಕ್, ಸುಪ್ರೀಂ ಕೋರ್ಟ್ ಆದೇಶ

ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಪರ ವಕೀಲರು ವಾದ ಮಂಡಿಸಿ, ಕೇಂದ್ರ ಸರ್ಕಾರ ಅನುಷ್ಠಾನ ಮಾಡಿರುವ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಜಾರಿಯಲ್ಲಿರುವಾಗ ರಾಜ್ಯ ಸರ್ಕಾರಕ್ಕೆ ಸುತ್ತೋಲೆ ಮೂಲಕ ಬೋರ್ಡ್ ಪರೀಕ್ಷೆ ನಡೆಸಲು ಅಧಿಕಾರವಿಲ್ಲ. ರಾಜ್ಯ ಶಿಕ್ಷಣ ಇಲಾಖೆ ಪಠ್ಯಕ್ರಮದಲ್ಲಿ ಬದಲಾವಣೆ ಮಾಡುವಾಗ ವಿದ್ಯಾರ್ಥಿಗಳು ಮತ್ತು ಪೋಷಕರು, ಸಂಬಂಧಪಟ್ಟ ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಚರ್ಚೆ ನಡೆಸದೆ ನಿರ್ಧರಿಸಲಾಗಿದೆ. ಆದ್ದರಿಂದ ಬೋರ್ಡ್ ಮಟ್ಟದ ಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದುಪಡಿಸಿರುವ ಏಕ ಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿಯಬೇಕು ಎಂದು ಕೋರಿದರು.

ರಾಜ್ಯ ಸರ್ಕಾರದ ಪರ ವಕೀಲರು, ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ನಡೆಸುವ ಬೋರ್ಡ್‌ ಪರೀಕ್ಷೆಯಲ್ಲಿ ಯಾವ ವಿದ್ಯಾರ್ಥಿಯನ್ನೂ ಅನುತ್ತೀರ್ಣ ಮಾಡುವುದಿಲ್ಲ. ಕಲಿಕೆ ಗುಣಮಟ್ಟವನ್ನು ವೃದ್ಧಿಸುವ ಹಾಗೂ ವಿದ್ಯಾರ್ಥಿಗಳ ಪ್ರತಿಭೆ ಮೌಲ್ಯಮಾಪನ ಮಾಡುವ ಉದ್ದೇಶದಿಂದ ಪರೀಕ್ಷೆ ನಡೆಸಲಾಗುತ್ತಿದೆ. ಬೋರ್ಡ್‌ ಪರೀಕ್ಷೆ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಆದ್ದರಿಂದ ಏಕ ಸದಸ್ಯ ನ್ಯಾಯಪೀಠದ ಆದೇಶ ರದ್ದುಪಡಿಸಬೇಕು ಎಂದು ಕೋರಿದರು.

click me!