'ಪ್ರತಿಭಾ ಪರೀಕ್ಷೆ’ ಬರೆಯಿರಿ: ವಿದ್ಯಾರ್ಥಿಗಳಿಗೆ ಸಚಿವ ಸುರೇಶ್‌ ಕುಮಾರ್‌ ಮನವಿ

By Kannadaprabha NewsFirst Published Nov 27, 2020, 7:53 AM IST
Highlights

ನ.30 ಅರ್ಜಿ ಸಲ್ಲಿಕೆಗೆ ಕಡೇ ದಿನ| ಜ.24ರಂದು ಪರೀಕ್ಷೆ| ಕೇಂದ್ರ ಮಾನವ ಸಂಪನ್ಮೂಲ ಇಲಾಖೆ (ಎಂಎಚ್‌ಆರ್‌ಡಿ) ರಾಜ್ಯ ಮತ್ತು ರಾಷ್ಟ್ರಮಟ್ಟ ಎರಡು ಹಂತದಲ್ಲಿ ಪ್ರತಿ ವರ್ಷ ಪರೀಕ್ಷೆ| ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಎನ್‌ಟಿಎಸ್‌-ಇ ವಿದ್ಯಾರ್ಥಿ ವೇತನಕ್ಕೆ ಅರ್ಹ| 

ಬೆಂಗಳೂರು(ನ.27): ಎಸ್ಸೆಸ್ಸೆಲ್ಸಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಎನ್‌ಸಿಇಆರ್‌ಟಿ ಮಾರ್ಗದರ್ಶನದಲ್ಲಿ ನಡೆಯುವ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಗೆ (ಎನ್‌ಟಿಎಸ್‌-ಇ) ರಾಜ್ಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಮನವಿ ಮಾಡಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲ ಇಲಾಖೆ (ಎಂಎಚ್‌ಆರ್‌ಡಿ) ರಾಜ್ಯ ಮತ್ತು ರಾಷ್ಟ್ರಮಟ್ಟ ಎರಡು ಹಂತದಲ್ಲಿ ಪ್ರತಿ ವರ್ಷ ಪರೀಕ್ಷೆ ನಡೆಯುತ್ತದೆ. ಪ್ರಸ್ತುತ ರಾಜ್ಯಮಟ್ಟದ ಎನ್‌ಟಿಎಸ್‌-ಇ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು ನ.30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜ.24ರಂದು ಪರೀಕ್ಷೆ ನಡೆಯಲಿದೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ, ಸ್ಥಳೀಯ ಸಂಸ್ಥೆಗಳ ಹಾಗೆಯೇ ದೂರಶಿಕ್ಷಣದಲ್ಲಿ ಅಭ್ಯಸಿಸುತ್ತಿರುವ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಅರ್ಹರು. ವಿದ್ಯಾರ್ಥಿಗಳು ಕೆಎಸ್‌ಇಇಬಿ ವೆಬ್‌ಸೈಟ್‌ (www.kseeb.kar.nic.in) ಮೂಲಕ ಲಾಗಿನ್‌ ಆಗಿ ಅರ್ಜಿ ಸಲ್ಲಿಸಬಹುದು. ಅಥವಾ ಹೆಚ್ಚಿನ ವಿವರಗಳಿಗೆ ತಮ್ಮ ಶಾಲಾ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಕನ್ನಡದಲ್ಲು ಇನ್ನು ಎಂಜಿನಿಯರಿಂಗ್: ಐಐಟಿ, ಎನ್‌ಐಟಿಯಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ!

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ (ಕೆಎಸ್‌ಇಇಬಿ) ಕರ್ನಾಟಕ ಶಾಲಾ ಗುಣಮಟ್ಟಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತು (ಕ್ಯುಎಸ್‌ಕ್ಯುಎಎಸಿ) ವತಿಯಿಂದ ನಡೆಯುವ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಅರ್ಹರಾದವರಿಗೆ ರಾಷ್ಟ್ರಮಟ್ಟದಲ್ಲಿ ಎರಡನೇ ಹಂತದ ಪರೀಕ್ಷೆ ನಡೆಯಲಿದ್ದು ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಎನ್‌ಟಿಎಸ್‌-ಇ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗುತ್ತಾರೆ. ಅರ್ಹರಾದವರಿಗೆ ಪಿಯು ವಿದ್ಯಾಭ್ಯಾಸಕ್ಕೆ ಮಾಸಿಕ 1200 ರು. ಮತ್ತು ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ಮಾಸಿಕ 2000 ರು. ಮತ್ತು ಯುಜಿಸಿ ನಿಯಮಾನುಸಾರ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಹೆಚ್ಚಿನ ವಿವರಗಳಿಗೆ 080-23341615 ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

click me!