ನಿರಂತರ ಪರಿಶ್ರಮದಿಂದ ಯಶಸ್ಸು ಸಾಧಿಸಲು ಸಾಧ್ಯ: ಸಿಎಂ ಬೊಮ್ಮಾಯಿ

By Kannadaprabha NewsFirst Published Dec 22, 2022, 7:30 PM IST
Highlights

ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಬೇಕು. ಯಾವುದೇ ವಿಷಯ ಎದುರಾದಾಗ ಚಿಂತನೆ ನಡೆಸಿ ನಿಮ್ಮ ಯೋಚನಾ ಶಕ್ತಿಯ ಮೂಲಕ ಏಕಾಗ್ರತೆಯಿಂದ ವಿದ್ಯಾಭ್ಯಾಸದತ್ತ ಗಮನ ಕೊಡಬೇಕು. ಕಲಿಕೆ ನಿರಂತರ, ಪ್ರತಿ ನಿತ್ಯ ಎಲ್ಲರೂ ತಮ್ಮ ತಮ್ಮ ಜೀವನದಲ್ಲಿ ಪಾಠಗಳನ್ನು ಕಲಿಯುತ್ತೇವೆ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

ಬೆಳಗಾವಿ(ಡಿ.22): ಜೀವನದಲ್ಲಿ ಯಾವುದೂ ಅಸಾಧ್ಯವಿಲ್ಲ. ನಿರಂತರ ಶ್ರಮ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಬೆಳಗಾವಿ ಶ್ರೀ ನಗರದ ಸಂಗೊಳ್ಳಿ ರಾಯಣ್ಣ ಮಹಾವಿದ್ಯಾಲಯದ ಆವರಣದಲ್ಲಿ ಬುಧವಾರ ನಡೆದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಸಮಯಕ್ಕೆ ಮಹತ್ವ ನೀಡಬೇಕು. ಯಾವುದೇ ವಿಷಯ ಎದುರಾದಾಗ ಚಿಂತನೆ ನಡೆಸಿ ನಿಮ್ಮ ಯೋಚನಾ ಶಕ್ತಿಯ ಮೂಲಕ ಏಕಾಗ್ರತೆಯಿಂದ ವಿದ್ಯಾಭ್ಯಾಸದತ್ತ ಗಮನ ಕೊಡಬೇಕು. ಕಲಿಕೆ ನಿರಂತರ, ಪ್ರತಿ ನಿತ್ಯ ಎಲ್ಲರೂ ತಮ್ಮ ತಮ್ಮ ಜೀವನದಲ್ಲಿ ಪಾಠಗಳನ್ನು ಕಲಿಯುತ್ತೇವೆ ಎಂದು ಹೇಳಿದರು.

ಸ್ಪರ್ಧಾತ್ಮಕ ಪರೀಕ್ಷೆ ಪಾಸು ಮಾಡಿದ ಕೇರಳದ ಈ ಕಾರ್ಮಿಕ ಎಲ್ಲರಿಗೂ ಸ್ಫೂರ್ತಿ!

ವಿದ್ಯಾರ್ಥಿ ಜೀವನ ಬಹಳ ಮಹತ್ವ ಹಾಗೂ ಅಮೂಲ್ಯವಾದದ್ದು. ಮುಂಬರುವ ದಿನಗಳಲ್ಲಿ ವಿದ್ಯಾರ್ಥಿ ಜೀವನ ಸಿಗುವುದಿಲ್ಲ ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಶಿಕ್ಷಣ ಪಡೆದು ಸಮಯದ ಸದುಪಯೋಗ ಪಡೆದುಕೊಂಡು ನಿರಂತರ ಪ್ರಯತ್ನದಿಂದ ಸಾಧನೆ ಮಾಡಬೇಕು ಎಂದು ತಿಳಿಸಿದರು.

ಪ್ರತಿ ವಿಷಯದಲ್ಲಿ ಸಮರ್ಪಕ ಪ್ರತಿಕ್ರಿಯೆ ನೀಡುವ ಮೂಲಕ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಆಗಲಿದೆ. ಸಾಧನೆ ಸರಳವಾಗಿ ದೊರೆಯುವುದಿಲ್ಲ ನಿರಂತರ ಪ್ರಯತ್ನ, ದಿಟ್ಟತನ, ಶ್ರಮ ಎಲ್ಲವೂ ಸಾಧನೆಗೆ ಪೂರಕ ಆಗಲಿದೆ ಎಂದ ಅವರು, ವಿದ್ಯಾರ್ಥಿಗಳು ನಿಮ್ಮ ಕನಸು ನನಸಾಗಿಸಲು ಆತ್ಮವಿಶ್ವಾಸ ಬಹಳ ಮುಖ್ಯ, ಸಂಗೊಳ್ಳಿ ರಾಯಣ್ಣನ ದೇಶ ಪ್ರೇಮ, ತ್ಯಾಗ ಬಲಿದಾನ ಎಲ್ಲ ವಿದ್ಯಾರ್ಥಿಗಳಿಗೆ ಪ್ರೇರಣೆ ಆಗಬೇಕು ಎಂದು ಹೇಳಿದರು.

ನಂದಗಡದಲ್ಲಿ ಮ್ಯೂಸಿಯಂ ನಿರ್ಮಾಣ:

ಈಗಾಗಲೇ ಸಂಗೊಳ್ಳಿಯಲ್ಲಿ .221 ಕೋಟಿ ವೆಚ್ಚದಲ್ಲಿ ಸೈನಿಕ ಶಾಲೆ ನಿರ್ಮಾಣವಾಗಿದೆ. ಅದೇ ರೀತಿಯಲ್ಲಿ .75 ಕೋಟಿ ವೆಚ್ಚದಲ್ಲಿ ನಂದಗಡದಲ್ಲಿ ಮ್ಯೂಸಿಯಂ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಡಾ.ಬಿ.ಆರ್‌. ಅಂಬೇಡ್ಕರ್‌ ಹಾಗೂ ಮಹಾತ್ಮ ಗಾಂಧೀಜಿ ಅವರ ಮೂರ್ತಿ ಪ್ರತಿಷ್ಠಾಪನೆಗೆ ಮುಂದಿನ ವಾರದಲ್ಲಿ ಅಡಿಗಲ್ಲು ಸಮಾರಂಭ ನಡೆಯಲಿದೆ ಎಂದು ಹೇಳಿದರು.

Mysuru : ಶಿಕ್ಷಣ ಇಲಾಖೆ ಕಟ್ಟಡಗಳ ನಿರ್ಮಾಣಕ್ಕೆ 166 ಕೋಟಿ ರು. ಅನುದಾನ

ಉನ್ನತ ಶಿಕ್ಷಣ ಸಚಿವ ಸಿ.ಎನ್‌.ಅಶ್ವತ್ಥನಾರಾಯಣ ಮಾತನಾಡಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ .10 ಕೋಟಿ ಅನುದಾನ ಬಳಸಿ ಬೃಹತ್‌ ಕಟ್ಟಡ ನಿರ್ಮಿಸಲಾಗಿದೆ. ಇಲ್ಲಿ ನಿರ್ಮಿಸಲಾದ ಮಹಾವಿದ್ಯಾಲಯದಲ್ಲಿ ಇನ್ನೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುವುದಕ್ಕೆ ಸರ್ವ ಕ್ರಮಗಳನ್ನು ತೆಗೆದುಕೊಂಡು ಹೆಚ್ಚಿನ ತಂತ್ರಜ್ಞಾನ ಬಳಸಿಕೊಳ್ಳಬೇಕು. ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದೇ ನಮ್ಮೆಲ್ಲರ ಆಶಯವಾಗಿದೆ. ಬೆಳಗಾವಿಯ ಬಾಗೇವಾಡಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವವಿದ್ಯಾಲಯದ ಕ್ಯಾಂಪಸ್‌ ನಿರ್ಮಾಣಕಾರ್ಯ ತ್ವರಿತಗತಿಯಲ್ಲಿ ನಿರ್ವಹಿಸಲು ಸರ್ವಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಇದಕ್ಕೂ ಮುಂಚೆ ರಾಣಿ ಚನ್ನಮ್ಮ ವಿವಿ ಸಹಯೋಗದ ಸಂಗೊಳ್ಳಿ ರಾಯಣ್ಣ ಕಾಲೇಜಿನ ನೂತನ ಕಟ್ಟಡ ಶೀಲಾಫಲಕ ಅನಾವರಣ ಗೊಳಿಸಲಾಯಿತು. ಶಾಸಕ ಅನಿಲ ಬೆನಕೆ ಅಧ್ಯಕ್ಷತೆ ವಹಿಸಿದ್ದರು. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮುಜರಾಯಿ, ಹಜ್‌ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್‌ ಸದಸ್ಯರಾದ ಹಣಮಂತ ನಿರಾಣಿ, ಪ್ರಕಾಶ ಹುಕ್ಕೇರಿ, ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಶಿವಾನಂದ ಗೊರನಾಳೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಾಣಿ ಚನ್ನಮ್ಮ ವಿವಿ ಕುಲಪತಿ ಪ್ರೊ.ರಾಮಚಂದ್ರ ಗೌಡ ನಿರೂಪಿಸಿದರು.

click me!