ಟಿಕೆಟ್ ನಿರಾಕರಿಸಲ್ಪಟ್ಟ ಪಕ್ಷದ ಇಬ್ಬರು ಹಿರಿಯ ನಾಯಕರನ್ನು ಭೇಟಿಯಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ|
ನವದೆಹಲಿ[ಏ.09]: ಲೋಕಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಲ್ಪಟ್ಟಪಕ್ಷದ ಇಬ್ಬರು ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮಾತುಕತೆಯ ವಿವರಗಳು ಬಹಿರಂಗವಾಗಿಲ್ಲವಾದರೂ, ಟಿಕೆಟ್ ನಿರಾಕರಿಸಿದ್ದಕ್ಕೆ ಯಾವುದೇ ವೈಯಕ್ತಿಕ ಕಾರಣಗಳಿಲ್ಲ. 75 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ಬೇಡ ಎಂಬ ಪಕ್ಷದ ನಿರ್ಧಾರವೇ ಕಾರಣ ಎಂಬುದನ್ನು ಉಭಯ ನಾಯಕರಿಗೆ ಶಾ ಮನವರಿಕೆ ಮಾಡಿಕೊಡುವ ಯತ್ನ ಮಾಡಿದ್ದಾರೆ ಎನ್ನಲಾಗಿದೆ.
ಅಡ್ವಾಣಿ ಅವರು ಪ್ರತಿನಿಧಿಸುತ್ತಿದ್ದ ಗಾಂಧೀನಗರ ಕ್ಷೇತ್ರದಲ್ಲಿ ಈ ಬಾರಿ ಸ್ವತಃ ಅಮಿತ್ ಶಾ ಕಣಕ್ಕೆ ಇಳಿದಿದ್ದಾರೆ. ಇನ್ನು ಕಾನ್ಪುರದಿಂದ ಜೋಶಿಗೆ ಟಿಕೆಟ್ ನಿರಾಕರಿಸಲಾಗಿತ್ತು.