ಲೋಕಸಭಾ ಮಹಾ ಸಮರದ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಇದೇ ಸಂದರ್ಭದಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ.
ಬೆಂಗಳೂರು: ಗುರುವಾರ ಹೊರಬೀಳಲಿರುವ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯನ್ನು ಬಿಜೆಪಿ ಹೊಂದಿದೆ.
ಕಳೆದ 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. ಈ ಪೈಕಿ ಉಪಚುನಾವಣೆಯಲ್ಲಿ ಬಳ್ಳಾರಿಯನ್ನು ಕಳೆದುಕೊಂಡಿತ್ತು. ಇದೀಗ ಆ 17 ಸ್ಥಾನಗಳ ಜೊತೆಗೆ ಇನ್ನೂ ಮೂರ್ನಾಲ್ಕು ಸ್ಥಾನಗಳನ್ನು ಹೆಚ್ಚುವರಿಯಾಗಿ ಪಡೆಯುವ ವಿಶ್ವಾಸವನ್ನು ಬಿಜೆಪಿ ವ್ಯಕ್ತಪಡಿಸಿದೆ.
ಹಾಲಿ ಪಕ್ಷದ ವಶದಲ್ಲಿದ್ದ ಕ್ಷೇತ್ರಗಳ ಪೈಕಿ ಬೀದರ್ ಮತ್ತು ಕೊಪ್ಪಳದ ಬಗ್ಗೆ ತುಸು ಅನುಮಾನವಿದ್ದರೂ ಕಡಮೆ ಮತಗಳ ಅಂತರದಿಂದಲಾದರೂ ಗೆಲ್ಲುತ್ತೇವೆ ಎನ್ನುವ ಬಿಜೆಪಿ ನಾಯಕರು, ಇದರೊಂದಿಗೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಕೋಲಾರ ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿ ನೀಡಿರುವುದರಿಂದ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎನ್ನುತ್ತಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರು ಕನಿಷ್ಠ 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಲವಾಗಿ ಪ್ರತಿಪಾದಿಸಿಕೊಂಡೇ ಬರುತ್ತಿದ್ದಾರೆ. ಬುಧವಾರವೂ ಅದನ್ನೇ ಪುನರುಚ್ಚರಿಸಿದ್ದಾರೆ. ಜೊತೆಗೆ ಮತದಾನದ ನಂತರ ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಮತಗಟ್ಟೆ ಮಾಹಿತಿ ಆಧರಿಸಿ ಸಂಗ್ರಹಿಸಿದ ಅಂಕಿ ಅಂಶಗಳ ಪ್ರಕಾರ 20ರಿಂದ 21 ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರವನ್ನು ಬಿಜೆಪಿ ನಾಯಕರು ಹಾಕಿದ್ದಾರೆ. ಕಳೆದ ಉಪಚುನಾವಣೆಯಲ್ಲಿ ಕಳೆದುಕೊಂಡಿದ್ದ ಬಳ್ಳಾರಿ ಈ ಬಾರಿ ಮತ್ತೆ ಬಿಜೆಪಿ ತೆಕ್ಕೆಗೆ ಬರುವ ವಿಶ್ವಾಸವನ್ನೂ ಹೊಂದಿದ್ದಾರೆ.