23ರ ನಂತ್ರ ಎಲ್ಲಿದ್ದೀಯಪ್ಪಾ ಎನ್ನಬೇಕಾಗುತ್ತೆ: ಹೀಗಂತಾ ಸಿಎಂ ಟ್ರೋಲ್ ಮಾಡಿದ್ಯಾರಿಗೆ..?

By Web DeskFirst Published Apr 18, 2019, 5:13 PM IST
Highlights

'ನಿಖಿಲ್ ಎಲ್ಲದ್ದೀಯಪ್ಪಾ' ಸೋಶಿಯಲ್ ಮೀಡಿಯಾದಲ್ಲಿ ಫುಲ್ ಟ್ರೆಂಡ್ ಆಗಿರುವುದು ಎಲ್ಲರಿಗೂ ಗೊತ್ತೆ ಇದೆ. ಇದೀಗ ಸ್ವತಃ ಸಿಎಂ ಕುಮಾರಸ್ವಾಮಿ ಸಹ  ಎಲ್ಲಿದ್ದೀಯಪ್ಪಾ ಅನಂತ್ ಕುಮಾರ್ ಎಂದು ಲೇವಡಿ ಮಾಡಿದ್ದಾರೆ.  

ಕಾರವಾರ,(ಏ.18): ಉತ್ತರ ಕನ್ನಡ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಗೆಲ್ಲಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. 

ಎಲ್ಲಿದ್ದೀಯಪ್ಪಾ ಆನಂದ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಗುತ್ತಿರುವ ಟ್ರೋಲ್ ಬಗ್ಗೆ ಪ್ರತಿಕ್ರಿಯಿಸಿ ಕುಮಾರಸ್ವಾಮಿ, 23ರ ನಂತರ ಎಲ್ಲಿದ್ದೀಯಪ್ಪ ಅನಂತಕುಮಾರ್ ಎನ್ನಬೇಕಾಗುತ್ತದೆ ಎಂದು ತಿರುಗೇಟು ನೀಡಿದರು.

'ನಿಖಿಲ್ ಎಲ್ಲಿದ್ದೀಯಪ್ಪಾ' ವೋಟ್ ಹಾಕಿದ ವಿಡಿಯೋ ಫುಲ್ ವೈರಲ್   

ಕುಮಟಾದಲ್ಲಿ ಆನಂದ್ ಅಸ್ನೋಟಿಕರ್ ಪರವಾಗಿ ಪ್ರಚಾರ ಮಾಡುತ್ತಿದ್ದ ಎಚ್​ಡಿಕೆ, ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ತಮ್ಮ ಪುತ್ರ ನಿಖಿಲ್ ಅವರ ವಿರುದ್ಧ ಆಗುತ್ತಿರುವ ಟ್ರೋಲ್ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ, ತಮ್ಮ ಮಗ ಈ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲುವು ಸಾಧಿಸುತ್ತಾನೆ. ಚುನಾವಣೆ ಮುಗಿದ ಬಳಿಕ ಇವರೆಲ್ಲಾ ಎಲ್ಲಿರುತ್ತಾರೋ ಗೊತ್ತಿಲ್ಲ ಎಂದು ಟಾಂಗ್ ಕೊಟ್ಟರು.

ಮಾಧ್ಯಮಗಳಲ್ಲಿ ಕೇವಲ ಮಂಡ್ಯ ಮತ್ತು ಸುಮಲತಾ ಅವರನ್ನು ಮಾತ್ರ ತೋರಿಸಲಾಗುತ್ತಿದೆ. ಇದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಧ್ಯಮಗಳಲ್ಲಿ ಸ್ಥಾನ ಸಿಗದೇ ಕಳೆದುಹೋಗಿದ್ದಾರೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

click me!