ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಭಾರೀ ಸದ್ದು ಮಾಡುತ್ತಿದೆ. ಒಂದೆಡೆ ಜೆಡಿಎಸ್ ಅಭ್ಯರ್ಥಿಯಾಗಿ ಸಿಎಂ ಪುತ್ರ ನಿಕಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದರೆ, ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ನಟರಾದ ದರ್ಶನ್ ಹಾಗೂ ಯಶ್ ಅವರ ಬೆಂಬಲಕ್ಕೆ ನಿಂತಿದ್ದಾರೆ. ಆದರೀಗ ಸುಮಲತಾ ಬೆಂಬಲಿಸುತ್ತಿರುವ ಯಶ್ ಹಾಗೂ ದರ್ಶನ್ ಗೆ ಹೊಸ ತಲೆನೋವು ಆರಂಭವಾಗಿದೆ. ಏನದು? ಇಲ್ಲಿದೆ ವಿವರ
ಬೆಂಗಳೂರು[ಮಾ.20]: ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಟಿ ಸುಮಲತಾ ಅಂಬರೀಷ್ ಅವರ ಸ್ಪರ್ಧೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಇಳಿದಿರುವ ಸ್ಯಾಂಡಲ್ವುಡ್ ನಟರ ವಿರುದ್ಧ ಜಯ ಕರ್ನಾಟಕ ಸಂಘಟನೆಯು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಚಿತ್ರನಟ ದರ್ಶನ್, ಯಶ್, ದೊಡ್ಡಣ್ಣ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ಬಹಿರಂಗವಾಗಿ ಒಬ್ಬರ ಪರ ಮತಯಾಚಿಸುತ್ತಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆ ಮುಗಿಯುವವರೆಗೂ ಇವರ ಚಲನಚಿತ್ರಗಳನ್ನು ನಿಷೇಧಿಸಬೇಕೆಂದು ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ ದೂರಿನಲ್ಲಿ ತಿಳಿಸಿದ್ದಾರೆ.
ಯಾವುದೇ ಸ್ಟಾರ್ ನಟ ಅಥವಾ ಪ್ರಚಾರಕ ಚುನಾವಣೆಯ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಅವರೆಲ್ಲರೂ ಚುನಾವಣಾ ನೀತಿ ಸಂಹಿತೆ ಅಡಿಯಲ್ಲಿ ಬರುತ್ತಾರೆ. ಹೀಗಾಗಿ ಚಿತ್ರನಟರು ನಟಿಸಿರುವ ಚಿತ್ರಗಳನ್ನು ನಿಷೇಧಿಸಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...