
ಬೆಂಗಳೂರು : ಕಲಬುರ್ಗಿ ಲೋಕಸಭಾ ಕ್ಷೇತ್ರದಿಂದ ಡಾ.ಉಮೇಶ್ ಜಾಧವ್ ಅವರು ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಧವ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿದ್ದಾರೆ. ಅವರು ಕಲಬುರ್ಗಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜಾಧವ್ ಅವರ ರಾಜೀನಾಮೆ ಅಂಗೀಕರಿಸುವ ಪ್ರಕ್ರಿಯೆ ವಿಳಂಬವಾಗಿರುವುದರಿಂದ ಯಾವುದೇ ತೊಂದರೆ ಎದುರಾಗುವುದಿಲ್ಲ. ಈಗಾಗಲೇ ಕಾನೂನು ತಜ್ಞರು ಈ ಬಗ್ಗೆ ಸ್ಪಷ್ಟಅಭಿಪ್ರಾಯ ನೀಡಿದ್ದಾರೆ. ವಿಳಂಬ ಯಾಕಾಗಿದೆ ಎಂಬುದರ ವಿಶ್ಲೇಷಣೆಗೆ ಹೋಗುವುದಿಲ್ಲ. ಆದರೆ, ಜಾಧವ್ ಅವರ ಸ್ಪರ್ಧೆಗೆ ಅಡಚಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.