ರಿಷಬ್ ಶೆಟ್ಟಿ 'ಶಿವಾಜಿ' ಸಿನಿಮಾಗೆ ಭೂಮಿ ಪೆಡ್ನೇಕರ್ ಎಂಟ್ರಿ: ಬೆಳವಡಿ ಮಲ್ಲಮ್ಮ ಪಾತ್ರದಲ್ಲಿ ಬಾಲಿವುಡ್ ನಟಿ

Published : Jul 27, 2026, 05:12 PM IST
Rishab Shetty

ಸಾರಾಂಶ

'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ 'ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್' ತಂಡಕ್ಕೆ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

'ಕಾಂತಾರ' ಖ್ಯಾತಿಯ 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಐತಿಹಾಸಿಕ ಸಿನಿಮಾ 'ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್' ತಂಡಕ್ಕೆ ಬಾಲಿವುಡ್ ನಟಿ ಭೂಮಿ ಪೆಡ್ನೇಕರ್ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಕರುನಾಡಿನ ಧೈರ್ಯ, ಸಾಹಸ ಮತ್ತು ಸ್ವಾಭಿಮಾನದ ಪ್ರತೀಕವಾಗಿರುವ ವೀರಮಹಿಳೆ ಬೆಳವಡಿ ಮಲ್ಲಮ್ಮ ಅವರ ಪಾತ್ರವನ್ನು ಭೂಮಿ ತೆರೆಯ ಮೇಲೆ ಜೀವಂತಗೊಳಿಸಲಿದ್ದಾರೆ.

ಸೋಮವಾರ (ಜುಲೈ 27) ಚಿತ್ರತಂಡ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದು, ಚಿತ್ರದ ಪ್ರಮುಖ ಪಾತ್ರಗಳಲ್ಲಿ ಭೂಮಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದೆ. ಸಂದೀಪ್ ಸಿಂಗ್ ನಿರ್ದೇಶನದ ಈ ಮಹತ್ವಾಕಾಂಕ್ಷೆಯ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದೇ ಚಿತ್ರದಲ್ಲಿ ಬಾಲಿವುಡ್ ನಟರಾದ ಅರ್ಜುನ್ ರಾಂಪಾಲ್ ಹಾಗೂ ವಿವೇಕ್ ಓಬೆರಾಯ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಚಿತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಭೂಮಿ ಪೆಡ್ನೇಕರ್, "ಛತ್ರಪತಿ ಶಿವಾಜಿ ಮಹಾರಾಜರ ಜೀವನ ಮತ್ತು ಪರಂಪರೆಯನ್ನು ಆಧರಿಸಿದ ಈ ಬೃಹತ್ ಸಿನಿಮಾದ ಭಾಗವಾಗಿರುವುದು ನನ್ನ ಪಾಲಿಗೆ ಹೆಮ್ಮೆಯ ಸಂಗತಿ. ಕರ್ನಾಟಕದ ವೀರಮಹಿಳೆ ಬೆಳವಡಿ ಮಲ್ಲಮ್ಮ ಅವರಂತಹ ಐತಿಹಾಸಿಕ ವ್ಯಕ್ತಿತ್ವವನ್ನು ತೆರೆಯ ಮೇಲೆ ಜೀವಂತಗೊಳಿಸುವ ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ" ಎಂದು ಹೇಳಿದ್ದಾರೆ.

ರಿಷಬ್ ಶೆಟ್ಟಿ ಅವರ ಬಗ್ಗೆ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ ಭೂಮಿ, "'ಕಾಂತಾರ' ಸಿನಿಮಾ ನೋಡಿದ ಬಳಿಕ ನಾನು ರಿಷಬ್ ಶೆಟ್ಟಿ ಅವರ ದೊಡ್ಡ ಅಭಿಮಾನಿಯಾಗಿದ್ದೇನೆ. ಅವರ ಅಭಿನಯ ನನ್ನನ್ನು ಆಳವಾಗಿ ಸ್ಪರ್ಶಿಸಿತ್ತು. ನಿರ್ದೇಶಕ ಸಂದೀಪ್ ಸಿಂಗ್ ಈ ಚಿತ್ರದ ಕಥೆ ಹೇಳಿದ ಕ್ಷಣವೇ ಒಪ್ಪಿಕೊಳ್ಳುವ ನಿರ್ಧಾರ ಮಾಡಿದೆ. ಇದು ನನ್ನ ವೃತ್ತಿಜೀವನದಲ್ಲೇ ಇದುವರೆಗೆ ಮಾಡದಿರುವ ಅತ್ಯಂತ ವಿಭಿನ್ನ ಪಾತ್ರ. ನನ್ನನ್ನು ಹೊಸ ಆಯಾಮದಲ್ಲಿ ಪ್ರೇಕ್ಷಕರ ಮುಂದೆ ಪರಿಚಯಿಸುತ್ತಿರುವ ಚಿತ್ರತಂಡಕ್ಕೆ ನಾನು ಕೃತಜ್ಞಳಾಗಿದ್ದೇನೆ" ಎಂದು ತಿಳಿಸಿದ್ದಾರೆ.

ಎರಡು ಭಾಗಗಳಲ್ಲಿ ನಿರ್ಮಿಸುವ ಯೋಜನೆ

ಈ ಬೃಹತ್ ಐತಿಹಾಸಿಕ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಸಂಗೀತ ನೀಡುತ್ತಿದ್ದು, ಖ್ಯಾತ ಗೀತರಚನೆಕಾರ ಪ್ರಸೂನ್ ಜೋಶಿ ಸಾಹಿತ್ಯ ರಚಿಸಲಿದ್ದಾರೆ. ರಿಷಿ ವಿರ್ಮಾನಿ ಚಿತ್ರಕಥೆ ಬರೆದಿದ್ದು, ಸಿನಿಮಾವನ್ನು ಎರಡು ಭಾಗಗಳಲ್ಲಿ ನಿರ್ಮಿಸುವ ಯೋಜನೆ ರೂಪಿಸಲಾಗಿದೆ. ಈ ವರ್ಷಾಂತ್ಯದಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಸದ್ಯ ಭಾರೀ ಪ್ರಮಾಣದ ಪೂರ್ವ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ.

ಈಗಾಗಲೇ ಬಿಡುಗಡೆಯಾಗಿರುವ ರಿಷಬ್ ಶೆಟ್ಟಿ ಅವರ ಛತ್ರಪತಿ ಶಿವಾಜಿ ಮಹಾರಾಜರ ಫಸ್ಟ್ ಲುಕ್ ಪೋಸ್ಟರ್ ಸಿನಿಪ್ರಿಯರ ಗಮನ ಸೆಳೆದಿತ್ತು. ಆರಂಭಿಕ ಯೋಜನೆಯಂತೆ ಚಿತ್ರವನ್ನು 2027ರ ಜನವರಿ 21ರಂದು ಬಿಡುಗಡೆ ಮಾಡುವ ಉದ್ದೇಶವಿದ್ದರೂ, ಚಿತ್ರೀಕರಣ ಇನ್ನೂ ಆರಂಭವಾಗದ ಕಾರಣ ಬಿಡುಗಡೆಯ ದಿನಾಂಕ ಮುಂದೂಡಿಕೆಯಾಗುವ ಸಾಧ್ಯತೆ ಇದೆ.

ಇದಕ್ಕೂ ನಡುವೆ, ರಿಷಬ್ ಶೆಟ್ಟಿ ಪ್ರಶಾಂತ್ ವರ್ಮಾ ನಿರ್ದೇಶನದ ಪೌರಾಣಿಕ ಸಿನಿಮಾ 'ಜೈ ಹನುಮಾನ್' ಚಿತ್ರದ ಚಿತ್ರೀಕರಣದಲ್ಲೂ ತೊಡಗಿಸಿಕೊಂಡಿದ್ದು, ಮೈತ್ರಿ ಮೂವೀ ಮೇಕರ್ಸ್ ನಿರ್ಮಿಸುತ್ತಿರುವ ಈ ಚಿತ್ರವೂ ದೇಶಾದ್ಯಂತ ಸಾಕಷ್ಟು ನಿರೀಕ್ಷೆ ಮೂಡಿಸಿದೆ. 'ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್' ಮೂಲಕ ರಿಷಬ್ ಶೆಟ್ಟಿ ಮತ್ತೊಮ್ಮೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಐತಿಹಾಸಿಕ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

'ಲೀಲಮ್ಮ ನಿನ್ನ ಗಂಡ ಯಾರಮ್ಮ..' ಪುಸ್ತಕದಲ್ಲಿ ಇರೋದೇನು? ಡಾ.ರಾಜ್‌ ಅಭಿಮಾನಿಗಳು ಸಂಭ್ರಮಿಸುತ್ತಿರೋದೇಕೆ?
ರಾಷ್ಟ್ರ ಪ್ರಶಸ್ತಿ ವಿವಾದಕ್ಕೆ ನಟ ಧನುಷ್ ಖಡಕ್ ಕೌಂಟರ್.. 'ಆವತ್ತು ಸಿಗದಿದ್ದಾಗ ಏಕೆ ಚರ್ಚೆ ಆಗಿಲ್ಲ?' ಎಂದ ನಟ!