
ಮುಂಬೈ: ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್, 28 ವರ್ಷದ ಉಡುಪಿ ಮೂಲದ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ ಅಂತಿಮವಾಗಿ ಸೋಮವಾರ ಎಫ್ಐಆರ್ ದಾಖಲಿಸಿದೆ. ಬಾಂಬೆ ಹೈಕೋರ್ಟ್ ನೀಡಿದ ಕಟ್ಟುನಿಟ್ಟಿನ ಆದೇಶದ ಬೆನ್ನಲ್ಲೇ ಸಿಬಿಐ ಈ ಕ್ರಮ ಕೈಗೊಂಡಿದ್ದು, ಎಫ್ಐಆರ್ ನಲ್ಲಿ ದೇಶದ ಪ್ರಭಾವಿ ವ್ಯಕ್ತಿಗಳ ಹೆಸರು ಉಲ್ಲೇಖವಿದೆ.
ದಿಶಾ ಸಾಲಿಯಾನ್ ಅವರು ಜೂನ್ 8, 2020 ರಂದು ಮುಂಬೈನ ಮಲಾಡ್ನಲ್ಲಿರುವ ವಸತಿ ಕಟ್ಟಡವೊಂದರಿಂದ ಬಿದ್ದು ನಿಗೂಢವಾಗಿ ಮೃತಪಟ್ಟಿದ್ದರು. ಈ ಘಟನೆ ನಡೆದ ಕೆಲವೇ ದಿನಗಳಲ್ಲಿ, ಅಂದರೆ ಜೂನ್ 14, 2020 ರಂದು 34 ವರ್ಷದ ನಟ ಸುಶಾಂತ್ ಸಿಂಗ್ ರಜಪೂತ್ ಕೂಡ ಬಾಂದ್ರಾದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದರು. ಕೇವಲ ಆರು ದಿನಗಳ ಅಂತರದಲ್ಲಿ ಸಂಭವಿಸಿದ ಈ ಎರಡೂ ಸಾವುಗಳು ದೇಶಾದ್ಯಂತ ವ್ಯಾಪಕ ಅನುಮಾನ ಹಾಗೂ ಊಹಾಪೋಹಗಳಿಗೆ ಕಾರಣವಾಗಿದ್ದವು. ಆರಂಭದಲ್ಲಿ ಮುಂಬೈ ಪೊಲೀಸರು ಇದನ್ನು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿತ್ತು.
ಸಿಬಿಐ ದಾಖಲಿಸಿರುವ ಎಫ್ಐಆರ್ನಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಹಾಗೂ ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ, ಮಾಜಿ ಗೃಹ ಸಚಿವ ಅನಿಲ್ ದೇಶಮುಖ್, ನಟರಾದ ಡಿನೋ ಮೋರಿಯಾ ಮತ್ತು ಸೂರಜ್ ಪಾಂಚೋಲಿ ಅವರ ಹೆಸರುಗಳು ಸೇರಿವೆ.
ಇಷ್ಟು ಮಾತ್ರವಲ್ಲದೆ ರಿಯಾ ಚಕ್ರವರ್ತಿ, ಶೋಯಿಕ್ ಚಕ್ರವರ್ತಿ, ರೋಹನ್ ರಾಯ್, ಅಮಾನತುಗೊಂಡ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ, ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್, ಡಿಸಿಪಿ ವಿಶಾಲ್ ಠಾಕೂರ್, ಮಾಲ್ವಾನಿ ಪೊಲೀಸ್ ಠಾಣೆಯ ಅಧಿಕಾರಿಗಳು, ಶವಪರೀಕ್ಷೆ ನಡೆಸಿದ ವೈದ್ಯರು ಹಾಗೂ ಕಲಿನಾ ವಿಧಿವಿಜ್ಞಾನ ಪ್ರಯೋಗಾಲಯದ (FSL) ಅಧಿಕಾರಿಗಳು ಸೇರಿದಂತೆ ಹಲವರ ಹೆಸರನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಬಾಂಬೆ ಹೈಕೋರ್ಟ್ಗೆ ಸಲ್ಲಿಸಲಾದ ವರದಿಯ ಆಧಾರದ ಮೇಲೆ, ಸಿಬಿಐ ಈಗ ಕ್ರಿಮಿನಲ್ ಪಿತೂರಿ, ಸಾಮೂಹಿಕ ಅತ್ಯಾchaರ, ಕೊ*ಲೆ ಮತ್ತು ಸಾಕ್ಷ್ಯನಾಶದಂತಹ ಗಂಭೀರ ಆರೋಪಗಳ ಕುರಿತು ತನಿಖೆ ನಡೆಸಲಿದೆ.
ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರ ಆದಿತ್ಯ ಠಾಕ್ರೆ ಸೇರಿದಂತೆ ಸಂಬಂಧಪಟ್ಟ ಸಾರ್ವಜನಿಕ ಸೇವಕರು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಅಧಿಕಾರ ಮತ್ತು ಸರ್ಕಾರಿ ಯಂತ್ರೋಪಕರಣಗಳನ್ನು ದುರುಪಯೋಗಪಡಿಸಿಕೊಂಡು, "ಆತ್ಮHತ್ಯೆಯ ಸುಳ್ಳು ಕಥೆ"ಯನ್ನು ಸೃಷ್ಟಿಸಿ ಪ್ರಚಾರ ಮಾಡಲಾಗಿದೆ ಹಾಗೂ ಸಾಕ್ಷ್ಯಗಳನ್ನು ನಾಶಪಡಿಸಿ ಅಪರಾಧಿಗಳನ್ನು ರಕ್ಷಿಸಲಾಗಿದೆ ಎಂಬ ಆರೋಪಗಳ ಮೇಲೆ ತನಿಖೆ ನಡೆಯಲಿದೆ.
ದಿಶಾ ಸಾಲಿಯಾನ್ ಅವರ ತಂದೆ ಸತೀಶ್ ಸಾಲಿಯಾನ್ ಅವರು ತಮ್ಮ ವಕೀಲ ನಿಲೇಶ್ ಓಜಾ ಅವರ ಮೂಲಕ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿ, ಮಗಳ ಸಾವು ಅತ್ಯಂತ ಅನುಮಾನಾಸ್ಪದವಾಗಿದೆ ಮತ್ತು ಇದು ಕೊ*ಲೆ ಪ್ರಕರಣವಾಗಿರುವುದರಿಂದ ಪುತ್ರಿಯ ಸಾವಿನ ನ್ಯಾಯಕ್ಕಾಗಿ ಸಿಬಿಐ ತನಿಖೆ ಅಗತ್ಯವೆಂದು ಮನವಿ ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ವಿ. ಕೊತ್ವಾಲ್ ಮತ್ತು ಆರ್.ಆರ್. ಭೋನ್ಸಾಲೆ ಅವರಿದ್ದ ಪೀಠವು, ಘಟನೆ ನಡೆದು 6 ವರ್ಷಗಳಾದರೂ ಎಫ್ಐಆರ್ ದಾಖಲಿಸಲು ವಿಫಲವಾದ ಮುಂಬೈ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು, ಪೊಲೀಸ್ ತನಿಖೆಯು ಉತ್ತರಗಳಿಗಿಂತ ಹೆಚ್ಚಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಕಿಡಿಕಾರಿ ಪ್ರಕರಣವನ್ನು ಕೇವಲ ಆಕಸ್ಮಿಕ ಸಾವು ಎಂದು ಪರಿಗಣಿಸಿದ್ದನ್ನು ಪ್ರಶ್ನಿಸಿ ಸಿಬಿಐ ತನಿಖೆಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಈಗ ಸಿಬಿಐ ಎಫ್ಐಆರ್ ದಾಖಲಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.