Chikkamagaluru: ನವರಾತ್ರಿ ಗೊಂಬೆಗಳಲ್ಲಿ ಮೈಸೂರು ರಾಜ ಪರಂಪರೆಯ ಅನಾವರಣ

By Govindaraj SFirst Published Oct 3, 2022, 8:44 PM IST
Highlights

ಶರನ್ನವರಾತ್ರಿ ಹಬ್ಬದ ಅಂಗವಾಗಿ ಚಿಕ್ಕಮಗಳೂರು ನಗರದ ಸುಗ್ಗೀಕಲ್ಲು ಬಡಾವಣೆಯ ಪುರೋಹಿತ ಅಶ್ವಥ್ಥ ನಾರಾಯಣಾಚಾರ್ಯ ವಿ.ಜೋಷಿ ಅವರ ಮನೆಯಲ್ಲಿ ಪ್ರತಿಷ್ಠಾಪಿಸಿರುವ ಸಾಂಪ್ರದಾಯಿಕ ಪಟ್ಟದ ಗೊಂಬೆಗಳು ಮೈಸೂರು ರಾಜ ಪರಂಪರೆಯ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ವೈಭವವನ್ನು ಅನಾವರಣಗೊಳಿಸಿವೆ. 

ವರದಿ: ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು (ಅ.03): ಶರನ್ನವರಾತ್ರಿ ಹಬ್ಬದ ಅಂಗವಾಗಿ ಚಿಕ್ಕಮಗಳೂರು ನಗರದ ಸುಗ್ಗೀಕಲ್ಲು ಬಡಾವಣೆಯ ಪುರೋಹಿತ ಅಶ್ವಥ್ಥ ನಾರಾಯಣಾಚಾರ್ಯ ವಿ.ಜೋಷಿ ಅವರ ಮನೆಯಲ್ಲಿ ಪ್ರತಿಷ್ಠಾಪಿಸಿರುವ ಸಾಂಪ್ರದಾಯಿಕ ಪಟ್ಟದ ಗೊಂಬೆಗಳು ಮೈಸೂರು ರಾಜ ಪರಂಪರೆಯ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ವೈಭವವನ್ನು ಅನಾವರಣಗೊಳಿಸಿವೆ. 

ಯದು ವಂಶಸ್ಥರ ಪರಂಪರೆಯ ಕೆಂಪು ಚಂದನದ ಮರದಲ್ಲಿ ಕೆತ್ತಲಾದ ಪಟ್ಟದ ಗೊಂಬೆಗಳು, ಮೈಸೂರು ಮಹಾರಾಜರ ದಸರಾ ದರ್ಬಾರ್, ಜಂಜೂಸವಾರಿ, ಅರಮನೆ, ಅರಸರ ಸಾಂಪ್ರದಾಯಿಕ ಆಚರಣೆಗಳ ವೈಭವವನ್ನು ಅನಾವರಣಗೊಳಿಸಿದ್ದರೆ, ಇನ್ನೂ ಕೆಲವು ಗೊಂಬೆಗಳು ವಿವಿಧ ದೇವತೆಗಳ ವಿವಿಧ ಭಂಗಿಗಳನ್ನು ಪ್ರದರ್ಶಿಸುತ್ತಿವೆ.

Chikkamagaluru: ಕಾಫಿನಾಡು ಜಿಲ್ಲೆಯ ಹೊರನಾಡು, ಶೃಂಗೇರಿಯಲ್ಲಿ ನವರಾತ್ರಿ ಸಂಭ್ರಮ

ವಿವಾಹ ವೈಭವವನ್ನು ಸಾರುವ ಶ್ರೀನಿವಾಸ ಕಲ್ಯಾಣದ ಗೊಂಬೆಗಳು: ಪದ್ಮಾವತಿ ಹಾಗೂ ಶ್ರೀನಿವಾಸನ ವಿವಾಹದ ವೈಭವವನ್ನು ಸಾರುವ ಶ್ರೀನಿವಾಸ ಕಲ್ಯಾಣದ ಗೊಂಬೆಗಳು ನೋಡುಗರ ಗಮನ ಸೆಳೆಯುತ್ತಿವೆ. ವರನ ದಿಬ್ಬಣವನ್ನು ಎದುರುಗೊಳ್ಳುವುದು, ವರಪೂಜೆ, ಮಾಂಗಲ್ಯ ಧಾರಣೆ, ಲಾಜಾಹೋಮ, ಸಪ್ತಪದಿ ತುಳಿಯುವುದು ಸೇರಿದಂತೆ ಮದುವೆಯ ವಿವಿಧ ಆಚರಣೆಗಳನ್ನು ಸಾರುತ್ತಿವೆ. 

ತಿರುಮಲ ತಿರುಪತಿಯ ಸಪ್ತಗಿರಿ ಬೆಟ್ಟ ಅಲ್ಲಿನ ಪ್ರಕೃತಿಯ ಸೌಂದರ್ಯ, ಶ್ರೀ ವೆಂಕಟೇಶ್ವರ ದೇವಾಲಯದ ಸ್ತಬ್ಧಚಿತ್ರ, ದೇವತೆಗಳು ಮತ್ತು ರಾಕ್ಷಸರ ನಡುವಿನ ಅಮೃತ ಮಥನದ ದೃಶ್ಯಗಳು ಪ್ರಾಚೀನ ಕಾಲದ ಗುರುಕುಲ ಪದ್ಧತಿಯ ಗೊಂಬೆಗಳು ಗಮನ ಸೆಳೆಯುತ್ತಿವೆ. ಶ್ರೀ ಕೃಷ್ಣ ಗೋವರ್ಧನ ಗಿರಿಯನ್ನು ತನ್ನ ಬೆರಳಿನಲ್ಲಿ ಎತ್ತಿ ಹಿಡಿದು ಗೋಪಾಲಕರು ಮತ್ತು ಗೋವುಗಳನ್ನು ರಕ್ಷಿಸುವ ದೃಶ್ಯ, ಕೈಲಾಸ ಪರ್ವತದಲ್ಲಿ ಬ್ರಹ್ಮ, ವಿಷ್ಣು, ನಂದಿ, ಭೃಂಗಿ, ಶಿವಗಣಗಳು, ಋಷಿಮುನಿಗಳ ನಡುವೆ ಶಿವ ಪಾರ್ವತಿಯವರ ಒಡ್ಡೋಲಗದ ದೃಶ್ಯ ಕಣ್ಮನ ಸೆಳೆಯುತ್ತಿವೆ.

ವಿಷ್ಣುವಿನ ದಶಾವತಾರದ ಗೊಂಬೆಗಳು: ಭಗವಾನ್ ಶ್ರೀ ಕೃಷ್ಣನ ಗೀತೋಪದೇಶದ ಗೊಂಬೆ, ಮಹಾ ವಿಷ್ಣುವಿನ ದಶಾವತಾರದ ಗೊಂಬೆಗಳು, ಕೃಷಿ ಚಟುವಟಿಕೆ, ಸಂತೆಯ ದೃಶ್ಯ, ಭಾರತೀಯ ಹಬ್ಬ ಹರಿದಿನಗಳ ಆಚರಣೆಗಳನ್ನು ತೆರೆದಿಡುವ ನೂರಾರು ಗೊಂಬೆಗಳು ನಾಡಿನ ಸಂಸ್ಕೃತಿಯನ್ನು ಸಾರುತ್ತಿವೆ. ಪಟ್ಟದ ಗೊಂಬೆಗಳ ಕುರಿತು ವಿವರಿಸಿದ ಅನುರಾಧ ಜೋಷಿ ತಮ್ಮ ತವರು ಮನೆಯ ನವರಾತ್ರಿ ಹಬ್ಬದ ಸಂಪ್ರದಾಯವನ್ನು ತಾವು ಮುಂದುವರೆಸಿಕೊಂಡು ಬರುತ್ತಿದ್ದು, ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಉಳಿಸುವ ಸಣ್ಣ ಪ್ರಯತ್ನ ಇದಾಗಿದೆ ಎಂದರು. 

ಕಾಫಿನಾಡಿನಲ್ಲಿ ನವರಾತ್ರಿ ಸಂಭ್ರಮ: ದುರ್ಗೆಯ ದರ್ಶನಕ್ಕೆ ಶೃಂಗೇರಿ, ಹೊರನಾಡಲ್ಲಿ ಭಕ್ತ ಸಾಗರ..!

ಆಧುನಿಕತೆಯ ಭರದಲ್ಲಿ ನಮ್ಮ ಮಕ್ಕಳು ಮತ್ತು ಯುವ ಜನತೆ ನಮ್ಮ ಸಂಸ್ಕೃತಿ ಸಂಪ್ರದಾಯ ಮತ್ತು ಆಚರಣೆಗಳನ್ನು ಮರೆಯುತ್ತಿದ್ದಾರೆ. ಹಾಗಾಗಿ ಅವುಗಳನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಪಟ್ಟದ ಗೊಂಬೆಗಳನ್ನು ಪ್ರತಿಷ್ಠಾಪಿಸಲಾಗಿದೆ ಎಂದು ತಿಳಿಸಿದರು.

click me!