ಬೆಂಗಳೂರಿನ ಹುಳಿಮಾವಿನಲ್ಲಿ ವಂದನಾ ಎಂಬ ಗೃಹಿಣಿ ಆ*ತ್ಮಹ*ತ್ಯೆ ಮಾಡಿಕೊಂಡಿದ್ದು, ಇದು ವರದಕ್ಷಿಣೆಗಾಗಿ ನಡೆದ ಕೊಲೆ ಎಂದು ಅವರ ಪೋಷಕರು ಆರೋಪಿಸಿದ್ದಾರೆ. ಮೂರು ತಿಂಗಳ ಮಗುವಿನ ತಾಯಿಯ ಸಾವಿಗೆ ಸಂಬಂಧಿಸಿದಂತೆ ಪತಿ ವಿಕ್ರಂ ಶೇಷ ಮತ್ತು ಅವರ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಬಳಿಯ ನಿವಾಸದಲ್ಲಿ ವಂದನಾ (23) ಎಂಬ ಗೃಹಿಣಿ ಫ್ಯಾನಿಗೆ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ ಎಂಬಾತನ ಜೊತೆ ವಂದನಾ ಅವರ ವಿವಾಹ ಅದ್ದೂರಿಯಾಗಿ ನೆರವೇರಿತ್ತು. ಮದುವೆ ಸಂದರ್ಭದಲ್ಲಿ ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಬೈಕ್ ಹಾಗೂ ಚಿನ್ನಾಭರಣಗಳನ್ನು ವರದಕ್ಷಿಣೆ ರೂಪದಲ್ಲಿ ನೀಡಲಾಗಿತ್ತು. ಪ್ರಸ್ತುತ ಈ ದಂಪತಿಗೆ ಮೂರು ತಿಂಗಳ ಪುಟ್ಟ ಮಗುವಿದೆ.
25
ನಿರಂತರ ವರದಕ್ಷಿಣೆ ಕಿರುಕುಳ ಮತ್ತು ಸಂಧಾನ
ಮದುವೆಯಾದ ಕೆಲವು ದಿನಗಳ ನಂತರ ಪತಿ ವಿಕ್ರಂ ಶೇಷ ಹೆಚ್ಚುವರಿ ವರದಕ್ಷಿಣೆ ತರುವಂತೆ ಪತ್ನಿಯ ಜೊತೆ ಪದೇ ಪದೇ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ವಂದನಾ ಹಲವು ಬಾರಿ ಅಳಲು ತೋಡಿಕೊಂಡಿದ್ದರು. ಈ ಹಿಂದೆ ಎರಡೂ ಕುಟುಂಬಗಳ ನಡುವೆ ರಾಜಿ ಸಂಧಾನ ನಡೆಸಿ, ಬುದ್ಧಿ ಹೇಳಿ ಕಳುಹಿಸಲಾಗಿತ್ತು. ಆದರೂ ಕಿರುಕುಳ ಮಾತ್ರ ನಿಂತಿರಲಿಲ್ಲ ಎಂದು ಕುಟುಂಬಸ್ಥರು ದೂರಿದ್ದಾರೆ.
35
ಅನುಮಾನಾಸ್ಪದ ಸಾವು ಮತ್ತು ಕೊಲೆ ಆರೋಪ
ವಂದನಾ ನೇಣು ಹಾಕಿಕೊಂಡಿದ್ದಾರೆ ಎಂಬ ವಿಷಯ ತಿಳಿದ ತಕ್ಷಣ ಅವರನ್ನು ಪೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಹೋಗುವ ಮೊದಲೇ ವಂದನಾ ಮೃತಪಟ್ಟಿದ್ದರು. ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ವಂದನಾ ಅವರ ಪೋಷಕರು ಆಕ್ರೋಶ ಹೊರಹಾಕಿದ್ದು, "ನಮ್ಮ ಮಗಳು ಆ*ತ್ಮಹ*ತ್ಯೆ ಮಾಡಿಕೊಂಡಿಲ್ಲ, ಬದಲಾಗಿ ವರದಕ್ಷಿಣೆಗಾಗಿ ಆಕೆಯ ಮೇಲೆ ಹಲ್ಲೆ ನಡೆಸಿ ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ" ಎಂದು ಗಂಭೀರವಾಗಿ ಆರೋಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವಂದನಾ ಅವರ ಪೋಷಕರು ನೀಡಿದ ದೂರಿನ ಮೇರೆಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ವಿಕ್ರಂ ಶೇಷ, ಅತ್ತೆ ಅಮೃತ, ಮಾವ ಶ್ರೀನಿವಾಸ್ ಮತ್ತು ಮೈದುನ ವಿನಿಷ್ ಎಂಬುವವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ವರದಕ್ಷಿಣೆ ಕಿರುಕುಳ ಮತ್ತು ಆ*ತ್ಮಹ*ತ್ಯೆಗೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಈ ನಾಲ್ವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.
55
ಮರಣೋತ್ತರ ಪರೀಕ್ಷೆ ಮತ್ತು ತನಿಖೆ
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಹುಳಿಮಾವು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಕಿರುಕುಳದ ಕುರಿತು ಸಾಕ್ಷ್ಯಗಳನ್ನು ಕಲೆಹಾಕುತ್ತಿದ್ದಾರೆ.