ಅವನನ್ನು ಯಾಕೆ ಸೆಲೆಕ್ಟ್ ಮಾಡಿದ್ರು? ಶ್ರೀಲಂಕಾ ಸರಣಿಗೆ ಟೀಂ ಇಂಡಿಯಾದ ಸ್ಟಾರ್ ಆಟಗಾರನ ಆಯ್ಕೆಯ ಬಗ್ಗೆ ಎಬಿ ಡಿವಿಲಿಯರ್ಸ್ ಅಚ್ಚರಿ

Published : Jul 30, 2026, 01:12 PM IST

ಬೆಂಗಳೂರು: ಕಳೆದ ಮಂಗಳವಾರ ಶ್ರೀಲಂಕಾ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ಈ ಪೈಕಿ ಒಬ್ಬ ಆಟಗಾರನ ಆಯ್ಕೆಯ ಬಗ್ಗೆ ದಕ್ಷಿಣ ಆಫ್ರಿಕಾ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.

PREV
16
ಆಗಸ್ಟ್‌ 15ರಿಂದ ಭಾರತ-ಶ್ರೀಲಂಕಾ ನಡುವಿನ ಟೆಸ್ಟ್ ಸರಣಿ ಆರಂಭ

ಮುಂಬರುವ ಆಗಸ್ಟ್‌ 15ರಿಂದ ದ್ವೀಪರಾಷ್ಟ್ರವಾದ ಶ್ರೀಲಂಕಾದಲ್ಲಿ ಭಾರತ ಕ್ರಿಕೆಟ್ ತಂಡವು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಈ ಸರಣಿಯು 2025-27ನೇ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಿಸುವ ನಿಟ್ಟಿನಲ್ಲಿ ಭಾರತ ತಂಡಕ್ಕೆ ಮಹತ್ವದ್ದಾಗಿದೆ. ಈ ಸರಣಿಗೆ ಈಗಾಗಲೇ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಶುಭ್‌ಮನ್ ಗಿಲ್ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.

26
ಲಂಕಾ ಎದುರಿನ ಸರಣಿಗೆ ಮೂವರ ಸ್ಟಾರ್ ಕ್ರಿಕೆಟರ್ಸ್ ಕಮ್‌ಬ್ಯಾಕ್

ಲಂಕಾ ಎದುರಿನ ಟೆಸ್ಟ್‌ ಸರಣಿಗೆ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ, ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ, ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಮ್‌ಬ್ಯಾಕ್ ಮಾಡಿದ್ದಾರೆ. ಹೀಗಿರುವಾಗಲೇ ದಕ್ಷಿಣ ಆಫ್ರಿಕಾ ತಂಡದ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್, ಪಂತ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ್ದರ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.

36
ರಿಷಭ್ ಪಂತ್ ಬಗ್ಗೆ ಡಿವಿಲಿಯರ್ಸ್ ಅಚ್ಚರಿಯ ಹೇಳಿಕೆ

ರಿಷಭ್ ಪಂತ್ ಭಾರತ ತಂಡಕ್ಕೆ ಆಯ್ಕೆಯಾಗಿದ್ದು ನನಗೆ ನಿಜಕ್ಕೂ ಅಚ್ಚರಿ ಮೂಡಿಸಿತು. ನಾವೆಲ್ಲರೂ ಅವರ ಫಿಟ್ನೆಸ್ ಹೇಗಿದೆ ಎನ್ನುವುದನ್ನು ನೋಡಿದ್ದೇವೆ. ಅವರು ಐಪಿಎಲ್ ವೇಳೆಯಲ್ಲಿಯೇ ಅವರು ತಮ್ಮ ಆತ್ಮವಿಶ್ವಾಸ ಕಳೆದುಕೊಂಡಿರುವುದನ್ನು ನಾವೆಲ್ಲರೂ ನೋಡಿದ್ದೇವೆ. ಆದರೆ ದೇಶವನ್ನು ಪ್ರತಿನಿಧಿಸುವಾಗ ಎಲ್ಲಾ ಅಡೆತಡೆಗಳನ್ನು ಮೆಟ್ಟಿನಿಲ್ಲಬಲ್ಲರು. ಅವರು ಲಂಕಾ ಎದುರಿನ ಸರಣಿಯಲ್ಲಿ ಹೇಗೆ ಆಡಲಿದ್ದಾರೆ ಎನ್ನುವ ಕುತೂಹಲವಿದೆ ಎಂದು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಎಬಿಡಿ ಹೇಳಿದ್ದಾರೆ.

46
ಜಡೇಜಾ, ಬುಮ್ರಾ ಕಮ್‌ಬ್ಯಾಕ್ ಬಗ್ಗೆ ಎಬಿಡಿ ಮೆಚ್ಚುಗೆ

ಇನ್ನು ಇದೇ ವೇಳೆ ರವೀಂದ್ರ ಜಡೇಜಾ, ಭಾರತ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದರ ಬಗ್ಗೆ ಎಬಿಡಿ ಸಂತಸ ವ್ಯಕ್ತಪಡಿಸಿದ್ದಾರೆ. 'ತಂಡದಲ್ಲಿ ಜಡೇಜಾ ಹೆಸರಿರುವುದು ನಿಜಕ್ಕೂ ಒಳ್ಳೆಯ ಸಂಗತಿಯಾಗಿದೆ. ಅವರು ಇತ್ತೀಚಿನ ದಿನಗಳಲ್ಲಿ ಯಾವಾಗ ಆಡುತ್ತಾರೆ, ಯಾವಾಗ ಆಡುವುದಿಲ್ಲ ಎನ್ನುವುದೇ ಗೊತ್ತಾಗುತ್ತಿಲ್ಲ. ಇನ್ನು ಬುಮ್ರಾ ಕೂಡಾ ಕಮ್‌ಬ್ಯಾಕ್ ಮಾಡಿರುವುದರಿಂದ ಎದುರಾಳಿ ಬ್ಯಾಟರ್‌ಗಳು ಅವರ ಎದುರು ಎಚ್ಚರಿಕೆಯಿಂದ ಆಡಬೇಕು. ಯಾಕೆಂದರೆ ಅವರೊಬ್ಬ ವಿಶ್ವದರ್ಜೆ ಬೌಲರ್ ಎಂದು ಬುಮ್ರಾರನ್ನು ಕೊಂಡಾಡಿದ್ದಾರೆ.

56
ಲಂಕಾ ಎದುರು ಎರಡು ಪಂದ್ಯಗಳ ಟೆಸ್ಟ್ ಸರಣಿ ಆಡಲಿರುವ ಭಾರತ

ಭಾರತ ತಂಡವು ಮೊದಲು ಗಾಲೆಯಲ್ಲಿ ಆ ಬಳಿಕ ಎರಡನೇ ಟೆಸ್ಟ್ ಪಂದ್ಯವನ್ನು ಕೊಲಂಬೊದಲ್ಲಿ ಆಡಲಿದೆ. ಸದ್ಯ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಭಾರತ ತಂಡವು ಐದನೇ ಸ್ಥಾನದಲ್ಲಿದೆ. ಲಂಕಾ ಎದುರು ಉತ್ತಮ ಪ್ರದರ್ಶನ ತೋರಿ ಟೆಸ್ಟ್ ವಿಶ್ವಕಪ್ ಫೈನಲ್ ಕನಸನ್ನು ಜೀವಂತವಾಗಿಟ್ಟುಕೊಳ್ಳಲು ಭಾರತ ತಂಡ ಎದುರು ನೋಡುತ್ತಿದೆ. ಇನ್ನೊಂದೆಡೆ ಶ್ರೀಲಂಕಾ ಆರನೇ ಸ್ಥಾನದಲ್ಲಿದ್ದು, ತವರಿನಲ್ಲಿ ಗಿಲ್ ಪಡೆಗೆ ಶಾಕ್ ನೀಡಲು ಎದುರು ನೋಡುತ್ತಿದೆ.

66
ಶ್ರೀಲಂಕಾ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಹೀಗಿದೆ:

ಶುಭ್‌ಮನ್ ಗಿಲ್(ನಾಯಕ), ಕೆ ಎಲ್ ರಾಹುಲ್(ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್(ವಿಕೆಟ್ ಕೀಪರ್), ಸಾಯಿ ಸುದರ್ಶನ್*, ಧ್ರುವ್ ಜುರೆಲ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಜಸ್ಪ್ರೀತ್ ಬುಮ್ರಾ*, ಮೊಹಮ್ಮದ್ ಸಿರಾಜ್, ಪ್ರಸಿದ್ದ್ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ ಪಡಿಕ್ಕಲ್, ಸಾರಾನ್ಶ್‌ ಜೈನ್.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories