2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯವನ್ನು ಪಡೆದುಕೊಂಡಿದ್ದು, ಮುಂಬರುವ ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ ಬಹುನಿರೀಕ್ಷಿತ ಏಕದಿನ ವಿಶ್ವಕಪ್ ಟೂರ್ನಿಯು ಜರುಗಲಿದೆ.
2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ, ಏಕದಿನ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು, ಇದಾದ ಬಳಿಕ 2015 ಹಾಗೂ 2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್ ಪ್ರವೇಶಿಸಿತ್ತಾದರೂ, ಪ್ರಶಸ್ತಿ ಸುತ್ತು ಪ್ರವೇಶಿಸಲು ವಿಫಲವಾಗಿತ್ತು.
ಇದೀಗ ಮತ್ತೊಮ್ಮೆ ಏಕದಿನ ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸಿರುವ ಭಾರತ, ತವರಿನಲ್ಲಿ ಎರಡನೇ ಬಾರಿಗೆ ಒಟ್ಟಾರೆ ಮೂರನೇ ಬಾರಿಗೆ ಏಕದಿನ ವಿಶ್ವಕಪ್ ಗೆಲ್ಲಲು ಭಾರತ ತಂಡ ಎದುರು ನೋಡುತ್ತಿದೆ.
ಇದೀಗ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡದ ಕುರಿತಂತೆ ಮಾತನಾಡಿರುವ ಅಜಯ್ ಜಡೇಜಾ, ಅನುಭವಿ ಆಫ್ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡದ ಪಾಲಿಗೆ ಪ್ರಮುಖ ಅಸ್ತ್ರವಾಗಬಲ್ಲರು. ಭಾರತದ ವಾತಾವರಣದಲ್ಲಿ ಅಶ್ವಿನ್ ಪರಿಣಾಮಕಾರಿ ದಾಳಿ ನಡೆಸುತ್ತಾರೆ ಎಂದು ಹೇಳಿದ್ದಾರೆ.
ಸ್ಪಿನ್ ವಿಭಾಗದಲ್ಲಿ ಅಶ್ವಿನ್, ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿರಲು ಬಯಸುತ್ತೇನೆ. ಇನ್ನು ಚಹಲ್ ಕೂಡಾ ಈಗ ಬೌಲಿಂಗ್ ಮಾಡುವ ಅಗತ್ಯವಿಲ್ಲ. ಅಶ್ವಿನ್ ಭಾರತದ ವಾತಾವರಣದಲ್ಲಿ ಮಾರಕ ದಾಳಿ ನಡೆಸಬಲ್ಲವರಾಗಿದ್ದಾರೆ ಎಂದು ಜಡೇಜಾ ಹೇಳಿದ್ದಾರೆ.
ಇನ್ನು ಇದೇ ವೇಳೆ ವೇಗದ ಬೌಲಿಂಗ್ ವಿಭಾಗದಲ್ಲಿ ಅನುಭವಿ ಬೌಲರ್ಗಳಾದ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ತಂಡದಲ್ಲಿರಲಿ. ಅವರಿಬ್ಬರನ್ನು ತಂಡದಿಂದ ಕೈಬಿಡುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.