Ind vs NZ ಕ್ರಿಕೆಟ್ ಸರಣಿ: ಅಭಿಮಾನಿಗಳಿಗೆ ಗುಡ್‌ ನ್ಯೂಸ್ ಕೊಟ್ಟ BCCI..!

First Published Nov 2, 2021, 12:03 PM IST

ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್‌ (ICC T20 World Cup) ಟೂರ್ನಿ ಮುಕ್ತಾಯದ ಬಳಿಕ ಟೀಂ ಇಂಡಿಯಾ (Team India) ತವರಿನಲ್ಲಿ ನ್ಯೂಜಿಲೆಂಡ್ (New Zealand) ವಿರುದ್ದದ ಟಿ20 ಹಾಗೂ ಟೆಸ್ಟ್ ಸರಣಿಯನ್ನು ಆಡಲಿದ್ದು, ಈ ಸರಣಿ ಆರಂಭಕ್ಕೂ ಮುನ್ನ ಬಿಸಿಸಿಐ (BCCI) ಕ್ರಿಕೆಟ್ ಅಭಿಮಾನಿಗಳಿಗೆ ಗುಡ್‌ ನ್ಯೂಸ್ ನ್ಯೂಸ್‌ ನೀಡಿದೆ. ಏನದು ಸಿಹಿ ಸುದ್ದಿ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
 

ಸದ್ಯ ಯುಎಇನಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಸಾಗುತ್ತಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಮೊದಲೆರಡು ಪಂದ್ಯಗಳಲ್ಲಿ ಆಘಾತಕಾರಿ ಸೋಲು ಕಾಣುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ.
 

ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದ 10 ವಿಕೆಟ್‌ಗಳ ಅಂತರದ ಸೋಲು ಕಂಡಿದ್ದ ಟೀಂ ಇಂಡಿಯಾ, ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ದ 8 ವಿಕೆಟ್‌ಗಳ ಸೋಲು ಕಾಣುವುದರೊಂದಿಗೆ ವಿರಾಟ್ ಪಡೆ ತನ್ನ ಸೆಮೀಸ್ ಹಾದಿಯನ್ನು ಮತ್ತಷ್ಟು ದುರ್ಗಮಗೊಳಿಸಿಕೊಂಡಿದೆ.
 

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯವು ನವೆಂಬರ್ 14ರಂದು ನಡೆಯಲಿದೆ. ಇದಾಗಿ ಮೂರು ದಿನಗಳ ಅಂತರದಲ್ಲಿ ಅಂದರೆ ನವೆಂಬರ್ 17ರಿಂದ ಭಾರತದಲ್ಲಿ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ದ ದ್ವಿಪಕ್ಷೀಯ ಕ್ರಿಕೆಟ್ ಸರಣಿಯನ್ನಾಡಲಿದೆ
 

ನವೆಂಬರ್ 17ರಿಂದ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ನವೆಂಬರ್ 17ರಂದು ಜೈಪುರದಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಇದಾದ ಬಳಿಕ ನವೆಂಬರ್ 19ರಂದು ರಾಂಚಿಯಲ್ಲಿ ಹಾಗೂ ನವೆಂಬರ್ 21ರಂದು ಕೋಲ್ಕತದ ಈಡನ್‌ ಗಾರ್ಡನ್‌ ಮೈದಾನದಲ್ಲಿ ಕೊನೆಯ ಟಿ20 ಪಂದ್ಯ ನಡೆಯಲಿದೆ.

ಇದಾದ ಬಳಿಕ ಕಿವೀಸ್ ತಂಡವು ಭಾರತ ವಿರುದ್ದ 2 ಪಂದ್ಯಗಳ ಟೆಸ್ಟ್ ಚಾಂಪಿಯನ್‌ನಲ್ಲಿ ಪಾಲ್ಗೊಳ್ಳಲಿದ್ದು, ಮೊದಲ ಟೆಸ್ಟ್ ನವೆಂಬರ್ 25ರಿಂದ 29ರವರೆಗೆ ಕಾನ್ಪುರದ ಗ್ರೀನ್ ಪಾರ್ಕ್‌ನಲ್ಲಿ ನಡೆದರೆ, ಡಿಸೆಂಬರ್ 03ರಿಂದ 07ರವರೆಗೆ ಮುಂಬೈನ ವಾಂಖೆಡೆ ಮೈದಾನದಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ.

ಇದೀಗ ನ್ಯೂಜಿಲೆಂಡ್ ವಿರುದ್ದ ತವರಿನಲ್ಲಿ ನಡೆಯಲಿರುವ ಕ್ರಿಕೆಟ್ ಸರಣಿಗೆ ಪ್ರೇಕ್ಷಕರಿಗೆ ಮೈದಾನ ಪ್ರವೇಶಿಸಲು ಅನುಮತಿ ನೀಡಲು ಬಿಸಿಸಿಐ ಮುಂದಾಗಿದೆ. ಈ ಮೂಲಕ ಕ್ರಿಕೆಟ್ ಅಭಿಮಾನಿಗಳು ಸ್ಟೇಡಿಯಂನಲ್ಲಿ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
 

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಸರಣಿಗೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು, ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರು ಮೈದಾನ ಪ್ರವೇಶಕ್ಕೆ ಅನುಮತಿಸಲಾಗುವುದು ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದಾರೆ.
 

ನಾವೀಗಾಗಲೇ ಕ್ರಿಕೆಟ್ ನಡೆಯುವ ರಾಜ್ಯಗಳ ರಾಜ್ಯಸರ್ಕಾರದ ಜತೆ ಮಾತುಕತೆ ನಡೆಸುತ್ತಿದ್ದೇವೆ. ಈ ಮೂಲಕ ರಾಜ್ಯ ಸರ್ಕಾರದ ಕೋವಿಡ್ ನಿಯಮಗಳು ಹಾಗೂ ಪ್ರೋಟೋಕಾಲ್ (ಶಿಷ್ಟಾಚಾರ)ಗಳಿಗನುಗುಣವಾಗಿ, ಪ್ರೇಕ್ಷಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ದಾದಾ ಹೇಳಿದ್ದಾರೆ.

ಟಿ20 ಸರಣಿಗೆ ಪಶ್ಚಿಮ ಬಂಗಾಳ ಕ್ರಿಕೆಟ್ ಸಂಸ್ಥೆಯು 70% ಪ್ರೇಕ್ಷಕರು ಮೈದಾನ ಪ್ರವೇಶಿಸಲು ಅನುಮತಿಸಲಾಗುವುದು. ಇನ್ನುಳಿದಂತೆ ಮುಂಬೈ, ರಾಂಚಿ ಹಾಗೂ ಜೈಪುರದಲ್ಲಿ ಕನಿಷ್ಠ 50% ಪ್ರೇಕ್ಷಕರ ಪ್ರವೇಶಕ್ಕೆ ಅನುಮತಿ ಸಿಗುವ ಸಾಧ್ಯತೆ ದಟ್ಟವಾಗಿದೆ.

ಕಳೆದ ಫೆಬ್ರವರಿಯಲ್ಲಿ ಇಂಗ್ಲೆಂಡ್ ಎದುರು ಭಾರತದಲ್ಲಿ ನಡೆದ ಟೆಸ್ಟ್ ಸರಣಿ ವೇಳೆ ನಿಯಮಿತ ಪ್ರಮಾಣದಲ್ಲಿ ಪ್ರೇಕ್ಷಕರು ಮೈದಾನ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಬಳಿಕ ಕೋವಿಡ್ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಖಾಲಿ ಮೈದಾನದಲ್ಲಿ ಪಂದ್ಯಗಳು ಜರುಗಿದ್ದವು. 

ಇದಾದ ಬಳಿಕ ಭಾರತದ ಚರಣದ ಐಪಿಎಲ್ ಟೂರ್ನಿಗೂ ಮೈದಾನಕ್ಕೆ ಪ್ರೇಕ್ಷಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಸದ್ಯ ಪರಿಸ್ಥಿತಿ ಹತೋಟಿಗೆ ಬಂದ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ಬಿಸಿಸಿಐ ಗುಡ್‌ ನ್ಯೂಸ್ ನೀಡಲು ಮುಂದಾಗಿದೆ.

click me!