ಹರಾರೆ: ಐರ್ಲೆಂಡ್ ಹಾಗೂ ಇಂಗ್ಲೆಂಡ್ ಎದುರಿನ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ, ಇಂದಿನಿಂದ ಜಿಂಬಾಬ್ವೆ ಎದುರಿನ ಮೂರು ಪಂದ್ಯಗಳ ಟಿ20 ಸರಣಿಗೆ ಸಜ್ಜಾಗಿದೆ. ಮೊದಲ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್, 15 ವರ್ಷದ ವೈಭವ್ ಸೂರ್ಯವಂಶಿ ಬಗ್ಗೆ ಅಚ್ಚರಿಯ ಮಾತುಗಳನ್ನಾಡಿದ್ದಾರೆ.
ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವು ಇಂದಿನಿಂದ ಆರಂಭವಾಗಲಿದೆ. ಭಾರತೀಯ ಕಾಲಮಾನ ಇಂದು ಸಂಜೆ. 4.30ಕ್ಕೆ ಸರಿಯಾಗಿ ಪಂದ್ಯ ಆರಂಭವಾಗಲಿದೆ. ಕಳೆದೆರಡು ಟಿ20 ಸರಣಿಯಲ್ಲಿ ಸೋಲು ಕಂಡಿರುವ ಭಾರತ ಇದೀಗ ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದೆ. ಇನ್ನು ಆತಿಥೇಯ ಜಿಂಬಾಬ್ವೆ ತಂಡವು ಹಾಲಿ ಚಾಂಪಿಯನ್ನರಿಗೆ ತಿರುಗೇಟು ನೀಡಲು ಸಜ್ಜಾಗಿದೆ.
26
ನಾಯಕನಾಗಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಶ್ರೇಯಸ್ ಅಯ್ಯರ್
ಹರಾರೆ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಟೀಂ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಪಾಲಿಗೆ ಅಗ್ನಿ ಪರೀಕ್ಷೆಯಾಗಿದೆ. ಯಾಕೆಂದರೆ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಟೀಂ ಇಂಡಿಯಾ ಆಡಿದ ಏಳು ಪಂದ್ಯಗಳ ಪೈಕಿ ಆರು ಪಂದ್ಯಗಳಲ್ಲಿ ಸೋಲು ಕಂಡಿದ್ದರೇ, ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಹೀಗಾಗಿ ಇದೀಗ ಅಯ್ಯರ್ ನಾಯಕತ್ವದಲ್ಲಿ ಭಾರತ ತಂಡವು ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.
36
ವೈಭವ್ ಸೂರ್ಯವಂಶಿ ಇದೀಗ ಎಲ್ಲರ ಕೇಂದ್ರ ಬಿಂದು
ಇನ್ನು ಜಿಂಬಾಬ್ವೆ ಎದುರಿನ ಸರಣಿಯಲ್ಲೂ ಇದೀಗ 15 ವರ್ಷದ ಬಿಹಾರ ಮೂಲದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಸೆಂಟರ್ ಆಫ್ ಅಟ್ರ್ಯಾಕ್ಷನ್ ಎನಿಸಿಕೊಂಡಿದ್ದಾರೆ. ಐಪಿಎಲ್ನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ವೈಭವ್ ಸೂರ್ಯವಂಶಿ, ಇಂಗ್ಲೆಂಡ್ ಎದುರಿನ ಸರಣಿಯಲ್ಲಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು. ಆದರೆ ಮೊದಲ ಮೂರು ಪಂದ್ಯಗಳಲ್ಲಿ ದೊಡ್ಡ ಇನ್ನಿಂಗ್ಸ್ ಕಟ್ಟಲು ವೈಭವ್ಗೆ ಸಾಧ್ಯವಾಗಿರಲಿಲ್ಲ. ಇದೀಗ ಜಿಂಬಾಬ್ವೆ ಎದುರಿನ ಸರಣಿಗೆ ವೈಭವ್ ಆರಂಭಿಕನಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಹೀಗಿರುವಾಗಲೇ ವೈಭವ್ ಬಗ್ಗೆ ಶ್ರೇಯಸ್ ಅಯ್ಯರ್ ಅಚ್ಚರಿಯ ಮಾತುಗಳನ್ನಾಡಿದ್ದಾರೆ.
ಈ ಯುವ ಕ್ರಿಕೆಟಿಗ ತನ್ನ ತಪ್ಪುಗಳನ್ನು ಸುಧಾರಿಸಿಕೊಂಡು ಮುನ್ನಡೆಯಲಿದ್ದಾರೆ ಎನ್ನುವ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ. ಇಂಗ್ಲೆಂಡ್ ಎದುರಿನ ಸರಣಿಯ ಬಳಿಕ ವೈಭವ್ಗೆ ಒಳ್ಳೆಯ ಬ್ರೇಕ್ ಸಿಕ್ಕಿದೆ. ಈ ಸಂದರ್ಭದಲ್ಲಿ ವೈಭವ್ ತಾನು ಮಾಡಿರುವ ತಪ್ಪಿನ ಕುರಿತಂತೆ ಖಂಡಿತವಾಗಿಯೂ ವಿಶ್ಲೇಷಣೆ ಮಾಡಿರುತ್ತಾರೆ. ವೈಯುಕ್ತಿವಾಗಿ ಹೇಳಬೇಕೆಂದರೆ ನಾನು ಅವನಿಗೆ ಹೆಚ್ಚಿಗೆ ಸಲಹೆ ನೀಡುವ ಅಗತ್ಯವಿಲ್ಲ ಎಂದೆನಿಸುತ್ತಿದೆ' ಎಂದಿದ್ದಾರೆ ಕ್ಯಾಪ್ಟನ್ ಶ್ರೇಯಸ್ ಅಯ್ಯರ್.
56
ಇಂಗ್ಲೆಂಡ್ ಎದುರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ವೈಭವ್ ಸೂರ್ಯವಂಶಿ
ಇಂಗ್ಲೆಂಡ್ ಎದುರಿನ ಮೂರು ಪಂದ್ಯಗಳಲ್ಲಿ ವೈಭವ್ ಸೂರ್ಯವಂಶಿ ಕ್ರಮವಾಗಿ 14,13 ಹಾಗೂ 15 ಹೀಗೆ ಒಟ್ಟು 42 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಇಂಗ್ಲೆಂಡ್ ಎದುರಿನ ಐದನೇ ಪಂದ್ಯದಲ್ಲಿ ವೈಭವ್ ಬೆಂಚ್ ಕಾಯಿಸಿದ್ದರು. ಇದೀಗ ಜಿಂಬಾಬ್ವೆ ಎದುರಿನ ಮೂರು ಪಂದ್ಯಗಳಲ್ಲೂ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗಲಿದ್ದು, ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಇದು ಸುವರ್ಣಾವಕಾಶವಾಗಿದೆ.
66
ದೊಡ್ಡ ಇನ್ನಿಂಗ್ಸ್ ಕಟ್ಟುವ ನಿರೀಕ್ಷೆಯಲ್ಲಿ ವೈಭವ್ ಸೂರ್ಯವಂಶಿ
ಅಂದಹಾಗೆ ಕೆಲ ತಿಂಗಳ ಹಿಂದಷ್ಟೇ ಇದೇ ಹರಾರೆ ಮೈದಾನದಲ್ಲಿ ನಡೆದ ಐಸಿಸಿ ಅಂಡರ್-19 ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ನಲ್ಲಿ ವೈಭವ್ ಸೂರ್ಯವಂಶಿ ವಿಸ್ಪೋಟಕ ಶತಕ ಸಿಡಿಸಿ ಭಾರತ ಯುವ ಪಡೆ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಈ ಮೈದಾನದಲ್ಲಿ ಈಗಾಗಲೇ ಆಡಿದ ಅನುಭವವಿರುವ ವೈಭವ್ ಸೂರ್ಯವಂಶಿ, ಇಂದು ಜಿಂಬಾಬ್ವೆ ಎದುರು ಒಳ್ಳೆ ಇನ್ನಿಂಗ್ಸ್ ಕಟ್ಟುವ ನಿರೀಕ್ಷೆಯಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.