ಕೊರೋನಾ ಮುಕ್ತ ಕೊಪ್ಪಳ ಅಭಿಯಾನ: ಗವಿಸಿದ್ದೇಶ್ವರ ಸ್ವಾಮೀಜಿಯವರಿಂದ ಜಾಗೃತಿ ಜಾಥಾಕ್ಕೆ ಚಾಲನೆ

First Published Sep 6, 2020, 1:20 PM IST

ಕೊಪ್ಪಳ(ಸೆ.06): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ಪಟ್ಟಣ ಪಂಚಾಯತ್‌ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಗವಿಸಿದ್ದೇಶ್ವರ ಸ್ವಾಮಿಗಳ ಮುಂದಾಳತ್ವದಲ್ಲಿ ಕೊರೋನಾ ಮುಕ್ತ ಕೊಪ್ಪಳ ಅಭಿಯಾನ ಕಾರ್ಯಕ್ರಮವನ್ನು ಭಾಗ್ಯನಗರದ ಮರಿಯಮ್ಮ ದೇವಸ್ಥಾನದ ಹತ್ತಿರ ಶನಿವಾರ ಚಾಲನೆ ನೀಡಿದ್ದಾರೆ. 

ಕೊಪ್ಪಳ ಜಿಲ್ಲೆ ಇಡೀ ರಾಜ್ಯದಲ್ಲಿ ಹಸಿರು ಜೋನ್‌ನಲ್ಲಿ ಇತ್ತು. ಆದರೆ ಹಂತ ಹಂತವಾಗಿ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗಿರುವುದರಿಂದ ನಮ್ಮ ಜಿಲ್ಲೆಗೆ ಆವರಿಸಿಕೊಂಡಿದೆ. ಗಂಗಾವತಿ ತಾಲೂಕಿನಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ನಂತರ ಕೊಪ್ಪಳದ ಭಾಗ್ಯನಗರದ ವಿವಿಧ ವಾರ್ಡ್‌ಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲಿದೆ. ಇದರ ನಿಯಂತ್ರಣಕ್ಕಾಗಿ ಸಾರ್ವಜನಿಕರ ಸಹಕಾರ ಅಷ್ಟೇ ಮುಖ್ಯವಾಗಿರುತ್ತದೆ. ಸಾರ್ವಜನಿಕರ ಭಯವನ್ನು ಹೋಗಲಾಡಿಸಲು ಗವಿಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಹೇಳಿದ್ದಾರೆ.
undefined
ಕೊರೋನಾ ಗುಣಲಕ್ಷಣಗಳಾದ ಜ್ವರ, ನೆಗಡಿ, ಕೆಮ್ಮು ಮತ್ತು ಉಸಿರಾಟದ ತೊಂದರೆ ಹಾಗೂ ಸಹವ್ಯಾಧಿ ರೋಗಿಗಳು, ಮಧುಮೇಹ, ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್‌ ಪೀಡಿತರು, ಅಧಿಕ ರಕ್ತದೊತ್ತಡವುಳ್ಳವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಇದರಿಂದ ಯಾರೂ ಭಯ ಪಡುವ ಅಗತ್ಯವಿಲ್ಲ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಹೆಚ್ಚಿನ ಮಾಹಿತಿಗಾಗಿ ತಮ್ಮ ವಾರ್ಡಿನ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಹಾಗೂ ವೈದ್ಯಕೀಯ ಸಿಬ್ಬಂದಿ ಸಂಪರ್ಕಿಸಬೇಕು. ಜಿಲ್ಲಾಡಳಿತ ಕೈಗೊಂಡ ಮುಂಜಾಗೃತ ಕ್ರಮಗಳಿಗೆ ಸಹಕರಿಸುವಂತೆ ಮನವಿ ಮಾಡಿದರು.
undefined
ಕೊರೋನಾ ವೈರಸ್‌ ಪ್ರಪಂಚದಲ್ಲಿ ಕೋವಿಡ್‌-19 ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಉಂಟುಮಾಡಿದ ಸಾಂಕ್ರಾಮಿಕ ರೋಗವಾಗಿದೆ. ಜನಸಾಮಾನ್ಯರಲ್ಲಿ ಇದು ಸಾಕಷ್ಟುಆತಂಕ ಉಂಟು ಮಾಡಿದೆ. ಇದರ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ನೆಗಡಿ, ಕೆಮ್ಮು, ಜ್ವರ, ಉಸಿರಾಟ ಹಾಗೂ ಇತರೆ ಲಕ್ಷಣಗಳನ್ನು ಹೊಂದಿದವರು ಯಾರೂ ನಿರ್ಲಕ್ಷ್ಯ ಮಾಡದೆ ವೈದ್ಯರ ಹತ್ತಿರ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು. ಒಂದು ಸಣ್ಣ ನಿರ್ಲಕ್ಷ್ಯದಿಂದ ದೊಡ್ಡ ತೊಂದರೆಯಾಗಬಹುದು. ನಮ್ಮ ಕೊಪ್ಪಳ ಜಿಲ್ಲೆಯ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಕಾರದಿಂದ ರೋಗದ ನಿಯಂತ್ರಣಕ್ಕಾಗಿ ಹಗಲು ಇರುಳು ಶ್ರಮಿಸುತ್ತಿದ್ದಾರೆ. ರೋಗವನ್ನು ಮುಚ್ಚಿಡದೆ, ಭಯಪಟ್ಟು ಕೊಳ್ಳದೆ ಪರೀಕ್ಷೆ ಮಾಡಿಸಿಕೊಂಡು ಇತರರಿಗೂ ಹರಡದಂತೆ ಮುಂಜಾಗ್ರತೆ ವಹಿಸಿ ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಎಲ್ಲರೂ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಹಕಾರ ನೀಡಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಿ ಎಂದು ಹೇಳಿದ ಗವಿಸಿದ್ದೇಶ್ವರ ಸ್ವಾಮಿಗಳು
undefined
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ. ಮಾತನಾಡಿ, ಭಾಗ್ಯನಗರ ಪಟ್ಟಣದ ವಿವಿಧ ವಾರ್ಡಗಳಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅದರ ನಿಯಂತ್ರಣಕ್ಕಾಗಿ ಲಕ್ಷಣ ಇರುವವರು ಹಾಗೂ ಸಹವ್ಯಾಧಿ ಇರುವವರು ಕಡ್ಡಾಯವಾಗಿ ನಿಮ್ಮ ವಾರ್ಡಿಗೆ ಬರುವ ಪರೀಕ್ಷೆ ಮಾಡುವ ತಂಡದಲ್ಲಿ ಪರೀಕ್ಷಿಸಿಕೊಂಡು, ಖಚಿತಪಟ್ಟರೆ ಸರ್ಕಾರದ ನಿಯಮಗಳನ್ನು ಅನುಸರಿಸಿ ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದು ಮತ್ತು ಆಸ್ಪತ್ರೆಗೆ ಹೋಗುವ ಅವಶ್ಯಕತೆಯಿಲ್ಲ. ಕೊರೋನಾ ಕುರಿತು ಭಯ ಬೇಡ ಎಚ್ಚರಿಕೆ ಇರಲಿ. 05 ಪರೀಕ್ಷಾ ತಂಡಗಳನ್ನು ರಚಿಸಲಾಗಿದ್ದು, ಅವರು ಮನೆಯ ಹತ್ತಿರ ಬಂದು ಪರೀಕ್ಷೆ ಮಾಡುತ್ತಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
undefined
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಗವಿಸಿದ್ದೇಶ್ವರ ಸ್ವಾಮಿಗಳು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಪಾದಯಾತ್ರೆ ಮೂಲಕ ಕೊರೋನಾ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
undefined
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಸಹಾಯಕ ಆಯುಕ್ತರು, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳು, ಜಿಲ್ಲಾ ಪಂಚಾಯತನ ಯೋಜನಾ ನಿರ್ದೇಶಕರು, ತಹಶೀಲ್ದಾರರು, ಪೊಲೀಸ್‌ ಅಧಿಕಾರಿಗಳು, ವೈದ್ಯಾಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪಟ್ಟಣ ಪಂಚಾಯತ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಅಭಿಯಾನದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
undefined
click me!