ಹುಬ್ಬಳ್ಳಿ ಮನೆಗೆಂದು ಜಾಗ ಖರೀದಿಸಿ ಅಕ್ರಮವಾಗಿ ಮಸೀದಿ ನಿರ್ಮಾಣ; ರೊಚ್ಚಿಗೆದ್ದ ಜನರಿಂದ ದಿಡೀರ್ ಪ್ರತಿಭಟನೆ

Published : Mar 24, 2026, 03:12 PM IST

ಹುಬ್ಬಳ್ಳಿಯ ಸವಣೂರು ಲೇಔಟ್‌ನಲ್ಲಿ ವಸತಿ ನಿವೇಶನದಲ್ಲಿ ಅಕ್ರಮವಾಗಿ ಮಸೀದಿ ನಿರ್ಮಿಸಲಾಗುತ್ತಿದೆ ಎಂದು ಹಿಂದೂ ಸಂಘಟನೆಗಳು ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಪಾಲಿಕೆ ನೌಕರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ನಿರ್ಮಾಣವನ್ನು ತಕ್ಷಣವೇ ನಿಲ್ಲಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

PREV
16

ಹುಬ್ಬಳ್ಳಿ-ಧಾರವಾಡ (ಮಾ.24): ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಈಗ ಅಕ್ರಮ ಮಸೀದಿ ನಿರ್ಮಾಣದ ವಿಚಾರವೊಂದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ನಗರದ ಗೋಕುಲ ರಸ್ತೆಯಲ್ಲಿರುವ ಸವಣೂರು ಲೇಔಟ್‌ನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಮಸೀದಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ರಸ್ತೆಗಿಳಿದು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

26

ಪ್ರತಿಭಟನಾಕಾರರ ಆರೋಪದ ಪ್ರಕಾರ, ಸುಮಾರು 3-4 ವರ್ಷಗಳ ಹಿಂದೆ ಸವಣೂರು ಲೇಔಟ್‌ನಲ್ಲಿ ಸಾಮಾನ್ಯ ನಿವೇಶನದ (Site) ಹೆಸರಿನಲ್ಲಿ ಜಾಗವನ್ನು ಖರೀದಿ ಮಾಡಲಾಗಿತ್ತು. ವಸತಿ ಉದ್ದೇಶಕ್ಕಾಗಿ ಜಾಗ ಪಡೆಯಲಾಗಿದೆ ಎಂದು ನಂಬಿಸಿ, ಈಗ ಅಲ್ಲಿ ಅಕ್ರಮವಾಗಿ ಮಸೀದಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ವಸತಿ ಪ್ರದೇಶದಲ್ಲಿ ಧಾರ್ಮಿಕ ಕೇಂದ್ರಗಳನ್ನು ಸ್ಥಾಪಿಸಲು ಇರುವ ಕಾನೂನುಬದ್ಧ ನಿಯಮಗಳನ್ನು ಪಾಲಿಸದೆ ಈ ಕಾಮಗಾರಿ ನಡೆಯುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

36

ಈ ಅಕ್ರಮ ನಿರ್ಮಾಣಕ್ಕೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳೇ ನೇರ ಹೊಣೆ ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಕಿಡಿಕಾರಿದ್ದಾರೆ. ಸ್ಥಳೀಯರು ಆರಂಭದಿಂದಲೂ ಈ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದರೂ, ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿದ್ದಾರೆ. ಅಕ್ರಮವಾಗಿ ನಡೆಯುತ್ತಿರುವ ಕಾಮಗಾರಿಯನ್ನು ತಡೆಯಲು ಪಾಲಿಕೆ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.

46

ನಿರ್ಮಾಣ ಹಂತದಲ್ಲಿರುವ ಕಟ್ಟಡದ ಮುಂದೆಯೇ ಜಮಾಯಿಸಿದ ನೂರಾರು ಕಾರ್ಯಕರ್ತರು ಮತ್ತು ಮಹಿಳೆಯರು, ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಪಟ್ಟು ಹಿಡಿದರು. ‘ವಸತಿ ಬಡಾವಣೆಗಳಲ್ಲಿ ಇಂತಹ ಅಕ್ರಮ ನಿರ್ಮಾಣಗಳಿಂದ ಶಾಂತಿ ಕದಡುತ್ತದೆ. ನಿವೇಶನ ಎಂದು ಹೇಳಿ ಈಗ ಪ್ರಾರ್ಥನಾ ಮಂದಿರ ಕಟ್ಟುತ್ತಿರುವುದು ಕಾನೂನಿನ ಸ್ಪಷ್ಟ ಉಲ್ಲಂಘನೆ’ ಎಂದು ಪ್ರತಿಭಟನಾಕಾರರು ದೂರಿದ್ದಾರೆ.

56

ಸದ್ಯಕ್ಕೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಪ್ರತಿಭಟನಾಕಾರರು ಮಾತ್ರ ಪಟ್ಟು ಬಿಡುತ್ತಿಲ್ಲ. 'ಕೂಡಲೇ ಅಕ್ರಮವಾಗಿ ನಿರ್ಮಿಸಲಾಗುತ್ತಿರುವ ಮಸೀದಿಯನ್ನು ತೆರವುಗೊಳಿಸಬೇಕು ಅಥವಾ ಕಾಮಗಾರಿ ನಿಲ್ಲಿಸಬೇಕು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಹುಬ್ಬಳ್ಳಿ ನಗರದಾದ್ಯಂತ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು' ಎಂದು ಹಿಂದೂಪರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

66

ಇನ್ನು ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಧಿಕಾರಿಗಳು ಈ ವಿವಾದಕ್ಕೆ ಹೇಗೆ ಅಂತ್ಯ ಹಾಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Read more Photos on
click me!

Recommended Stories