ವಿಜಯಪುರ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಯಾವುದೇ ದಾಖಲೆಗಳಿಲ್ಲದ ₹50,000 ನಗದು ಜಪ್ತಿ!

Published : Jul 01, 2026, 10:35 PM IST

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ದೂರಿನ ಹಿನ್ನೆಲೆಯಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ, ಲೆಕ್ಕವಿಲ್ಲದ ಸುಮಾರು 50,000 ರೂ. ನಗದು ವಶಪಡಿಸಿಕೊಳ್ಳಲಾಗಿದ್ದು, ಹಲವು ಖಾಸಗಿ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿದೆ.

PREV
15

ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಸರ್ಕಾರಿ ಕಚೇರಿಗಳಲ್ಲಿ ನಡೆಯುತ್ತಿದ್ದ ಎನ್ನಲಾದ ಭ್ರಷ್ಟಾಚಾರದ ವಾಸನೆ ಹಿಡಿದ ಲೋಕಾಯುಕ್ತ ಪೊಲೀಸರು ಇಂದು ಮಿಂಚಿನ ದಾಳಿ ನಡೆಸಿದ್ದಾರೆ. ಇಂಡಿ ಉಪ ನೋಂದಣಿ ಕಚೇರಿ (Sub-Registrar Office) ಹಾಗೂ ವಿವಾಹ ನೋಂದಣಾಧಿಕಾರಿಗಳ ಕಚೇರಿ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಸಿಬ್ಬಂದಿ ದಾಳಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.

25

50 ಸಾವಿರ ನಗದು ವಶ:

ವಿಜಯಪುರ ಜಿಲ್ಲಾ ಲೋಕಾಯುಕ್ತ ಎಸ್ಪಿ ಟಿ. ಮಲ್ಲೇಶಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ದಾಳಿಯ ವೇಳೆ ಕಚೇರಿಯಲ್ಲಿ ಯಾವುದೇ ಸೂಕ್ತ ದಾಖಲೆಗಳಿಲ್ಲದ ಸುಮಾರು 50,000 ರೂಪಾಯಿ ನಗದು ಹಣವನ್ನು ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಹಣವು ಸಾರ್ವಜನಿಕರಿಂದ ಅಕ್ರಮವಾಗಿ ಪಡೆದ ಲಂಚದ ಹಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

35

ಖಾಸಗಿ ವ್ಯಕ್ತಿಗಳ ವಿಚಾರಣೆ:

ಕಚೇರಿಯ ಒಳಗೆ ಅನಧಿಕೃತವಾಗಿ ಓಡಾಡಿಕೊಂಡಿದ್ದ ಕೆಲವು ಖಾಸಗಿ ವ್ಯಕ್ತಿಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರನ್ನು ಪೀಡಿಸುತ್ತಿದ್ದ ಮಧ್ಯವರ್ತಿಗಳ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಬಾಂಡ್ ರೈಟರ್‌ಗಳ (Bond Writers) ಬಳಿ ಇದ್ದ ಕಡತಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ.

45

ತಂಡದಲ್ಲಿ ಯಾರಿದ್ದರು?

ಲೋಕಾಯುಕ್ತ ಡಿವೈಎಸ್ಪಿ ಮಲ್ಲಿಕಾರ್ಜುನ ತುಳಸಿಗೇರಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ತಂಡದಲ್ಲಿ ಸಿಪಿಐ ಆನಂದ ಟಕ್ಕನವರ, ಸಿಪಿಐ ಆನಂದ ಡೊಣ್ಣಿ ಹಾಗೂ ಲೋಕಾಯುಕ್ತದ ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಕಚೇರಿಯ ಪ್ರತಿಯೊಂದು ವಿಭಾಗದ ದಾಖಲೆಗಳನ್ನು ಅಧಿಕಾರಿಗಳು ಜಾಲಾಡುತ್ತಿದ್ದಾರೆ.

55

ಮುಂದುವರಿಯಲಿರುವ ಪರಿಶೀಲನೆ:

ಮೂಲಗಳ ಪ್ರಕಾರ, ಕಚೇರಿಯಲ್ಲಿನ ದಾಖಲೆಗಳ ಪ್ರಮಾಣ ಹೆಚ್ಚಿರುವುದರಿಂದ ಈ ಪರಿಶೀಲನಾ ಕಾರ್ಯವು ಇನ್ನೂ ಎರಡು ದಿನಗಳ ಕಾಲ ಮುಂದುವರಿಯಲಿದೆ. ದಾಳಿಯ ವೇಳೆ ಸಿಕ್ಕಿರುವ ನಗದು ಹಾಗೂ ದಾಖಲೆಗಳಲ್ಲಿನ ವ್ಯತ್ಯಾಸಗಳ ಬಗ್ಗೆ ವರದಿ ಸಿದ್ಧಪಡಿಸಿದ ನಂತರ, ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಲಂಚವಿಲ್ಲದೆ ಕೆಲಸ ನಡೆಯುತ್ತಿಲ್ಲ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಲೋಕಾಯುಕ್ತರ ಈ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಪರಿಶೀಲನೆಯ ನಂತರ ಮತ್ಯಾವ ದೊಡ್ಡ ತಿಮಿಂಗಿಲಗಳು ಬಲೆಗೆ ಬೀಳಲಿವೆ ಎಂಬುದನ್ನು ಕಾದು ನೋಡಬೇಕಿದೆ.

Read more Photos on
click me!

Recommended Stories