ರಾಜಕಾಲುವೆ ಒತ್ತುವರಿ ಮಾಡಿದವರ ಮೇಲೆ ಕಠಿಣ ಕ್ರಮ: ಸಚಿವ ಅಶೋಕ್‌

First Published Oct 25, 2020, 7:44 AM IST

ಬೆಂಗಳೂರು(ಅ. 25):  ರಾಜಕಾಲುವೆ ಒತ್ತುವರಿ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

ಶುಕ್ರವಾರ ರಾತ್ರಿ ಸುರಿದ ಮಳೆಯಿಂದ ಹೊಸಕೆರೆಹಳ್ಳಿ ವಾರ್ಡ್‌ನ ದತ್ತಾತ್ರೇಯನಗರ ವ್ಯಾಪ್ತಿಯಲ್ಲಿ ಉಂಟಾಗಿರುವ ಮಳೆ ಅನಾಹುತ ಪ್ರದೇಶಗಳಿಗೆ ಭೇಟಿ ನೀಡಿ, ಸ್ವಚ್ಛತಾ ಕಾರ್ಯ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಅಗಲೀಕರಣ ಹಾಗೂ ಒತ್ತುವರಿ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಜಕಾಲುವೆಯನ್ನು ಒತ್ತುವರಿ ಮಾಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಎಂದರು.
undefined
ದತ್ತಾತ್ರೇಯನಗರದಲ್ಲಿ ಅಧಿಕ ಮಳೆಯಾದ ಪರಿಣಾಮ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ದಕ್ಷಿಣ ವಲಯ ವ್ಯಾಪ್ತಿಯ ಬಹುತೇಕ ನೀರು ಈ ರಾಜಕಾಲುವೆಯಲ್ಲಿ ಹರಿಯಲಿದೆ. ಆರು ತಿಂಗಳ ಹಿಂದೆ ಆರಂಭಿಸಿದ ಮೂರು ಕಿ.ಮೀ. ವ್ಯಾಪ್ತಿಯ ರಾಜಕಾಲುವೆ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದ್ದು, ತಡೆಗೋಡೆಗೆ ಅಳವಡಿಸಿರುವ ಹಳೆಯ ಕಲ್ಲು ತೆಗೆದು ಕಾಂಕ್ರೀಟ್‌ ತಡೆಗೋಡೆ ನಿರ್ಮಿಸಲಾಗುತ್ತಿದೆ. ತ್ವರಿತವಾಗಿ ಕಾಮಗಾರಿ ಮುಗಿಸಲಾಗುವುದು ಎಂದರು.
undefined
ಹೊಸಕೆರೆಹಳ್ಳಿ ವಾರ್ಡ್‌ ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ಇಂತಹ ಸಮಸ್ಯೆಯಾಗಿರಲಿಲ್ಲ. ಪ್ರಮುಖವಾಗಿ ನಾಯಂಡಹಳ್ಳಿ ರಾಜಕಾಲುವೆಗೆ ಇಲ್ಲಿನ ರಾಜಕಾಲುವೆ ನೀರು ಸೇರಲಿದೆ. ಕಡಿಮೆ ಸಮಯದಲ್ಲಿ ಹೆಚ್ಚು ಮಳೆಯಾದ ಪರಿಣಾಮ ಕಾಲುವೆ ತುಂಬಿ ಹರಿದು ಸಮಸ್ಯೆಯಾಗಿದೆ. ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು. ಊಟ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಎರಡು ದಿನಗಳ ವ್ಯವಸ್ಥೆ ಕಲ್ಪಿಸಲಾಗುವುದು. ನಷ್ಟದ ಬಗ್ಗೆ ಮನೆ ಮನೆ ಸಮೀಕ್ಷೆ ಮಾಡಿ ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
undefined
ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಮಾತನಾಡಿ, ಶುಕ್ರವಾರ ಕಡಿಮೆ ಅವಧಿಯಲ್ಲಿ 120 ರಿಂದ 125 ಮಿ.ಮೀ. ಮಳೆಯಾಗಿದೆ. ರಾಜಕಾಲುವೆಯಲ್ಲಿ ನೀರಿನ ಹರಿವಿನ ಮಟ್ಟಹೆಚ್ಚಾಗಿ ರಸ್ತೆಯ ಮೇಲೆ ಹರಿದಿದೆ. ಈ ಪ್ರದೇಶದಲ್ಲಿ ಇಳಿಜಾರು ಪ್ರದೇಶಗಳಿರುವುದರಿಂದ ನೀರಿನ ಮಟ್ಟಹೆಚ್ಚಿದೆ. ಕಾಂಕ್ರೀಟ್‌ ಗೋಡೆ ನಿರ್ಮಿಸಲು ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಹೇಳಿದರು.
undefined
ಶುಕ್ರವಾರ ರಾತ್ರಿಯಿಂದಲೇ ಪಾಲಿಕೆ ಹಾಗೂ ಎನ್‌ಡಿಆರ್‌ಎಫ್‌ ತಂಡ ಈ ಪ್ರದೇಶಕ್ಕೆ ಬಂದು ಪರಿಹಾರ ಕಾರ್ಯಕ್ಕೆ ಮುಂದಾಗಿದೆ. ಪೌರಕಾರ್ಮಿಕರು, ಗ್ಯಾಂಗ್‌ಮ್ಯಾನ್‌ಗಳು ರಸ್ತೆಯಲ್ಲಿ ತುಂಬಿರುವ ಹೂಳನ್ನು ತೆರವು ಮಾಡುತ್ತಿದ್ದಾರೆ. ಬ್ಲೀಚಿಂಗ್‌ ಪೌಡರ್‌ ಹಾಕಿ, ಸ್ಯಾನಿಟೈಸ್‌ ಮಾಡುತ್ತಿದ್ದಾರೆ. ಸ್ಥಳೀಯರಿಗೆ ಯಾವುದೇ ಸಮಸ್ಯೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಪ್ರವಾಹ ಎದುರಾದರೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ತಂಡಕ್ಕೆ ಸೂಚಿಸಲಾಗಿದೆ ಎಂದರು.
undefined
click me!