ಉತ್ತರ ಕನ್ನಡ (ಫೆ.21): ಜಿಲ್ಲೆಯ ಮುಂಡಗೋಡ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಅತ್ಯಂತ ಭೀಕರ ಹಾಗೂ ಮನಕಲಕುವ ಘಟನೆಯೊಂದು ಬೆಳಕಿಗೆ ಬಂದಿದೆ. ಕಾಡಿನ ಮಧ್ಯೆ ರುಂಡವಿಲ್ಲದ ಹಾಗೂ ಸಂಪೂರ್ಣ ಬೆತ್ತಲೆ ಸ್ಥಿತಿಯಲ್ಲಿದ್ದ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಈ ಕ್ರೂರ ಹತ್ಯೆಯ ಹಿಂದೆ ವ್ಯವಸ್ಥಿತ ಸಂಚು ಇರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯ ವಿವರ:
ಮುಂಡಗೋಡ ತಾಲೂಕಿನ ಕೊಳಗಿ ಅರಣ್ಯ ಪ್ರದೇಶದಲ್ಲಿ ನಿನ್ನೆ ಸಂಜೆ ಈ ಭಯಾನಕ ದೃಶ್ಯ ಪತ್ತೆಯಾಗಿದೆ. ಕಾಡಿನ ದಾರಿಯಲ್ಲಿ ಹೋಗುತ್ತಿದ್ದವರಿಗೆ ಮಹಿಳೆಯ ಮೃತದೇಹ ಕಂಡುಬಂದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಮಹಿಳೆಯ ದೇಹವಷ್ಟೇ ಸಿಕ್ಕಿದ್ದು, ಆಕೆಯ ರುಂಡ (ತಲೆ) ನಾಪತ್ತೆಯಾಗಿತ್ತು. ಅಷ್ಟೇ ಅಲ್ಲದೆ, ಮೃತದೇಹದ ಮೇಲೆ ಯಾವುದೇ ಬಟ್ಟೆಗಳಿಲ್ಲದೆ ಬೆತ್ತಲೆ ಸ್ಥಿತಿಯಲ್ಲಿ ಎಸೆದು ಹೋಗಲಾಗಿತ್ತು.