ಬರ ಪರಿಹಾರ ಕುರಿತು ಮೋದಿ, ಶಾ, ನಿರ್ಮಲಾ ವಿಭಿನ್ನ ಸುಳ್ಳು: ಸಿದ್ದರಾಮಯ್ಯ ಕಿಡಿ

First Published Apr 8, 2024, 8:03 AM IST

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್‌ ಶಾ ಹಾಗೂ ನಿರ್ಮಲಾ ಸೀತಾರಾಮನ್‌ ತರಹೇವಾರಿ ಸುಳ್ಳು ಹೇಳುತ್ತಿದ್ದಾರೆ. ಇಂತಹ ಸುಳ್ಳರ ಪಕ್ಷಕ್ಕೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
 

ಬೆಂಗಳೂರು (ಏ.08): ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್‌ ಶಾ ಹಾಗೂ ನಿರ್ಮಲಾ ಸೀತಾರಾಮನ್‌ ತರಹೇವಾರಿ ಸುಳ್ಳು ಹೇಳುತ್ತಿದ್ದಾರೆ. ಇಂತಹ ಸುಳ್ಳರ ಪಕ್ಷಕ್ಕೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಕಾರಣಕ್ಕಾಗಿ ರಾಜ್ಯಕ್ಕೆ ಅನ್ಯಾಯ ಮಾಡಿರುವ ಬಿಜೆಪಿಯನ್ನು ತಿರಸ್ಕರಿಸಿ ಎಂದೂ ಅವರು ಕರೆ ನೀಡಿದ್ದಾರೆ. ಭಾನುವಾರ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವಿವಿಧೆಡೆ ಪ್ರಚಾರ ನಡೆಸಿ ಮಾತನಾಡಿದ ಅವರು, ಕೇಂದ್ರದ ಆರ್ಥಿಕ ಅನ್ಯಾಯ, ಬರ ಪರಿಹಾರ ವಿಳಂಬದ ಬಗ್ಗೆ ಒಬ್ಬೊಬ್ಬರು ಒಂದೊಂದು ರೀತಿಯ ಸುಳ್ಳು ಹೇಳಿದ್ದಾರೆ. 

ತನ್ಮೂಲಕ ರಾಜ್ಯದ ಜನತೆಯ ಮುಂದೆ ಅವರ ಬಣ್ಣ ಬಯಲಾಗಿದ್ದು, ಮತದಾರರು ಅಂತಹ ಸುಳ್ಳರಿಗೆ ಮತ ಹಾಕಿದರೆ ನಿಮ್ಮ ಮತಕ್ಕೆ ಗೌರವ ಬರುತ್ತದೆಯೇ ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಯೋಜನೆಗೆ ಅನುಮತಿ ಕೊಡಲಿಲ್ಲ. 

ಮೋದಿಯವರೂ ಬೆಂಗಳೂರಿನ‌ ಜನತೆಗೆ ಕುಡಿಯುವ ನೀರು ಕೊಡುವ ಯೋಜನೆಗೆ ಬೆಂಬಲ ಘೋಷಿಸುತ್ತಿಲ್ಲ. ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದ ಮೋದಿಯವರು 15 ರುಪಾಯಿಯನ್ನೂ ಹಾಕಿಲ್ಲ. ಮೋದಿಯವರು ಹೇಳಿದ ಯಾವುದನ್ನೂ ಜಾರಿ ಮಾಡಿಲ್ಲ. ಹೀಗಾಗಿ ಅವರ ಮುಖ ನೋಡಿ ಮತ ಹಾಕಿದರೆ ನಿಮ್ಮ ಮತ ಗೌರವ ಕಳೆದುಕೊಳ್ಳಲಿದೆ ಎಂದು ಹೇಳಿದರು.

ನುಡಿದಂತೆ ನಡೆದು ನಿಮ್ಮ ಮತಗಳಿಗೆ ಘನತೆ ತರುವ ಕೆಲಸವನ್ನು ನಾವು ಮಾಡಿದ್ದೇವೆ. ಹೀಗಾಗಿ ನಮಗೆ ಶಕ್ತಿ ತುಂಬಿ. ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಸಂಸದರಾಗಿ ನಾಡಿನ ಜನತೆಗೆ ಆದ ಅನ್ಯಾಯಗಳು ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಲಿಲ್ಲ. ಶೋಭಾ ಕರಂದ್ಲಾಜೆ ಅವರನ್ನು ಉಡುಪಿ-ಚಿಕ್ಕಮಗಳೂರಿನ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಎಂದು ಓಡಿಸಿದ್ದಾರೆ. ಹೀಗಾಗಿ ನೀವು ಸಹ ಸೋಲಿಸಿ ಎಂದರು.

click me!