ಸಿದ್ದರಾಮಯ್ಯ ರಾಜೀನಾಮೆಯ ನಂತರ, ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಿಎಲ್ಪಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಡಿಕೆಶಿ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಶೀಘ್ರದಲ್ಲೇ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬೆಂಗಳೂರು (ಮೇ 30): ಸಿದ್ದರಾಮಯ್ಯ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಹೈಕಮಾಂಡ್ ಸೂಚನೆಯಂತೆ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಘೋಷಿಸಲಾಗಿದೆ. ಶನಿವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸಿದ್ದರಾಮಯ್ಯ ಅವರ ಯುಗ ಅಂತ್ಯಗೊಂಡು ಡಿ.ಕೆ.ಎಸ್ ಆಡಳಿತಕ್ಕೆ ಮುನ್ನುಡಿ ಬರೆಯಲಾಗಿದೆ.
28
ಸಭೆಯಲ್ಲಿ ಅಂಗೀಕರಿಸಲಾದ 3 ಪ್ರಮುಖ ನಿರ್ಣಯಗಳು:
ಶಾಸಕಾಂಗ ಪಕ್ಷದ ಸಭೆಯು ಅತ್ಯಂತ ಸೌಹಾರ್ದಯುತವಾಗಿ ನಡೆದಿದ್ದು, ಒಟ್ಟು ಮೂರು ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಹೈಕಮಾಂಡ್ಗೆ ಅಧಿಕಾರ: ಸಭೆಯ ಆರಂಭದಲ್ಲಿ ನೂತನ ಸಿಎಲ್ಪಿ ನಾಯಕನ ಆಯ್ಕೆಯ ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ಗೆ ವಹಿಸುವಂತೆ ಸಿದ್ದರಾಮಯ್ಯ ಅವರು ನಿರ್ಣಯ ಮಂಡಿಸಿದರು. ಇದನ್ನು ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರು ಅನುಮೋದಿಸಿದರು.
38
ಡಿ.ಕೆ. ಶಿವಕುಮಾರ್ ಆಯ್ಕೆ
ಎರಡನೇ ನಿರ್ಣಯವಾಗಿ ಸಿದ್ದರಾಮಯ್ಯ ಅವರೇ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ನೂತನ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಪ್ರಸ್ತಾಪಿಸಿದರು. ಈ ಪ್ರಸ್ತಾವನೆಗೆ ಶಾಸಕರು ಒಮ್ಮತದ ಜೈಕಾರ ಹಾಕುವ ಮೂಲಕ ಡಿ.ಕೆ.ಎಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದರು.
ನೂತನ ನಾಯಕನಾಗಿ ಆಯ್ಕೆಯಾದ ನಂತರ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಆಡಳಿತ ಮತ್ತು ನಾಯಕತ್ವವನ್ನು ಶ್ಲಾಘಿಸಿ ಧನ್ಯವಾದ ನಿರ್ಣಯ ಮಂಡಿಸಿದರು. ಇದನ್ನು ಎಲ್ಲಾ ಶಾಸಕರು ತುಂಬು ಹೃದಯದಿಂದ ಅನುಮೋದಿಸಿದರು.
58
ಸಿದ್ದರಾಮಯ್ಯ ಅವರ ಸೇವೆಗೆ ಗೌರವಪೂರ್ವಕ ವಿದಾಯ
ಮುಖ್ಯಮಂತ್ರಿ ಸ್ಥಾನದಿಂದ ಪದತ್ಯಾಗ ಮಾಡಿದ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷವು ಹೃತ್ತೂರ್ವಕ ಧನ್ಯವಾದಗಳನ್ನು ಅರ್ಪಿಸಿದೆ. ಅವರು 2013-2018 ಮತ್ತು 2023-2026 ರವರೆಗೆ ಮುಖ್ಯಮಂತ್ರಿಯಾಗಿ ಹಾಗೂ ಎರಡು ಅವಧಿಗಳಲ್ಲಿ ವಿರೋಧ ಪಕ್ಷದ ನಾಯಕನಾಗಿ ಸಲ್ಲಿಸಿದ ಸೇವೆ ಅನನ್ಯ ಎಂದು ಕೊಂಡಾಡಲಾಗಿದೆ.
68
ಸಿದ್ದರಾಮಯ್ಯರನ್ನ ಕೊಂಡಾಡಿದ ಡಿಕೆಶಿ
ನಿರ್ಣಯದ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, 'ಸಾಮಾಜಿಕ ನ್ಯಾಯದ ಮೇಲಿನ ಸಿದ್ದರಾಮಯ್ಯ ಅವರ ಸಮರ್ಪಣಾ ಭಾವ ಮತ್ತು ಆಡಳಿತಾತ್ಮಕ ಸಾಮರ್ಥ್ಯವು ಪ್ರತಿಯೊಬ್ಬ ಕಾಂಗ್ರೆಸ್ಸಿಗನಿಗೂ ಮಾದರಿಯಾಗಿದೆ. ಅವರ ಮಾರ್ಗದರ್ಶನದಲ್ಲಿ ನಮ್ಮ ಸರ್ಕಾರ ಮುನ್ನಡೆಯಲಿದೆ' ಎಂದು ತಿಳಿಸಿದರು. ಕನ್ನಡಿಗರ ಜೀವನದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಈ ಪಯಣದಲ್ಲಿ ಸಿದ್ದರಾಮಯ್ಯ ಅವರ ನಿರಂತರ ಪಾಲ್ಗೊಳ್ಳುವಿಕೆಯನ್ನು ಪಕ್ಷವು ಸದಾ ಬಯಸುತ್ತದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
78
ರಾಜಭವನಕ್ಕೆ ಪಯಣ – ಬುಧವಾರ ಪದಗ್ರಹಣ:
ಸಿಎಲ್ಪಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ತಮ್ಮನ್ನು ಬೆಂಬಲಿಸಿದ ಶಾಸಕರಿಗೆ ಧನ್ಯವಾದ ಅರ್ಪಿಸಿದರು. ಇದೀಗ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು, ಸರ್ಕಾರ ರಚನೆಗೆ ಅಧಿಕೃತವಾಗಿ ಹಕ್ಕು ಮಂಡಿಸಲಿದ್ದಾರೆ.
88
ಲೋಕಭವನದಲ್ಲಿ ಪ್ರಮಾಣವಚನ ಸ್ವೀಕಾರ
ಮುಂಬರುವ ಬುಧವಾರ (ಜೂನ್ 3, 2026) ಸಂಜೆ 4.05ಕ್ಕೆ ಬೆಂಗಳೂರಿನ ಲೋಕಭವನದಲ್ಲಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ರಾಷ್ಟ್ರಮಟ್ಟದ ಗಣ್ಯರು ಮತ್ತು ಸಾವಿರಾರು ಕಾರ್ಯಕರ್ತರು ಸಾಕ್ಷಿಯಾಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.