Published : Apr 13, 2025, 02:26 PM ISTUpdated : Apr 13, 2025, 02:33 PM IST
Karnataka Rains: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಹವಾಮಾನ ಇಲಾಖೆಯು ಮುಂಗಾರು ಮಳೆಯ ಮುನ್ಸೂಚನೆ ನೀಡಿದೆ. ಮಳೆಯಿಂದಾಗಿ ಸಾವಿರಾರು ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ರೈತರಿಗೆ ನಷ್ಟ ಉಂಟಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇನ್ನೂ ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿದೆ. ಅದರಲ್ಲೂ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ.
28
ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಸೋಮವಾರದಿಂದ ಸ್ವಲ್ಪಮಟ್ಟಿಗೆ ಮಳೆ ಪ್ರಮಾಣ ಕಡಿಮೆಯಾಗಲಿದೆ. ಗುರುವಾರದಿಂದ ಶನಿವಾರವರೆಗೆ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
38
ಮೇನಲ್ಲಿ ಮಳೆ ಬಂದರೆ ಮುಂಗಾರಿಗೆ ತೊಂದರೆ
ಏಪ್ರಿಲ್ ಅವಧಿಯಲ್ಲಿ ಮಳೆ ಬಂದರೆ ಮುಂಗಾರು ಅವಧಿಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಮೇ ಕೊನೇ ವಾರದಲ್ಲಿ ಚಂಡಮಾರುತ, ವಾಯುಭಾರ ಕುಸಿತದಂಥ ಸ್ಥಿತಿ ಉಂಟಾದರೆ ಮುಂಗಾರು ಆರಂಭಕ್ಕೆ ಸಮಸ್ಯೆಯಾಗಲಿದೆ. ಉಳಿದಂತೆ ಮುಂಗಾರು ಅವಧಿಯಲ್ಲಿ ಈ ಬಾರಿಯೂ ರಾಜ್ಯದಲ್ಲಿ ವಾಡಿಕೆ ಮಳೆಯಾಗುವ ಲಕ್ಷಣ ಕಂಡು ಬಂದಿವೆ ಎಂದು ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
48
ಶನಿವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಿರುವ ವರದಿ ಪ್ರಕಾರ, ಮಂಗಳೂರಿನಲ್ಲಿ ಅತಿ ಹೆಚ್ಚು 4 ಸೆಂ.ಮೀ. ಮಳೆಯಾಗಿದೆ. ಯಾದಗಿರಿಯ ಕಕ್ಕೇರಿ, ಸೈದಾಪುರ ಹಾಗೂ ಶೋರಾಪುರ, ಬೀದರ್, ರಾಯಚೂರಿನ ಜಾಲಹಳ್ಳಿ ಹಾಗೂ ಗಬ್ಬೂರಿನಲ್ಲಿ ತಲಾ 3, ಬೆಂಗಳೂರಿನ ಟಿ.ಜೆ.ಹಳ್ಳಿ, ಕೋಟಾ, ಕೆಂಭಾವಿ, ಮುದ್ದೇಬಿಹಾಳ, ಗಂಗಾವತಿ, ಸೋಮವಾರಪೇಟೆಯಲ್ಲಿ ತಲಾ 2, ಪಣಂಬೂರು, ಹುಣಸಗಿ, ಶಹಾಪುರ, ಕೊಪ್ಪಳ, ಬಾಗೇವಾಡಿ, ನಾಗಮಂಗಲದಲ್ಲಿ ತಲಾ 1 ಸೆಂ.ಮೀ. ಮಳೆಯಾದ ವರದಿಯಾಗಿದೆ.
58
ಸಾವಿರಾರು ಹೆಕ್ಟೇರ್ ಬೆಳೆ ಹಾನಿ
ಕೊಪ್ಪಳ, ವಿಜಯನಗರ, ದಕ್ಷಿಣ ಕನ್ನಡ, ಕಲಬುರಗಿ, ಚಾಮರಾಜನಗರ ಸೇರಿ 8 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದು ರೈತರಿಗೆ ಅಪಾರ ನಷ್ಟ ಸಂಭವಿಸಿದೆ. ಕೊಪ್ಪಳ ಜಿಲ್ಲೆಯೊಂದರಲ್ಲೇ ಅಂದಾಜು 10 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ.
68
ಕೊಪ್ಪಳ ಜಿಲ್ಲೆ ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಕಟಾವಿಗೆ ಬಂದಿದ್ದ 8-9 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನೆಲಕಚ್ಚಿ ಸಂಪೂರ್ಣ ನೀರು ಪಾಲಾಗಿದೆ. ಹ್ಯಾಟಿ, ಮುದ್ದಾಬಳ್ಳಿ, ಡೊಂಬರಳ್ಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಬೆಳೆದಿದ್ದ ಬಾಳೆ ಬೆಳೆ ಬಿರುಗಾಳಿಗೆ ನೆಲಕ್ಕೆ ಬಿದ್ದಿದ್ದು ಅಪಾರ ಹಾನಿ ಸಂಭವಿಸಿದೆ.
78
RAIN
ಮಾಗಡಿಯಲ್ಲಿ ಭಾರಿ ಮಳೆ
ಶನಿವಾರ ಸಂಜೆ 4 ಗಂಟೆಗೆ ಮಾಗಡಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಗೆ ಹಲವು ಕಂಬಗಳು ಧರೆಗುಳಿದಿವೆ. ಒಂದು ಗಂಟೆಗೂ ಹೆಚ್ಚು ಕಾಲ ತಾಲೂಕಾದ್ಯಂತ ಉತ್ತಮ ಮಳೆ ಸುರಿದಿದೆ. ಜೊತೆಗೆ ಬಿರುಗಾಳಿ ಸಹಿತ ಮಳೆ ಬಂದದ್ದರಿಂದ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
88
ಮಾಗಡಿ ಪಟ್ಟಣದ ಹೊಸಪೇಟೆಯಲ್ಲಿ ನೀಲಗಿರಿ ಮರ ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ಮುರಿದು ಬಿದ್ದು ಪಟ್ಟಣದ ಹಲವು ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ