ಬೆಂಗಳೂರು-ಮುಂಬೈ ನಡುವೆ ಶೀಘ್ರದಲ್ಲೇ ವಂದೇ ಭಾರತ್ ಸ್ಲೀಪರ್ ರೈಲು ಆರಂಭವಾಗಲಿದೆ. ಬೆಂಗಳೂರಿನಿಂದ ಹೈದರಾಬಾದ್ ಮತ್ತು ಚೆನ್ನೈಗೆ ಬುಲೆಟ್ ಟ್ರೈನ್ ಕಾರಿಡಾರ್ಗಳನ್ನು ಘೋಷಿಸಲಾಗಿದ್ದು, ಇದು ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಮಂಗಳೂರಿಗೂ ವಂದೇ ಭಾರತ್ ರೈಲು ಆರಂಭಿಸಲು ಯೋಜಿಸಲಾಗಿದೆ.
ಬೆಂಗಳೂರು: ಬೆಂಗಳೂರು- ಮುಂಬೈ ನಡುವೆ ನೂತನ ವಂದೇ ಭಾರತ್ ಸ್ಲೀಪರ್ ರಾತ್ರಿ ರೈಲನ್ನು ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಆರಂಭಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದಾರೆ. ಬೆಂಗಳೂರು ಎಸ್ಎಂವಿಟಿ ಮತ್ತು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ನಡುವೆ ನೂತನ ದ್ವಿಸಾಪ್ತಾಹಿಕ ರೈಲಿಗೆ ಭಾನುವಾರ ವರ್ಚುವಲ್ ವಿಧಾನದ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ದಕ್ಷಿಣ ಮತ್ತು ಉತ್ತರ ಕರ್ನಾಟಕ ಭಾಗದ ಜನರ ದೀರ್ಘ ಕಾಲದ ಬೇಡಿಕೆಯನ್ನು ಈ ರೈಲು ಸಂಚಾರದ ಮೂಲಕ ಈಡೇರಿಸಿದ್ದೇವೆ. ಜನರ ಅಪೇಕ್ಷೆಯಂತೆ ಬೆಂಗಳೂರಿನಿಂದ ಮುಂಬೈಗೆ ಶೀಘ್ರ ವಂದೇ ಭಾರತ್ ರೈಲನ್ನೂ ಒದಗಿಸಲಾಗುವುದು. ಇದು ಕರ್ನಾಟಕಕ್ಕೆ ಅನೇಕ ಸಾಧ್ಯತೆಗಳನ್ನು ತೆರೆಯಲಿದೆ ಎಂದು ಹೇಳಿದರು.
27
ಮಂಗಳೂರಿಗೆ ವಂದೇ ಭಾರತ್:
ಬೆಂಗಳೂರನ್ನು ಕರಾವಳಿ ಕರ್ನಾಟಕ ಮೂಲಕ ಮಡಗಾಂವ್ವರೆಗೆ ಸಂಪರ್ಕಿಸುವ ವಂದೇ ಭಾರತ್ ರೈಲು ಸಂಚಾರವನ್ನು ಶೀಘ್ರ ಆರಂಭಿಸಲು ಯೋಜಿಸಲಾಗಿದೆ. ಪ್ರಸ್ತುತ ಪರೀಕ್ಷಾ ಹಂತದಲ್ಲಿದ್ದು, ಘಾಟ್ ಪ್ರದೇಶದಲ್ಲಿ ವಿಶೇಷ ಬ್ರೇಕಿಂಗ್ ಸಿಸ್ಟಮ್ ಅಳವಡಿಸುವ ಕೆಲಸ ನಡೆಯುತ್ತಿದೆ ಎಂದು ಅಶ್ವಿನಿ ವೈಷ್ಣವ್ ತಿಳಿಸಿದರು.
ಬೆಂಗಳೂರಿನಿಂದ ಹೈದರಾಬಾದ್ ಹಾಗೂ ಚೆನ್ನೈಗೆ ನೂತನ ಬುಲೆಟ್ ಟ್ರೈನ್ ಕಾರಿಡಾರ್ ಯೋಜನೆಯನ್ನು ಕಳೆದ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ಇದು ಸಾಕಾರವಾದರೆ ಬೆಂಗಳೂರಿನಿಂದ ಹೈದರಾಬಾದ್ಗೆ ಕೇವಲ 2 ಗಂಟೆ ಅವಧಿಯಲ್ಲಿ ಹಾಗೂ ಬೆಂಗಳೂರಿನಿಂದ ಚೆನ್ನೈಗೆ 73 ನಿಮಿಷಗಳಲ್ಲಿ ಸಂಚಾರ ಮಾಡಬಹುದು. ದೇಶದಲ್ಲಿ ಒಟ್ಟು 7 ಸಾವಿರ ಕಿಮೀ ಬುಲೆಟ್ ಟ್ರೈನ್ ಯೋಜನೆಯ ಗುರಿ ಹೊಂದಲಾಗಿದ್ದು, ಅದರಲ್ಲಿ ಈವರೆಗೆ 4000 ಕಿಮೀ ಯೋಜನೆಗಳನ್ನು ಪ್ರಕಟಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು.
ಮುಂಬೈ- ಬೆಂಗಳೂರು ಹೈಸ್ಪೀಡ್ ರೈಲು: ತೇಜಸ್ವಿ ಸೂರ್ಯ ಮನವಿ
ಬೆಳಗಾವಿ, ಹುಬ್ಬಳ್ಳಿ- ಧಾರವಾಡ, ದಾವಣಗೆರೆ ಮಾರ್ಗವಾಗಿ ಮುಂಬೈ- ಬೆಂಗಳೂರು ನಡುವೆ ಹೈಸ್ಪೀಡ್ ರೈಲು/ ಬುಲೆಟ್ ಟ್ರೈನ್ ಕಾರಿಡಾರ್ ನಿರ್ಮಿಸುವಂತೆ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಆನ್ಲೈನ್ ಮೂಲಕ ಪಾಲ್ಗೊಂಡು ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಕ್ಷಿಪ್ರ ಸಂಪರ್ಕ ಕಲ್ಪಿಸುವುದರಿಂದ ಉದ್ಯೋಗ, ಉದ್ಯಮ, ಹೂಡಿಕೆ ಮತ್ತು ಅವಕಾಶಗಳ ವಿಷಯದಲ್ಲಿ ಅತ್ಯಂತ ಮಹತ್ವದ ಬದಲಾವಣೆ ಸಾಧ್ಯವಾಗಲಿದೆ. ರಾಜ್ಯದ ಬೆಳವಣಿಗೆಯ ಇತಿಹಾಸದಲ್ಲಿ ಉತ್ತರ ಕರ್ನಾಟಕವು ತನ್ನ ಅರ್ಹ ಪಾಲನ್ನು ಪಡೆಯಲೇಬೇಕಿದೆ. ಕರ್ನಾಟಕವು 1 ಟ್ರಿಲಿಯನ್ ಆರ್ಥಿಕತೆಯ ಗುರಿ ಸಾಧಿಸಬೇಕಾದರೆ ಉತ್ತರ ಮತ್ತು ಮಧ್ಯ ಕರ್ನಾಟಕವನ್ನು ಹಿಂದೆ ಬಿಡಲು ಸಾಧ್ಯವಿಲ್ಲ. ಆದ್ದರಿಂದ ಕ್ಷಿಪ್ರ ಸಂಚಾರ ವ್ಯವಸ್ಥೆಗಳನ್ನು ಕಲ್ಪಿಸಬೇಕಿದೆ ಎಂದು ಅವರು ಪ್ರತಿಪಾದಿಸಿದರು.
57
4 ರಾಜ್ಯಗಳಲ್ಲಿ ಹಾದು ಹೋಗಲಿದೆ ಬುಲೆಟ್ ರೈಲು
ದಕ್ಷಿಣ ಭಾರತದ ಮೊದಲ ಬುಲೆಟ್ ರೈಲು ಜಾಲದ ಅಭಿವೃದ್ಧಿಯತ್ತ ಮಹತ್ವದ ಹೆಜ್ಜೆಯಾಗಿ, ಬೆಂಗಳೂರನ್ನು ಹೈದರಾಬಾದ್ ಮತ್ತು ಚೆನ್ನೈ ನಗರಗಳೊಂದಿಗೆ ಸಂಪರ್ಕಿಸುವ ಪ್ರಸ್ತಾವಿತ ಹೈ-ಸ್ಪೀಡ್ ರೈಲು ಕಾರಿಡಾರ್ಗಳಿಗೆ ಕರ್ನಾಟಕ ಸರ್ಕಾರ ಆಡಳಿತಾತ್ಮಕ ಅನುಮೋದನೆ ಕೂಡ ನೀಡಿದೆ. ಈ ಮಹತ್ವಾಕಾಂಕ್ಷಿ ಯೋಜನೆಗಳು ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೈಗಾರಿಕಾ ವಿಸ್ತರಣೆ, ರಿಯಲ್ ಎಸ್ಟೇಟ್ ಅಭಿವೃದ್ಧಿ ಹಾಗೂ ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವುದರ ಜೊತೆಗೆ, ಪ್ರಮುಖ ನಗರಗಳ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ನಿರೀಕ್ಷೆಯಿದೆ.
67
ಹೈದರಾಬಾದ್–ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್
ಪ್ರಸ್ತಾವಿತ 607 ಕಿ.ಮೀ ಉದ್ದದ ಹೈದರಾಬಾದ್–ಬೆಂಗಳೂರು ಹೈಸ್ಪೀಡ್ ರೈಲು ಕಾರಿಡಾರ್ ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ ರಾಜ್ಯಗಳನ್ನು ಸಂಪರ್ಕಿಸಲಿದೆ. ಈ ಮಾರ್ಗದಲ್ಲಿ ಸುಮಾರು 101 ಕಿ.ಮೀ ಭಾಗ ಕರ್ನಾಟಕದ ಮೂಲಕ ಹಾದುಹೋಗಲಿದ್ದು, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವು ಪ್ರದೇಶಗಳನ್ನು ಒಳಗೊಂಡಿದೆ.
ಪ್ರಸ್ತುತ, ನೈಋತ್ಯ ರೈಲ್ವೆ ವಲಯದ ಅಡಿಯಲ್ಲಿ ಸಂಚರಿಸುವ ಎಕ್ಸ್ಪ್ರೆಸ್ ರೈಲುಗಳು ಹೈದರಾಬಾದ್ನಿಂದ ಬೆಂಗಳೂರಿಗೆ ತಲುಪಲು 8ರಿಂದ 12 ಗಂಟೆಗಳವರೆಗೆ ಸಮಯ ತೆಗೆದುಕೊಳ್ಳುತ್ತವೆ. ಆದರೆ, ಬುಲೆಟ್ ರೈಲು ಸೇವೆ ಪ್ರಾರಂಭವಾದ ಬಳಿಕ ಈ ಪ್ರಯಾಣ ಸಮಯವು ಸುಮಾರು 2 ಗಂಟೆ 10 ನಿಮಿಷಗಳಿಗೆ ಇಳಿಯುವ ಸಾಧ್ಯತೆ ಇದೆ.
ಈ ಕಾರಿಡಾರ್ನಲ್ಲಿ ಹೊಸಕೋಟೆ ತಾಲ್ಲೂಕಿನ ಕೋಡಿಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಅಲಿಪುರ ಮತ್ತು ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿಲ್ದಾಣಗಳನ್ನು ನಿರ್ಮಿಸುವ ಯೋಜನೆ ಇದೆ. ನಿರಂತರ ವೇಗದ ಸಂಚಾರಕ್ಕೆ ಅನುಕೂಲವಾಗುವಂತೆ, ಸಂಪೂರ್ಣವಾಗಿ ಎತ್ತರದ (ಎಲಿವೇಟೆಡ್) ರೈಲು ಮಾರ್ಗವನ್ನು ನಿರ್ಮಿಸುವಂತೆ ಅಧಿಕಾರಿಗಳು ಪ್ರಸ್ತಾಪಿಸಿದ್ದಾರೆ.
77
ಬೆಂಗಳೂರು–ಚೆನ್ನೈ–ಮೈಸೂರು ಹೈಸ್ಪೀಡ್ ರೈಲು ಕಾರಿಡಾರ್
ಎರಡನೇ ಪ್ರಸ್ತಾವಿತ ಕಾರಿಡಾರ್ ಮೈಸೂರು, ಬೆಂಗಳೂರು ಮತ್ತು ಚೆನ್ನೈ ನಗರಗಳನ್ನು ಸಂಪರ್ಕಿಸುವ 435ರಿಂದ 463 ಕಿ.ಮೀ ಉದ್ದದ ಹೈಸ್ಪೀಡ್ ರೈಲು ಜಾಲವಾಗಿರಲಿದೆ. ಈ ಮಾರ್ಗದಲ್ಲಿ ಚೆನ್ನೈ–ಬೆಂಗಳೂರು ವಿಭಾಗವು ಸುಮಾರು 306 ಮೈಲುಗಳಷ್ಟು ಉದ್ದವಾಗಿರಲಿದೆ. ಪ್ರಸ್ತುತ ಬೆಂಗಳೂರು–ಚೆನ್ನೈ ನಡುವಿನ ಪ್ರಯಾಣವು 5ರಿಂದ 7 ಗಂಟೆಗಳವರೆಗೆ ತೆಗೆದುಕೊಳ್ಳುತ್ತಿದ್ದು, ಹೈಸ್ಪೀಡ್ ರೈಲು ಸೇವೆ ಪ್ರಾರಂಭವಾದ ನಂತರ ಈ ಸಮಯವು ಸುಮಾರು 1 ಗಂಟೆ 15 ನಿಮಿಷಗಳಿಗೆ ಇಳಿಯುವ ನಿರೀಕ್ಷೆಯಿದೆ. ಈ ಕಾರಿಡಾರ್ನಲ್ಲಿನ ಪ್ರಮುಖ ನಿಲ್ದಾಣಗಳಲ್ಲಿ ಕೋಲಾರ ಜಿಲ್ಲೆಯ ಕೆಜಿಎಫ್, ಹೊಸಕೋಟೆಯ ಕೋಡಿಹಳ್ಳಿ, ಬೆಂಗಳೂರಿನ ವೈಟ್ಫೀಲ್ಡ್ ಮತ್ತು ಬೈಯಪ್ಪನಹಳ್ಳಿ ಸೇರಿವೆ. ಹೈದರಾಬಾದ್ ಮತ್ತು ಚೆನ್ನೈ ಬುಲೆಟ್ ರೈಲು ಮಾರ್ಗಗಳ ಸಂಧಿ ಬಿಂದುವಾಗಿರುವುದರಿಂದ ಕೋಡಿಹಳ್ಳಿ ಪ್ರಮುಖ ಇಂಟರ್ಚೇಂಜ್ ಕೇಂದ್ರವಾಗಿ ಅಭಿವೃದ್ಧಿಯಾಗುವ ಸಾಧ್ಯತೆ ಇದೆ. ಇಲ್ಲಿ ಡಿಪೋ ಹಾಗೂ ನಿರ್ವಹಣಾ ಸೌಲಭ್ಯಗಳನ್ನು ಸ್ಥಾಪಿಸುವ ಯೋಜನೆಯೂ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ