
ವೈದ್ಯೋ ನಾರಾಯಣ ಹರಿಃ ಎನ್ನುವ ಮಾತಿದೆ. ವೈದ್ಯರನ್ನು ದೇವರಿಗೆ ಹೋಲಿಕೆ ಮಾಡಲಾಗುತ್ತದೆ. ಆದರೆ ವೈದ್ಯರ ನಿರ್ಲಕ್ಷ್ಯದಿಂದ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿರುವ, ಶಾಶ್ವತ ಅಂಗವಿಕಲವಾಗುತ್ತಿರುವ ಘಟನೆಗಳು ಅಲ್ಲಲ್ಲಿ ನಡೆಯುತ್ತಲೇ ಇರುತ್ತವೆ. ಒಂದೆಡೆ ದುಡ್ಡಿನ ದಾಹಕ್ಕೆ ಬಲಿಯಾಗಿರುವ ವೈದ್ಯರಾದರೆ, ಇನ್ನೊಂದೆಡೆ, ಬಡಜನರನ್ನು ಅತ್ಯಂತ ಕೀಳಾಗಿ ಕಾಣುವ ವೈದ್ಯರು ಇನ್ನೊಂದೆಡೆ. ಸೆಲೆಬ್ರಿಟಿಗಳು, ಶ್ರೀಮಂತರಿಗೆ ಒಂದು ನ್ಯಾಯ, ಬಡವರು ಬಂದರೆ ಇನ್ನೊಂದು ನ್ಯಾಯ... ಇದು ಸಾಮಾನ್ಯವಾಗಿ ವೈದ್ಯಕೀಯ ವೃತ್ತಿಯಲ್ಲಿ ಕಾಣುವುದು ಇದೆ. ಇದೀಗ ಅಂಥದ್ದೇ ಒಂದು ಘಟನೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ 19 ತಿಂಗಳ ಮಗುವೊಂದು ಶಾಶ್ವತವಾಗಿ ಕುರುಡಾಗಿರುವ ಆಘಾತಕಾರಿ ಘಟನೆ ನಡೆದಿದೆ.
ಈ ದಾರುಣ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ. ಸಾಗರ್ ಜಿಲ್ಲೆಯ ಭೂಸಾ ಕಮಲಪುರ ಗ್ರಾಮದ ಇಂದ್ರಜ್ ವಿಶ್ವಕರ್ಮ ಎಂಬುವವರ 19 ತಿಂಗಳ ಗಂಡು ಮಗು ವಿನಯ್ಗೆ ಮೇ 29 ರಂದು ತೀವ್ರ ಕೆಮ್ಮು, ನೆಗಡಿಯಾಗಿ, ಕಣ್ಣುಗಳು ಸ್ವಲ್ಪ ಕೆಂಪಾಗಾಗಿದ್ದವು. ತಕ್ಷಣ ಪೋಷಕರು ಮಗುವನ್ನು ಸಾಗರ್ ಜಿಲ್ಲೆಯ ಬಂದಾ ಸಿವಿಲ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಕರ್ತವ್ಯದಲ್ಲಿದ್ದ ಮಕ್ಕಳ ವೈದ್ಯರು ಮಗುವನ್ನು ಪರೀಕ್ಷಿಸಿದ ಬಳಿಕ ಮೂಗಿಗೆ ಬಳಸಬೇಕಿದ್ದ ಸಲೈನ್ ಡ್ರಾಪ್ಸ್ ಅನ್ನು ಕಣ್ಣಿಗೆ ಹಾಕಿದ್ದಾರೆ. ಜೊತೆಗೆ ಪ್ಯಾರಾಸಿಟಮಾಲ್ ಸಿರಪ್, ಇಂಜೆಕ್ಷನ್ ಹಾಗೂ ಇತರ ಔಷಧಿಗಳನ್ನು ಕೂಡ ನೀಡಿದ್ದಾರೆ.
ಚಿಕಿತ್ಸೆ ಪಡೆದ ಕೆಲವೇ ಗಂಟೆಗಳಲ್ಲಿ ಮಗುವಿನ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ಹಲವು ಗಂಟೆಗಳ ಕಾಲ ಸಿವಿಲ್ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಿದರೂ ಯಾವುದೇ ಸುಧಾರಣೆ ಕಾಣದ ಹಿನ್ನೆಲೆಯಲ್ಲಿ ವೈದ್ಯರು ಮಗುವನ್ನು ಸಾಗರ್ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಭೋಪಾಲ್ನ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಭೋಪಾಲ್ ಏಮ್ಸ್ನಲ್ಲಿ ಚಿಕಿತ್ಸೆ ಪಡೆದ ವೇಳೆ, ಮಗುವಿನ ದೃಷ್ಟಿ ಶಾಶ್ವತವಾಗಿ ಕಳೆದುಹೋಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಕುಟುಂಬ ಆರೋಪಿಸಿದೆ. ತಪ್ಪಾದ ಚಿಕಿತ್ಸೆ ಅಥವಾ ವೈದ್ಯಕೀಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿರಬಹುದು ಎಂಬ ಅನುಮಾನವನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ ಎಂದು ಮಗುವಿನ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ