
ರಾಯವರಂ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿ ಉರಿದ ಪರಿಣಾಮ ಅಲ್ಲಿ ಕೆಲಸ ಮಾಡುತ್ತಿದ್ದ ಆರು ಜನ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ಕೋನಾಸೀಮಾ ಜಿಲ್ಲೆಯಲ್ಲಿನ ಪಟಾಕಿ ತಯಾರಿ ಘಟಕದಲ್ಲಿ ಈ ದುರಂತ ನಡೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಪಟಾಕಿ ತಯಾರಿ ವೇಳೆ ಪಟಾಕಿ ಉತ್ಪಾದನಾ ಘಟಕದಲ್ಲಿ ಅಸಮರ್ಪಕ ನಿರ್ವಹಣೆಯಿಂದಾಗಿ ಈ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪರವಾನಗಿ ಪಡೆದ ಪಟಾಕಿ ತಯಾರಿಕಾ ಘಟಕ ಇದಾಗಿತ್ತು ಎಂದು ಡಾ.ಬಿ.ಆರ್.ಅಂಬೇಡ್ಕರ್ ಕೊನಸೀಮಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಮೀನಾ ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಆರು ಶವಗಳು ಪತ್ತೆಯಾಗಿವೆ. ನಾವು ಮೃತರ ವಿವರಗಳನ್ನು ಪರಿಶೀಲಿಸುತ್ತಿದ್ದೇವೆ. ಅದು ಪರವಾನಗಿ ಪಡೆದ ಘಟಕವಾಗಿರಬೇಕು ಎಂದು ರಾಹುಲ್ ಮೀನಾ ಪಿಟಿಐಗೆ ತಿಳಿಸಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ ರಾಯವರಂನಲ್ಲಿ ಲಕ್ಷ್ಮಿ ಗಣಪತಿ ಗ್ರಾಂಡ್ ನಡೆಸುತ್ತಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಬುಧವಾರ ಬೆಳಗ್ಗೆ ಭಾರಿ ಸ್ಫೋಟ ಸಂಭವಿಸಿದ್ದು, ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಆರು ಕಾರ್ಮಿಕರು ಸ್ಥಳದಲ್ಲೇ ಸುಟ್ಟು ಕರಕಲಾದರು. ಘಟನೆಯಲ್ಲಿ ಇತರ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅವಘಡ ಸಂಭವಿಸಿದ ಸಮಯದಲ್ಲಿ ಸುಮಾರು 40 ಕಾರ್ಮಿಕರು ಪಟಾಕಿ ನಿರ್ಮಾಣ ಕೆಲಸದಲ್ಲಿ ನಿರತರಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಠಾತ್ ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಶೆಡ್ನ ಗೋಡೆ ಕುಸಿದಿದೆ. ಇನ್ನೂ ಕೆಲವು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಜಿಲ್ಲಾಧಿಕಾರಿ ಮಹೇಶ್ ಕುಮಾರ್ ಮಾತನಾಡಿ, ಪೊಲೀಸರು ಮತ್ತು ಕಂದಾಯ ಅಧಿಕಾರಿಗಳು ಒಂದು ವಾರದ ಹಿಂದಷ್ಟೇ ಈ ಪಟಾಕಿ ಘಟಕವನ್ನು ಪರಿಶೀಲಿಸಿ ಸುರಕ್ಷತಾ ಮಾನದಂಡಗಳು ಜಾರಿಯಲ್ಲಿವೆ ಎಂದು ವರದಿ ನೀಡಿದ್ದರು. ಆದರೆ, ಬೆಂಕಿ ಅವಘಡದ ಸಮಯದಲ್ಲಿ ಅಗ್ನಿಶಾಮಕಗಳನ್ನು ಸರಿಯಾಗಿ ಬಳಸಲಾಗಿದೆಯೇ ಎಂದು ನಿರ್ಧರಿಸಲು ತನಿಖೆ ನಡೆಯುತ್ತಿದೆ. ಅಪಘಾತಕ್ಕೆ ನಿಖರವಾದ ಕಾರಣಗಳು ಶೀಘ್ರದಲ್ಲೇ ಬೆಳಕಿಗೆ ಬರಲಿವೆ ಎಂದು ಅವರು ಹೇಳಿದರು.
ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ
ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳೊಂದಿಗೆ ಮಾತನಾಡಿದ ಅವರು ಪ್ರಸ್ತುತ ಪರಿಸ್ಥಿತಿಯ ವಿವರಗಳನ್ನು ಪಡೆದಿದ್ದಾರೆ. ದುರಂತದಲ್ಲಿ ಮೃತರಾದವರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಅವರು, ಪರಿಹಾರ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲಿದೆ ಎಂದು ಅವರು ಭರವಸೆ ನೀಡಿದರು.
ದುರಂತದ ಬಗ್ಗೆ ಆಂಧ್ರಪ್ರದೇಶ ಗೃಹ ಸಚಿವೆ ಅನಿತಾ ಕೂಡ ಪ್ರತಿಕ್ರಿಯಿಸಿದ್ದು, ದುರಂತದಲ್ಲಿ ಬಲಿಯಾದವರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ ಅವರು, ಸರ್ಕಾರ ಮೃತರ ಕುಟುಂಬಗಳಿಗೆ ಬೆಂಬಲವಾಗಿ ನಿಲ್ಲುತ್ತದೆ ಎಂದು ಹೇಳಿದರು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾ ಎಸ್ಪಿ ಮತ್ತು ಅಗ್ನಿಶಾಮಕ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಒಟ್ಟಿನಲ್ಲಿ ದೀಪಾವಳಿಯ ಸಂತಸ ಹೆಚ್ಚಿಸಬೇಕಿದ್ದ ಪಟಾಕಿ ಇಲ್ಲಿ ಹಲವರ ಬದುಕನ್ನೇ ಕಸಿದಿದ್ದು, ಅನೇಕ ಕುಟುಂಬಗಳಲ್ಲಿ ಕತ್ತಲು ಆವರಿಸಿದೆ.
ಇದನ್ನೂ ಓದಿ: ನದಿಯಲ್ಲಿ ಸ್ನಾನ ಮಾಡ್ತಿದ್ದ ಮಹಿಳೆಯನ್ನು ಎಳೆದೊಯ್ದ ಮೊಸಳೆ
ಇದನ್ನೂ ಓದಿ: ಆರ್ಯನ್ ಖಾನ್ ನಿರ್ದೇಶನ ವೆಬ್ ಸರಣಿಯ ನಿರ್ಮಾಪಕ, ನೆಟ್ಫ್ಲಿಕ್ಸ್ಗೆ ಹೈಕೋರ್ಟ್ ನೋಟಿಸ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ