ಅಣ್ಣಾ ಹಜಾರೆ ಆರೋಗ್ಯ ದಿಢೀರ್ ಏರುಪೇರು: ಐಸಿಯುಗೆ ದಾಖಲು

Published : Aug 31, 2026, 10:49 PM IST
Anna hazare on arvind kejriwal

ಸಾರಾಂಶ

ಹಿರಿಯ ಸಮಾಜ ಸೇವಕ ಅಣ್ಣಾ ಹಜಾರೆ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬಾಂಬೆ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ. ತೀವ್ರ ವೈರಲ್ ಸೋಂಕಿನಿಂದ ಬಳಲುತ್ತಿರುವ 87 ವರ್ಷದ ಅಣ್ಣಾ ಅವರ ಆರೋಗ್ಯ ಸ್ಥಿತಿಯನ್ನು ವೈದ್ಯರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಮುಂಬೈ: ಹಿರಿಯ ಸಮಾಜ ಸೇವಕ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ (Anna Hazare) ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡಿದ್ದು, ಅವರನ್ನು ಮುಂಬೈನ ಬಾಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರನ್ನು ತೀವ್ರ ನಿಗಾ ಘಟಕದಲ್ಲಿ (ICU) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ತೀವ್ರ ವೈರಲ್ ಸೋಂಕು

ಅಹಮದ್‌ನಗರ ಜಿಲ್ಲೆಯ ರಾಲೆಗಾಂವ್ ಸಿದ್ದಿಯಲ್ಲಿರುವ ಆಸ್ಪತ್ರೆಯೊಂದರಲ್ಲಿ ಅಣ್ಣಾ ಹಜಾರೆ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯ ಸುಧಾರಿಸದ ಕಾರಣ ಅವರನ್ನು ಕಾರ್ಡಿಯಾಕ್ ಅಂಬ್ಯುಲೆನ್ಸ್ ಮೂಲಕ ಮುಂಬೈಗೆ ಕರೆತರಲಾಗಿದೆ. 80 ವರ್ಷ ದಾಟಿದ ಅಣ್ಣಾ ಹಜಾರೆ ಅವರು ತೀವ್ರವಾದ ವೈರಲ್ ಸೋಂಕಿನಿಂದ ಬಳಲುತ್ತಿದ್ದು, ಅತಿಯಾದ ನಿಶ್ಯಕ್ತಿ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಡಾ.ಬನ್ಸಾಲಿ ನೇತೃತ್ವದ ವೈದ್ಯರ ತಂಡ ಅಣ್ಣಾ ಅವರಿಗೆ ವಿವಿಧ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ದೇಶದ ಗಮನ ಸೆಳೆದ ಹೋರಾಟಗಾರ

2011ರಲ್ಲಿ ಭ್ರಷ್ಟಾಚಾರದ ವಿರುದ್ಧದ 'ಇಂಡಿಯಾ ಅಗೇನ್ಸ್ಟ್ ಕರಪ್ಷನ್' ಚಳವಳಿಯ ಮೂಲಕ ಅಣ್ಣಾ ಹಜಾರೆ ಇಡೀ ದೇಶದ ಗಮನ ಸೆಳೆದಿದ್ದರು. ರಾಲೆಗಾಂವ್ ಸಿದ್ದಿಯಂತಹ ಹಳ್ಳಿಯನ್ನು ಮಾದರಿ ಗ್ರಾಮವನ್ನಾಗಿ ಪರಿವರ್ತಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗಷ್ಟೇ ಅವರು ನೀಟ್ (NEET) ಪೇಪರ್ ಸೋರಿಕೆ ಹಗರಣದ ವಿರುದ್ಧ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದರು ಮತ್ತು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದರು. ಅಣ್ಣಾ ಹಜಾರೆ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ದೇಶಾದ್ಯಂತ ಅವರ ಅಭಿಮಾನಿಗಳು ಮತ್ತು ಹಿತೈಷಿಗಳು ಪ್ರಾರ್ಥಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಮಹಿಳೆಯರು ಮನೆಯ ಅಲಂಕಾರ' ಕೇರಳ ಗ್ರಾಂಡ್ ಮುಫ್ತಿ ವಿವಾದಾತ್ಮಕ ಹೇಳಿಕೆಗೆ ಮುಸ್ಲಿಂ ಜಮಾತ್ ಮುಖ್ಯಸ್ಥ ಬೆಂಬಲ
GDP Growth: ಭಾರತದ ಜಿಡಿಪಿ 7.8% ಹೆಚ್ಚಳದಿಂದ ಯುವಕರಿಗೇನು ಬಂತು? ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ