
ಹೈದರಾಬಾದ್ನ ರಾಯದುರ್ಗಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭೀಕರ ಹಿಟ್ ಆಂಡ್ ರನ್ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಈ ಅಪಘಾತಕ್ಕೆ ಕಾರಣವಾದ ಇನ್ನೋವಾ ಕಾರು ಖ್ಯಾತ ಆರ್ಟ್ ನಿರ್ದೇಶಕ ಮತ್ತು ಟಿಟಿಡಿ ಮಂಡಳಿ ಸದಸ್ಯ ಆನಂದ್ ಸಾಯಿ ಅವರ ಪುತ್ರ ಸಂದೀಪ್ಗೆ ಸೇರಿದ್ದಾಗಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಖಾಜಾಗೂಡ ಮುಖ್ಯರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬಿಹಾರ ಮೂಲದ ನಂದುಲಾಲ್ ಎಂಬುವವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅತಿ ವೇಗವಾಗಿ ಬಂದ ಇನ್ನೋವಾ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ನಂದುಲಾಲ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.
ಈ ವೇಳೆ ಅಲ್ಲಿಗೆ ಬಂದ ಜೈದ್ ಶಾ ಖಾದ್ರಿ ಎಂಬ ವಿದ್ಯಾರ್ಥಿ ಮಾನವೀಯತೆ ಮೆರೆದು ಗಾಯಾಳು ನಂದುಲಾಲ್ನನ್ನು ಆಸ್ಪತ್ರೆಗೆ ಸಾಗಿಸಲು ತನ್ನ ವಾಹನಕ್ಕೆ ಹತ್ತಿಸಿಕೊಳ್ಳುತ್ತಿದ್ದರು. ಆದರೆ ಅದೇ ಸಮಯದಲ್ಲಿ ಹಿಂದಿನಿಂದ ಅತಿ ವೇಗವಾಗಿ ಬಂದ ಮತ್ತೊಂದು ಮಹೀಂದ್ರಾ ಕಾರು ಇವರಿಬ್ಬರಿಗೂ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಎರಡನೇ ಡಿಕ್ಕಿಯಿಂದಾಗಿ ಈಗಾಗಲೇ ಗಂಭೀರವಾಗಿದ್ದ ನಂದುಲಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಹಾಯಕ್ಕೆ ಬಂದ ವಿದ್ಯಾರ್ಥಿ ಜೈದ್ ಶಾ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ನಡೆದ ನಂತರ ಎರಡೂ ಕಾರುಗಳು ನಿಲ್ಲಿಸದೆ ಪರಾರಿಯಾಗಿದ್ದವು. ಪ್ರಕರಣ ದಾಖಲಿಸಿಕೊಂಡ ರಾಯದುರ್ಗಂ ಪೊಲೀಸರು ಸಿಸಿಟಿವಿ ಫುಟೇಜ್ಗಳನ್ನು ಪರಿಶೀಲಿಸಿದಾಗ, ಮೊದಲು ಡಿಕ್ಕಿ ಹೊಡೆದ ಇನ್ನೋವಾ ಕಾರು ಆನಂದ್ ಸಾಯಿ ಅವರ ಪುತ್ರ ಸಂದೀಪ್ನದ್ದು ಎಂದು ದೃಢಪಟ್ಟಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸಂದೀಪ್ನನ್ನು ಅರೆಸ್ಟ್ ಮಾಡಿ ಕಾರನ್ನು ವಶಪಡಿಸಿಕೊಂಡಿದ್ದಾರೆ.
ನಂದುಲಾಲ್ ಅವರಿಗೆ ಎರಡನೇ ಬಾರಿ ಡಿಕ್ಕಿ ಹೊಡೆದ ಮಹೀಂದ್ರಾ ಕಾರನ್ನು ಕೂಡ ಪೊಲೀಸರು ಸಿಸಿಟಿವಿ ಆಧಾರದ ಮೇಲೆ ಪತ್ತೆ ಹಚ್ಚಿದ್ದು, ಆ ವಾಹನವನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಕಲಾ ನಿರ್ದೇಶಕ ಆನಂದ್ ಸಾಯಿ ಅವರು ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿರುವ ದೊಡ್ಡ ಹೆಸರು. ಈಗ ಅವರ ಪುತ್ರನೇ ಇಂತಹ ಗಂಭೀರ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವುದು ಟಾಲಿವುಡ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದು, ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ