
ನವದೆಹಲಿ/ಲಖನೌ : ಆಕ್ಸಿಯೋಂ-4 ಮಿಷನ್ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ತೆರಳಿ ಐತಿಹಾಸಿಕ ಅಂತರಿಕ್ಷ ಯಾನ ಮುಗಿಸಿ ಭೂಮಿಗೆ ಹಿಂದಿರುಗಿರುವ ಗಗನಯಾತ್ರಿ ಶುಭಾಂಶು ಶುಕ್ಲಾ, ಕಾರ್ಯಾಚರಣೆ ಮುಗಿದ ಬಳಿಕ ಇದೇ ಮೊದಲ ಬಾರಿಗೆ ತಾಯ್ನಾಡು ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಭಾನುವಾರ ದೆಹಲಿಗೆ ಬರಲಿರುವ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಆ ಬಳಿಕ ತಮ್ಮ ಹುಟ್ಟೂರು ಉತ್ತರ ಪ್ರದೇಶದ ಲಖನೌಗೆ ತೆರಳಲಿದ್ದಾರೆ. ಲಖನೌ ನಿವಾಸಿಗಳು ಅವರ ಬರುವಿಕೆಗೆ ಕಾದಿದ್ದು, ‘ಭವ್ಯ ವಿಜಯ ಮೆರವಣಿಗೆ’ ಹಮ್ಮಿಕೊಂಡಿದ್ದಾರೆ.
ಆ.22-23ರಂದು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನದ ಆಚರಣೆಯಲ್ಲಿಯೂ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಭಾರತಕ್ಕೆ ವಿಮಾನ ಹತ್ತಿ ಅದರ ಫೋಟೋ ಜತೆಗೆ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಅವರು, ‘ಭಾರತಕ್ಕೆ ಮರಳಲು ವಿಮಾನದಲ್ಲಿ ಕುಳಿತಾಗ ನನ್ನ ಹೃದಯದಲ್ಲಿ ಮಿಶ್ರಭಾವ ಉಂಟಾಗುತ್ತಿದೆ. ಕಳೆದ ಒಂದು ವರ್ಷದಿಂದ ನನ್ನ ಬೆನ್ನಿಗೆ ನಿಂತ ಅದ್ಭುತ ಗೆಳೆಯರನ್ನು ಬಿಟ್ಟು ಬರುತ್ತಿದ್ದೇನೆ. ಆದರೆ ಕಾರ್ಯಾಚರಣೆ ಬಳಿಕ ಇದೇ ಮೊದಲ ಬಾರಿಗೆ ಭಾರತದಲ್ಲಿರುವ ನನ್ನೆಲ್ಲ ಸ್ನೇಹಿತರು, ಕುಟುಂಬವನ್ನು ಭೇಟಿ ಮಾಡಲು ಉತ್ಸುಕನೂ ಆಗಿದ್ದೇನೆ. ಎಲ್ಲವೂ ಒಂದೇ ಬಾರಿಗೆ- ಜೀವನ ಎಂದರೆ ಇದೇ ಎನಿಸುತ್ತದೆ’ ಎಂದು ಬರೆದುಕೊಂಡಿದ್ದಾರೆ.
ಈ ಹಿಂದೆ ರಷ್ಯಾ ಗಗನಯಾನಿ ಯೂರಿ ಗಗರಿನ್ 1961ರಲ್ಲಿ ಭಾರತಕ್ಕೆ ಬಂದಾಗ ಅವರಿಗಾಗಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಮೆರವಣಿಗೆ ಏರ್ಪಡಿಸಿದ್ದರು. 1984ರಲ್ಲಿ ಇಂದಿರಾ ಗಾಂಧಿ ಪ್ರಧಾನಿ ಆಗಿದ್ದಾಗ ರಾಕೇಶ್ ಶರ್ಮಾ ಗಗನಯಾನದಿಂದ ಭಾರತಕ್ಕೆ ಮರಳಿದಾಗ ಮೆರವಣಿಗೆ ನಡೆದಿತ್ತು,
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ