BBC documentary ಅನುಮತಿ ಇಲ್ಲದೆ ಯಾವುದೇ ಚಿತ್ರಕ್ಕೆ ಅವಕಾಶವಿಲ್ಲ, ಜಾಮಿಯಾ ವಿವಿ ಸ್ಪಷ್ಟನೆ!

By Suvarna NewsFirst Published Jan 25, 2023, 5:34 PM IST
Highlights

ಪ್ರಧಾನಿ ಮೋದಿ ಕುರಿತ ನಿಷೇಧಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೆಲ ವಿದ್ಯಾರ್ಥಿ ಸಂಘಟನೆಗಳು ಮುಂದಾಗಿರುವುದು ಭಾರಿ ಕೋಲಾಹಲಕ್ಕೆ ಕಾರಣವಾಗಿದೆ. ಜಾಮಿಯ ವಿವಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಬೆನ್ನಲ್ಲೇ ಇದೀಗ ವಿಶ್ವವಿದ್ಯಾಲಯ ಸ್ಪಷ್ಟನೆ ನೀಡಿದೆ. ಅನುಮತಿ ಇಲ್ಲದೆ ಯಾವುದೇ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದಿದೆ.
 

ದೆಹಲಿ(ಜ.25): ಬಿಬಿಸಿ ವಾಹಿನಿ ಸಿದ್ದಪಡಿಸಿರುವ ಸಾಕ್ಷ್ಯಚಿತ್ರ ಭಾರತದಲ್ಲಿ ಕೋಲಾಹಲ ಸೃಷ್ಟಿಸಿದೆ. ಪ್ರಧಾನಿ ಮೋದಿ ಹಾಗೂ ಗುಜರಾತ್ ಗಲಭೆ ಕುರಿತ ಈ ಸಾಕ್ಷ್ಯಚಿತ್ರವನ್ನು ಭಾರತ ನಿಷೇಧಿಸಿದೆ. ಆದರೆ ನಿಷೇಧಿತ ಚಿತ್ರ ಪ್ರಸಾರಕ್ಕೆ ದೆಹಲಿಯ ಜಾಮಿಯಾ ವಿಶ್ವವಿದ್ಯಾಲಯದ ಕೆಲ ವಿದ್ಯಾರ್ಥಿ ಸಂಘಟನೆಗಳು ಮುಂದಾಗಿತ್ತು. ಇದು ವಿವಾದಕ್ಕೆ ಕಾರಣಾವಾಗಿತ್ತು. ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ನ ಬಿಬಿಸಿ ಸಾಕ್ಷ್ಯ ಚಿತ್ರ ಪ್ರಸಾರ ಮಾಡಲು ಬಯಸಿದ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಜಾಮಿಯಾ ವಿಶ್ವವಿದ್ಯಾಲಯ, ಅನುಮತಿ ಇಲ್ಲದೆ ಯಾವುದೇ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದಿದೆ. ಇಷ್ಟೇ ಅಲ್ಲ ನಿಯಮ ಉಲ್ಲಂಘಿಸಿದ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ.

ಜಾಮಿಯಾ ವಿಶ್ವವಿದ್ಯಾಲಯದ ಸುತ್ತ ಭಾರಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ವಿದ್ಯಾರ್ಥಿಗಳು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕ್ಯಾಂಪಸ್ ಒಳಗೆ ಯಾವುದೇ ವಿದ್ಯಾರ್ಥಿಗಳು ಗುಂಪು ಸೇರಿದರೆ ಅವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವವಿದ್ಯಾಲಯ ಎಚ್ಚರಿಸಿದೆ.

ಪ್ರಧಾನಿ ಕುರಿತ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರಸಾರಕ್ಕೆ ಯತ್ನ: ವಿದ್ಯಾರ್ಥಿಗಳ ಬಂಧನ

ಸ್ಟುಡೆಂಟ್ ಫೆಡರೇಶನ್ ಆಫ್ ಇಂಡಿಯಾ ಸಂಘಟನೆ ನಾಲ್ವರು ವಿದ್ಯಾರ್ಥಿಗಳು ಮೋದಿ ವಿರುದ್ಧ ಬಿಬಿಸಿ ಸಿದ್ದಪಡಿಸಿರುವ ಸಾಕ್ಷ್ಯಚಿತ್ರ ಪ್ರಸಾರ ಮಾಡಲು ಮುಂದಾಗಿದ್ದರು. ಇವರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇತ್ತ ಕ್ಯಾಂಪಸ್ ಹೊರಗಡೆ ಎಡಪಂಥೀಯ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ.

ಮಂಗಳವಾರ ದಿಲ್ಲಿಯ ಜೆಎನ್‌ಯುನಲ್ಲಿ ಕೂಡ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ ನಿರ್ಧರಿಸಿತ್ತಾದರೂ ಜೆಎನ್‌ಯು ಆಡಳಿತ ಮಂಡಳಿ ಅದಕ್ಕೆ ತಡೆ ನೀಡಿತ್ತು . 

2002ರ ಗುಜರಾತ್‌ ಗಲಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಇತ್ತು ಎಂದು ಆರೋಪಿಸಿ ಬಿಬಿಸಿ ಹೊರತಂದಿರುವ ಸಾಕ್ಷ್ಯಚಿತ್ರ, ಈಗ ಭಾರತದ ಕೆಲವು ರಾಜ್ಯಗಳ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ಸದ್ದು ಮಾಡಲು ಆರಂಭಿಸಿದೆ. ಹೈದರಾಬಾದ್‌ನ ಒಂದು ವಿಶ್ವವಿದ್ಯಾಲಯ ಹಾಗೂ ಕೇರಳದ ಕಾಲೇಜೊಂದರಲ್ಲಿ ಸಾಕ್ಷ್ಯಚಿತ್ರದ ಪ್ರದರ್ಶನ ನಡೆಸಲಾಗಿದೆ.

ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ವಿರೋಧಿಸಿದ ಬೆನ್ನಲ್ಲೇ ಕಾಂಗ್ರೆಸ್‌ ತೊರೆದ ಮಾಜಿ ಕೇಂದ್ರ ಸಚಿವ ಆಂಟನಿ ಪುತ್ರ

ಇದೇ ವೇಳೆ ಕೇರಳದಲ್ಲಿ ಎಸ್‌ಎಫ್‌ಐ, ಡಿವೈಎಫ್‌ಐ ಸೇರಿದಂತೆ ಕೆಲವು ವಿದ್ಯಾರ್ಥಿ ಸಂಘಟನೆಗಳು ವಿವಿ/ಕಾಲೇಜುಗಳಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡುತ್ತೇವೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಘೋಷಿಸಿವೆ. ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರದರ್ಶನಕ್ಕೆ ತಡೆ ನೀಡುವಂತೆ ಕೇರಳ ಸರ್ಕಾರಕ್ಕೆ ಆಗ್ರಹಿಸಿದೆ. 

ಹೈದರಾಬಾದ್‌ ಸೆಂಟ್ರಲ್‌ ವಿವಿಯಲ್ಲಿ ಕಳೆದ ಭಾನುವಾರವೇ ವಿದ್ಯಾರ್ಥಿ ಸಂಘಟನೆಯೊಂದು ‘ದ ಮೋದಿ ಕ್ವೆಶ್ಚನ್‌’ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದೆ. ಇದಕ್ಕೆ ಸಂಬಂಧಿಸಿದಂತೆ ಎಬಿವಿಪಿ ದೂರು ನೀಡಿದ್ದು, ವಿವಿ ಅಧಿಕಾರಿಗಳು ವಿದ್ಯಾರ್ಥಿಗಳಿಂದ ಸ್ಪಷ್ಟನೆ ಕೇಳಿದ್ದಾರೆ.

ಇನ್ನು ಕೇರಳದ ತಿರುವನಂತಪುರದ ಕಾನೂನು ಕಾಲೇಜಿನಲ್ಲಿ ಮಂಗಳವಾರ ಕ್ಲಾಸ್‌ನ ಸ್ಮಾರ್ಚ್‌ ಟೀವಿ ಮೇಲೆ ಕೆಲವು ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ಪ್ರದರ್ಶನ ಮಾಡಿದ್ದಾರೆ. ಇದರ ವಿರುದ್ಧ ಬಿಜೆಪಿ ಹಾಗೂ ಬಲಪಂಥೀಯ ಸಂಘಟನೆ ಕಾರ್ಯಕರ್ತರು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

click me!