
ಕೂಚ್ಬೆಹಾರ್(ಮೇ.15): ವಿಧಾನಸಭೆ ಚುನಾವಣೆಯ ಫಲಿತಾಂಶದ ಬಳಿಕ ಟಿಎಂಸಿ ಕಾರ್ಯಕರ್ತರಿಂದ ಬಿಜೆಪಿ ನಾಯಕರು ಮೇಲೆ ದಾಳಿ, ಹತ್ಯೆಯಂಥ ಘಟನೆ ನಡೆದ ಪಶ್ಚಿಮ ಬಂಗಾಳದಲ್ಲಿ ಇದೀಗ ರಾಜ್ಯದ ಪ್ರಥಮ ಪ್ರಜೆ ರಾಜ್ಯಪಾಲರನ್ನೇ ಜನರು ಅಡ್ಡಗಟ್ಟಿದ ಆಘಾತಕಾರಿ ಘಟನೆ ಶುಕ್ರವಾರ ನಡೆದಿದೆ. ಇದು ರಾಜ್ಯದಲ್ಲಿನ ಭದ್ರತೆ ಮತ್ತು ಸುರಕ್ಷತೆಯ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಹಿಂಸಾಚಾರದಿಂದ ತೊಂದರೆಗೆ ಒಳಗಾದ ಜನರ ಅಹವಾಲುಗಳನ್ನು ಆಲಿಸಲು ರಾಜ್ಯಪಾಲ ಜಗದೀಪ್ ಧನಖರ್ ಅವರು ಕೂಚ್ಬೆಹಾರ್ ಜಿಲ್ಲೆಗೆ ಭೇಟಿ ನೀಡಿದ್ದರು. ಈ ವೇಳೆ ಅವರ ಕಾರನ್ನು ಅಡ್ಡಗಟ್ಟಿದ ಜನರ ಗುಂಪು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದಾರೆ.
ಘಟನೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಧನಖರ್ ‘ದೇಶ ಕೊರೋನಾ ಬಿಕ್ಕಟ್ಟನ್ನು ಎದುರಿಸುತ್ತಿದೆ. ಆದರೆ, ಪಶ್ಚಿಮ ಬಂಗಾಳ ಕೊರೋನಾ ಜೊತೆಗೆ ಚುನಾವಣೋತ್ತರ ಹಿಂಸಾಚಾರವನ್ನು ಎದುರಿಸುತ್ತಿದೆ. ಜನರು ಯಾರಿಗೆ ಮತ ಹಾಕಬೇಕು ಎಂಬುದನ್ನು ಕೆಲವೇ ಮಂದಿ ನಿರ್ಧರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶಿಷ್ಟಾಚಾರಗಳನ್ನು ಬದಿಗೊತ್ತಿ ರಾಜ್ಯ ಸರ್ಕಾರಕ್ಕೆ ಮಾಹಿತಿಯನ್ನೂ ನೀಡದೇ ಅವರು ಉದ್ದೇಶಪೂರ್ವಕವಾಗಿಯೇ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ ಎಂದು ದೂರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ