ಬಿಹಾರದ 74 ಲಕ್ಷ ಮತದಾರರ ಹುಡುಕಿ ಕೊಡಿ : ಪಕ್ಷಗಳಿಗೆ ಮನವಿ

Kannadaprabha News   | Kannada Prabha
Published : Jul 22, 2025, 06:16 AM IST
voter list update 2025 online registration for migrants

ಸಾರಾಂಶ

ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಚುನಾವಣಾ ಆಯೋಗ, ನಾಪತ್ತೆಯಾಗಿರುವ ಅಂದಾಜು 74 ಲಕ್ಷ ಮತದಾರರನ್ನು ಹುಡುಕಿಕೊಡಿ ಎಂದು ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡಿದೆ.

ನವದೆಹಲಿ: ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಚುನಾವಣಾ ಆಯೋಗ, ನಾಪತ್ತೆಯಾಗಿರುವ ಅಂದಾಜು 74 ಲಕ್ಷ ಮತದಾರರನ್ನು ಹುಡುಕಿಕೊಡಿ ಎಂದು ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡಿದೆ. ರಾಜ್ಯದಲ್ಲಿ ಅಕ್ರಮ ವಲಸಿಗರು, ಅಕ್ರಮ ಮತದಾರರ ಪಟ್ಟಿ ತೆರವಿಗೆ ಕಾರ್ಯಾಚರಣೆ ನಡೆಸುತ್ತಿರುವ ಹೊತ್ತಿನಲ್ಲೇ ಈ ಬೆಳವಣಿಗೆ ನಡೆದಿದೆ.

ಸೋಮವಾರ ಆಯೋಗವು 12 ಪಕ್ಷಗಳ ಪ್ರತಿನಿಧಿಗಳನ್ನು ಭೇಟಿಯಾಗಿದ್ದು, ‘ದಾಖಲೆಗಳಲ್ಲಿ ನಮೂದಾಗಿರುವ ವಿಳಾಸಗಳಲ್ಲಿ 43.93 ಲಕ್ಷ ಜನ ವಾಸವಿಲ್ಲ. ಅತ್ತ ನಮ್ಮಿಂದ ಫಾರಂಗಳನ್ನು ಪಡೆದುಕೊಂಡು ಹೋಗಿರುವ 29.62 ಲಕ್ಷ ಜನರ ಪತ್ತೆಯೇ ಇಲ್ಲ. ಒಟ್ಟು 74 ಲಕ್ಷ ಜನರ ಕುರುಹೇ ಸಿಗುತ್ತಿಲ್ಲ’ ಎಂದು ಮಾಹಿತಿ ನೀಡಿದೆ. ಜತೆಗೆ, ಜಿಲ್ಲಾಧಿಕಾರಿಗಳು ಮತ್ತು ಪಕ್ಷಗಳು ನೇಮಿಸಿದ ಸುಮಾರು 1.5 ಲಕ್ಷ ಬೂತ್ ಮಟ್ಟದ ಏಜೆಂಟ್‌ಗಳ ಮೂಲಕ ಈ ಮತದಾರರೊಂದಿಗೆ ಸಂಪರ್ಕ ಸಾಧಿಸಲು ಸಹಕರಿಸುವಂತೆ ವಿನಂತಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಆಯೋಗವು, ‘ಯಾವೊಬ್ಬ ಅರ್ಹ ಮತದಾರನೂ ತಪ್ಪಿಹೋಗಬಾರದು ಎಂಬ ಉದ್ದೇಶದಿಂದ, ಈ ಕೆಲಸದಲ್ಲಿ ಕೈಜೋಡಿಸುವಂತೆ ರಾಜಕೀಯ ಪಕ್ಷಗಳಲ್ಲಿ ಕೇಳಿಕೊಳ್ಳಲಾಗಿದೆ’ ಎಂದಿದೆ. ಆ.1ರಂದು ಕರಡು ಮತಪಟ್ಟಿ ಪ್ರಕಟವಾಗಲಿದೆ.

ಮೋದಿಯವರ ಸಲಹೆಯಂತೆಯೇ ಬಿಹಾರದಲ್ಲಿ 125 ಯುನಿಟ್ ಉಚಿತ ವಿದ್ಯುತ್

ಪ್ರಧಾನಿ ನರೇಂದ್ರ ಮೋದಿಯವರ ಸಲಹೆಯಂತೆಯೇ ಬಿಹಾರದಲ್ಲಿ 125 ಯುನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ಬಿಹಾರದಲ್ಲಿ ಈ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಗುರುವಾರವಷ್ಟೇ 125 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ನಿತೀಶ್ ಕುಮಾರ್ ಘೋಷಿಸಿದ್ದರು. ಅದರ ಬೆನ್ನಲ್ಲೇ, ಮೋದಿಯವರೇ ತಮಗೆ ಮಾರ್ಗದರ್ಶನ ನೀಡಿದ್ದು ಎಂದು ಬಹಿರಂಗಪಡಿಸಿದ್ದಾರೆ.

ಪಶ್ಚಿಮ ಚಂಪಾರಣ್ಯ ಜಿಲ್ಲೆಯ ಮೋತಿಹಾರಿಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಮೋದಿ ಜತೆ ವೇದಿಕೆ ಹಂಚಿಕೊಂಡು ಮಾತನಾಡಿದ ನಿತೀಶ್‌, ‘ಜನರು ಈಗ ವಿದ್ಯುತ್‌ಗಾಗಿ ಹಣ ಪಾವತಿಸುವ ಅಗತ್ಯವಿಲ್ಲ. ಪ್ರಧಾನಿ ಮೋದಿಯವರು ಸಲಹೆ ನೀಡಿದಂತೆಯೇ ನಾವು ಕೆಲಸ ಮಾಡುತ್ತಿದ್ದೇವೆ. ಅವರನ್ನು ನಾವು ತುಂಬಾ ಗೌರವಿಸುತ್ತೇವೆ. ನಾವು ಕರೆದಾಗಲೆಲ್ಲ ಅವರು ಬಿಹಾರಕ್ಕೆ ಬರುತ್ತಾರೆ’ ಎಂದರು.

 ಆರ್‌ಜೆಡಿ-ಕಾಂಗ್ರೆಸ್ ಮೈತ್ರಿಗೆ ಪರೋಕ್ಷ ಟಾಂಗ್ ನೀಡಿದ ಅವರು, ‘ಹಿಂದಿನ ಸರ್ಕಾರದ ಅವಧಿಯಲ್ಲಿ ಯಾವುದೇ ಯೋಜನೆಗೆ ಅನುದಾನ ನೀಡಿರಲಿಲ್ಲ. ಅಭಿವೃದ್ಧಿ ಹಾಗೂ ಮೂಲಸೌಕರ್ಯ ಯೋಜನೆಗಳು ನಡೆದಿರಲಿಲ್ಲ’ ಎಂದು ಕಿಡಿ ಕಾರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ