
ಪಟನಾ (ಅ.9): ಬಿಹಾರದ ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಬುಧವಾರ 25 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಇಲ್ಲಿನ ಇಂದಿರಾ ಭವನದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿದ್ದ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಉನ್ನತ ನಾಯಕರು ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದರು ಎಂದು ಗೊತ್ತಾಗಿದೆ. ಆದರೆ, ಮಿತ್ರಪಕ್ಷಗಳಾದ ಆರ್ಜೆಡಿ ಮತ್ತು ಎಡಪಕ್ಷಗಳೊಂದಿಗೆ ಸೀಟು ಹಂಚಿಕೆ ಮಾತುಕತೆ ಇನ್ನೂ ಅಂತಿಮಗೊಂಡಿಲ್ಲ.
ಪಟನಾ: ಆರ್ಜೆಡಿ ನಾಯಕ ತೇಜಸ್ವಿಯಾದವ್ ಬಿಹಾರದ 2 ವಿಧಾನಸಭೆ ಕ್ಷೇತ್ರಗಳಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಅವರು ರಾಘೋಪುರ ಹಾಗೂ ಫೂಲ್ ಪರಾಸ್ ಎಂಬ ಕ್ಷೇತ್ರಗಳಿಂದ ಸ್ಪರ್ಧಿಸುವ ಯೋಚನೆಯಲ್ಲಿದ್ದಾರೆ ಎಂದು ಮೂಲಗಳು ಹೇಳಿವೆ. ಆದರೆ ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಹೊರಬಿದ್ದಿಲ್ಲ. ಆರ್ಜೆಡಿ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಹಾಗೂ ಪಕ್ಷದ ನಾಯಕರು ಈ ಬಗ್ಗೆ ಸಭೆ ಸೇರಿ ನಿರ್ಣಯ ಕೈಗೊಳ್ಳಲಿದ್ದಾರೆ ಎಂದು ಅವು ಹೇಳಿವೆ. ತೇಜಸ್ವಿ ಅವರು ಆರ್ಜೆಡಿ-ಕಾಂಗ್ರೆಸ್ ಮಹಾಮೈತ್ರಿಕೂಟದ ಪ್ರಮುಖ ಮುಖವಾಗಿದ್ದು, ಸಿಎಂ ಆಗುವ ಆಸೆ ಹೊಂದಿದ್ದಾರೆ. ಚುನಾವಣೆ ನ.6 ಹಾಗೂ 11 ರಂದು ನಡೆಯಲಿದ್ದು, ನ.14ಕ್ಕೆ ಎಣಿಕೆ ನಡೆಯಲಿದೆ.
ಪಟನಾ: ಬಿಹಾರ ಚುನಾವಣೆಯ ಸೀಟು ಹಂಚಿಕೆ ಎನ್ಡಿಎಗೆ ತಲೆನೋವಾಗುವ ಸಾಧ್ಯತೆ ಇದೆ. ಕೂಟದ ಪಾಲುದಾರ ಪಕ್ಷವಾದ ಎಲ್ಜೆಪಿ ನೇತಾರ ಚಿರಾಗ್ ಪಾಸ್ವಾನ್ ಬಳಿಕ, ಹಮ್ ನಾಯಕ ಹಾಗೂ ಕೇಂದ್ರ ಸಚಿವ ಜೀತನ್ರಾಂ ಮಾಂಝಿ ಕೂಡ ಸೀಟು ಹಂಚಿಕೆ ಬಗ್ಗೆ ಬಂಡೇಳುವ ಮುನ್ಸೂಚನೆ ನೀಡಿದ್ದಾರೆ. ಮಾಂಝಿ ಅವರ ಪಕ್ಷಕ್ಕೆ ಕೇವಲ 5-6 ಸೀಟುಗಳನ್ನು ನೀಡುವ ಚಿಂತನೆಯನ್ನು ಕೂಟದ ಪ್ರಮುಖ ಪಕ್ಷಗಳಾದ ಜೆಡಿಯು-ಬಿಜೆಪಿ ಹೊಂದಿವೆ. ಆದರೆ ಇದಕ್ಕೆ ಬುಧವಾರ ಆಕ್ಷೇಪಿಸಿರುವ ಮಾಂಝಿ, 'ನಮಗೆ 15 ಸ್ಥಾನ ಕೊಡಬೇಕು. ಇಲ್ಲದಿದ್ದರೆ ಚುನಾವಣೆಗೆ ನಮ್ಮ ಪಕ್ಷ ಸ್ಪರ್ಧಿಸಲ್ಲ' ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ